
ನವದೆಹಲಿ (ಜೂ.6): ಬ್ರಿಟನ್ನ ಯುನಿವರ್ಸಿಟಿ ಆಫ್ ಲಂಡನ್ನ ಬಿರ್ಕ್ಬೆಕ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ಅಧಿಕೃತ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾರಿ ಗದ್ದಲ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ದಮನ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾರ್ಯಕ್ರಮದಲ್ಲಿದ್ದ ಕೆಲವರು ಗೊಂದಲ ಸೃಷ್ಟಿಸಲು ಯತ್ನಿಸಿದರು. ಈ ಇಡೀ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ (High Commission of India), ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ನಡೆದುಕೊಳ್ಳುವ ಕನಿಷ್ಠ ಮರ್ಯಾದೆಯನ್ನು ಕೆಲವರು ಮರೆತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಯೊಂದರ ಬಳಿಕ ದೇಶದಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಂಬ ಆಂದೋಲನ ಮುಂಚೂಣಿಗೆ ಬಂದಿತ್ತು. ಇದೀಗ ದೂರದ ಲಂಡನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಅದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯೊಂದು ಭಾರಿ ಹಂಗಾಮಾ ಸೃಷ್ಟಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಜೂನ್ 4 ರಂದು ಬಿರ್ಕ್ಬೆಕ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ‘ಕೃತಕ ಬುದ್ಧಿಮತ್ತೆ (AI) ಮತ್ತು ಅಂತರರಾಷ್ಟ್ರೀಯ ಕಾನೂನು’ ಎಂಬ ವಿಷಯದ ಕುರಿತು ಅವರು ಅಲ್ಲಿ ನೆರೆದಿದ್ದ ಗಣ್ಯರನ್ನು ಉದ್ದೇಶಿಸಿ ಮಾತನಾಡಿದರು.
ಅವರ ಭಾಷಣದ ಮುಕ್ತಾಯದ ನಂತರ ಸಭಿಕರಿಗಾಗಿ ಪ್ರಶ್ನೋತ್ತರ ಅವಧಿಯನ್ನು (Q&A Session) ಇಡಲಾಗಿತ್ತು. ಈ ವೇಳೆ ಅಲ್ಲಿದ್ದ ಮಹಿಳೆಯೊಬ್ಬರು, ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಪ್ರಜಾಪ್ರಭುತ್ವದ ಮೇಲಿನ ಒತ್ತಡದ ಕುರಿತು ಪ್ರಶ್ನೆ ಎತ್ತಿದರು. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಭಾರತ ಹಾಗೂ ಅಂತರರಾಷ್ಟ್ರೀಯ ಮಟ್ಟದ ಹಲವು ಕಾನೂನು ತಜ್ಞರು ಭಾರತದಲ್ಲಿ ಸಮಾಜಗಳ ನಡುವೆ ಭಿನ್ನಾಭಿಪ್ರಾಯ ಮತ್ತು ದ್ವೇಷ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ, ಇದೇ ಧೋರಣೆ ಮುಖ್ಯ ನ್ಯಾಯಮೂರ್ತಿಗಳ ಭಾಷಣದಲ್ಲೂ ಎದ್ದು ಕಾಣುತ್ತಿದೆ ಎಂದು ಆ ಮಹಿಳೆ ವೀಡಿಯೊದಲ್ಲಿ ಆರೋಪಿಸುತ್ತಿರುವುದು ಕಂಡುಬಂದಿದೆ.
ಪ್ರಶ್ನೆ ಕೇಳುವ ನೆಪದಲ್ಲಿ ಆ ಮಹಿಳೆಯು ಮುಖ್ಯ ನ್ಯಾಯಮೂರ್ತಿಗಳಿಗೆ ಅವರು ಇತ್ತೀಚೆಗೆ ನೀಡಿದ್ದ ‘ಕಾಕ್ರೋಚ್’ (ಜಿರಳೆ) ಮತ್ತು ‘ಪ್ಯಾರಾಸೈಟ್’ (ಪರಾವಲಂಬಿ) ಸಂಬಂಧಿತ ವಿವಾದಾತ್ಮಕ ಹೇಳಿಕೆಯನ್ನು ನೆನಪಿಸಿ, ಅದರ ಮೇಲೆ ಪ್ರಶ್ನೆ ಮಾಡಲು ಮುಂದಾದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಕಾರ್ಯಕ್ರಮದ ಆಯೋಜಕರು ತಕ್ಷಣ ಮಧ್ಯಪ್ರವೇಶಿಸಿದರು. ಮಹಿಳೆಯನ್ನು ತಡೆದ ಆಯೋಜಕರು, ಇಂದಿನ ಮುಖ್ಯ ವಿಷಯವಾದ ಕೃತಕ ಬುದ್ಧಿಮತ್ತೆ ಮತ್ತು ಅಂತರರಾಷ್ಟ್ರೀಯ ಕಾನೂನಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಮಾತ್ರ ಕೇಳುವಂತೆ ಸೂಚಿಸಿದರು. ಉಳಿದ ಯಾವುದೇ ವಿಷಯಾಂತರ ಪ್ರಶ್ನೆಗಳಿಗೆ ಇಲ್ಲಿ ಉತ್ತರಿಸಲಾಗುವುದಿಲ್ಲ ಎಂದು ಸ್ಪಷ್ಟವಾಗಿ ನಿರಾಕರಿಸಿದರು.
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಎದುರೇ ನಡೆದ ಈ ಹೈಡ್ರಾಮಾದ ಕುರಿತು ಬ್ರಿಟನ್ನಲ್ಲಿರುವ ಭಾರತೀಯ ಹೈಕಮಿಷನ್ ತೀವ್ರ ಅಸಮಾಧಾನ ಮತ್ತು ಆಕ್ರೋಶ ಹೊರಹಾಕಿದೆ. ಇಷ್ಟು ಮಹತ್ವದ ಅಂತರರಾಷ್ಟ್ರೀಯ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು ಈ ರೀತಿ ಅಡ್ಡಿಪಡಿಸುವುದು ಸಾರ್ವಜನಿಕ ನಡವಳಿಕೆ ಮತ್ತು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಹೈಕಮಿಷನ್ ಆಕ್ಷೇಪಿಸಿದೆ.
"ಒಂದು ಪ್ರಜಾಪ್ರಭುತ್ವ ದೇಶದಲ್ಲಿ ಸೌಮ್ಯವಾದ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಆದರೆ ಯಾವುದೇ ಭಾವನೆಗಳು ಅಥವಾ ವಿರೋಧಗಳಿದ್ದರೂ ಅದನ್ನು ಅತ್ಯಂತ ಸಭ್ಯ ಮತ್ತು ಗೌರವಾನ್ವಿತ ರೀತಿಯಲ್ಲಿ ವ್ಯಕ್ತಪಡಿಸಬೇಕು. ವಿಶ್ವಸಂಸ್ಥೆ, ಪ್ರಮುಖ ವಿಶ್ವವಿದ್ಯಾಲಯಗಳು ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸಂವಾದ ನಡೆಸಲು ಅದರದ್ದೇ ಆದ ಒಂದು ಘನತೆ ಹಾಗೂ ಪದ್ಧತಿ ಇರುತ್ತದೆ. ಅದನ್ನು ಪ್ರತಿಯೊಬ್ಬರೂ ಪಾಲಿಸುವುದು ಅತ್ಯಗತ್ಯ. ಯಾವುದೇ ಜಾಗತಿಕ ಕಾರ್ಯಕ್ರಮದಲ್ಲಿ ಈ ರೀತಿಯಾಗಿ ಅಸಭ್ಯವಾಗಿ ನಡೆದುಕೊಂಡು ಅಡ್ಡಿಪಡಿಸುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣ ಖಂಡಿತಾ ಅಲ್ಲ" ಎಂದು ಭಾರತೀಯ ಹೈಕಮಿಷನ್ ಪ್ರತಿಕ್ರಿಯಿಸಿದೆ.
— India in the UK (@HCI_London) June 5, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ