
ನವದೆಹಲಿ(ಮೇ.17): ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಪಿ.ಚಿದಂಬರಂ ಅವರ ನಿವಾಸಗಳು ಸೇರಿದಂತೆ ಏಳು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ದಾಳಿಯ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.
ಸದ್ಯ ದೆಹಲಿ, ಮುಂಬೈ, ಚೆನ್ನೈ ಸೇರಿದಂತೆ ದೇಶದ 7 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳ ಶೋಧ ಕಾರ್ಯ ನಡೆಯುತ್ತಿದೆ. ಮೂಲಗಳ ಪ್ರಕಾರ, ಅವರ ಪುತ್ರ ಮತ್ತು ಲೋಕಸಭಾ ಸಂಸದ ಕಾರ್ತಿ ಚಿದಂಬರಂ ಕೂಡ ಸಿಬಿಐ ತಪಾಸಣೆಗೊಳಪಟ್ಟಿದ್ದಾರೆ.
ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಸಿಬಿಐ ದಾಳಿಯನ್ನು ಕಾರ್ತಿ ಚಿದಂಬರಂ ಕಚೇರಿ ಖಚಿತಪಡಿಸಿದೆ. ಮೂಲಗಳ ಪ್ರಕಾರ, ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯು 2010–14ರ ನಡುವೆ ವಿದೇಶಕ್ಕೆ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಅವರ ವಿರುದ್ಧ ಹೊಸ ಪ್ರಕರಣ ದಾಖಲಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾರ್ತಿ ಚಿದಂಬರಂ, ನನ್ನ ಮೇಲೆ ಎಷ್ಟು ಬಾರಿ ದಾಳಿ ನಡೆದಿದೆ ಎಂಬುದರ ಲೆಕ್ಕವೇ ಸಿಗುತ್ತಿಲ್ಲ. ಈ ಬಗ್ಗೆ ದಾಖಲಾತಿ ಇಡಬೇಕು ಎಂದಿದ್ದಾರೆ.
ಪ್ರಕರಣದ ಮಾಹಿತಿ
ಆಗಸ್ಟ್ 21, 2019 ರಂದು, ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಪಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು. ಅಕ್ಟೋಬರ್ 16, 2019 ರಂದು ತನ್ನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿತು. ಆರು ದಿನಗಳ ನಂತರ ಸಿಬಿಐ ದಾಖಲಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದರೂ, ಇಡಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಮುಂದುವರಿಯಬೇಕಾಗಿ ಬಂತು.
ಅಂತಿಮವಾಗಿ, ಡಿಸೆಂಬರ್ 4, 2019 ರಂದು ಇಡಿ ಪ್ರಕರಣದಲ್ಲಿ 100 ದಿನಗಳ ನಂತರ ಜಾಮೀನು ಪಡೆದು ಹೊರಬಂದರು. ಇತ್ತೀಚೆಗೆ, ವಿಶೇಷ ನ್ಯಾಯಾಲಯವು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಾರ್ಜ್ ಶೀಟ್ ನ್ನು ಪರಿಗಣನೆಗೆ ತೆಗೆದುಕೊಂಡಿತ್ತು. ಎಲ್ಲಾ ಆರೋಪಿಗಳ ವಿರುದ್ಧ ಪ್ರಕರಣದಲ್ಲಿ ಮುಂದುವರಿಯಲು ಸಾಕಷ್ಟು ಪುರಾವೆಗಳಿವೆ ಎಂದು ಹೇಳಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ