ನಿಯಂತ್ರಣ ಮೀರಿದ ಕೊರೋನಾ| ಕೊರೋನಾ ನಿಯಂತ್ರಿಸಲು ಕಠಿಣ ಕ್ರಮ| ಇನ್ನೆರಡು ದಿನದಲ್ಲಿ ಲಾಕ್ ಡೌನ್ ಬಗ್ಗೆ ನಿರ್ಧಾರ ಎಂದ ಸಿಎಂ ಠಾಕ್ರೆ
ಮುಂಬೈ(ಏ.03): ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರು ಹಾಗೂ ಈ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆಡ. ಹೀಗಿರುವಾಗ ರಾಜ್ಯದಲ್ಲಿ ಮುಂದಿನ 15-20 ದಿನಗಳಲ್ಲಿ ಆರೋಗ್ಯ ಮೂಲಸೌಕರ್ಯಗಳ ಕೊರತೆ ಎದುರಾಗುವುದನ್ನು ಗಮನದಲ್ಲಿಟ್ಟುಕೊಂಡ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಇನ್ನೆರಡು ದಿನದಲ್ಲಿ ಮಹಾರಾಷ್ಟ್ರಾದ್ಯಂತ ಲಾಕ್ಡೌನ್ ಘೋಷಿಸುವ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದ್ದಾರೆ.
ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾದಿಂದಾಗಿ ಎದುರಾಗಿರುವ ಆತಂಕದ ವಿಚಾರವಾಗಿ ಮಾಹಿತಿ ನೀಡಿರುವ ಹಿರಿಯ ಅಧಿಕಾರಿಗಳು ಸರ್ಕಾರ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಿದೆ. ಅಲ್ಲದೇ ಲಾಕ್ಡೌನ್ ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಜನ ಸಂದಣಿ ನಿಯಂತ್ರಿಸುವ ಬಗ್ಗೆಯೂ ನಿರ್ಧರಿಸಲಿದೆ ಎಂದಿದ್ದಾರೆ.
ದೇಶದಲ್ಲಿಯೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗುತ್ತಿವೆ. ಸತತ ಮೂರು ವಾರಗಳಿಂದಲೂ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲೇ ಸಾಗಿವೆ. ಗುರುವಾರವೂ 43,183 ಪ್ರಕರಣಗಳು ದಾಖಲಾಗಿದ್ದು, 249 ಮಂದಿ ಸಾವನ್ನಪ್ಪಿದ್ದರು. ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದು ರಾಜ್ಯಕ್ಕೆ ಆತಂಕವನ್ನು ತಂದೊಡ್ಡಿದೆ.