
ತಿರುಪತಿ[ಮಾ.10]: ಕೊರೋನಾ ವೈರಸ್ ಹರಡುವಿಕೆ ತಡೆಯುವ ಉದ್ದೇಶದಿಂದ ತಿರುಮಲದ ವೆಂಕಟೇಶ್ವರ ದೇವಸ್ಥಾನ ಮಂಡಳಿ (ಟಿಟಿಡಿ) ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ‘ಕೆಮ್ಮು, ನೆಗಡಿ ಹಾಗೂ ಜ್ವರ ಇದ್ದರೆ ತಿರುಮಲಕ್ಕೆ ಬರಬೇಡಿ’ ಎಂದು ಭಕ್ತರಿಗೆ ಟಿಟಿಡಿ ಮನವಿ ಮಾಡಿಕೊಂಡಿದೆ.
‘ಕೆಮ್ಮು, ನೆಗಡಿ, ಜ್ವರ ಕಾಣಿಸಿಕೊಂಡರೆ ತಿರುಪತಿಗೆ ಬರುವುದನ್ನು ಭಕ್ತರು ಮುಂದೂಡಬೇಕು ಅಥವಾ ರದ್ದುಗೊಳಿಸಬೇಕು. ತಿರುಮಲದಲ್ಲಿ ಸದಾ ಜನಜಂಗುಳಿ ಇರುವ ಕಾರಣ ಸೋಂಕು ಬೇಗ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಭಕ್ತರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮಾರೆಡ್ಡಿ ಹೇಳಿದ್ದಾರೆ.
ಈ ನಡುವೆ, ದೇವಾಲಯಕ್ಕೆ ಆಗಮಿಸುವ ಭಕ್ತರ ಥರ್ಮಲ್ ಸ್ಕ್ರೀನಿಂಗ್ಗೆ ಕ್ರಮ ಕೈಗೊಳ್ಳಲಾಗಿದೆ. ಜ್ವರ ಬಾಧೆ ಇದ್ದ ಭಕ್ತರನ್ನು ವೆಂಕಟೇಶ್ವರ ವೈದ್ಯ ವಿಜ್ಞಾನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತದೆ ಎಂದು ಟಿಟಿಡಿ ಹೇಳಿಕೆ ಬಿಡುಗಡೆ ಮಾಡಿದೆ.
ಭಕ್ತರು ಮಾಸ್ಕ್ಗಳು ಹಾಗೂ ಹ್ಯಾಂಡ್ ಸ್ಯಾನಿಟೈಸರ್ಗಳನ್ನು ತರಬೇಕು. ಸೋಂಕು ಹರಡುವಿಕೆ ತಡೆಗೆ ಒಬ್ಬರಿಗೊಬ್ಬರು 3 ಅಡಿ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ.
ದೇವಸ್ಥಾನದ ಶುದ್ಧಿಗೂ ಆದ್ಯತೆ ನೀಡಲಾಗುತ್ತದೆ. ಪ್ರತಿ 2 ತಾಸಿಗೊಮ್ಮೆ ಆವರಣ ಸ್ವಚ್ಛತೆ ಮಾಡಲಾಗುತ್ತದೆ. ಪರಿಸ್ಥಿತಿ ಅವಲೋಕನಕ್ಕೆ ಸಮಿತಿ ರಚಿಸಲಾಗಿದೆ.
ಭಕ್ತಾದಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ (ಎಸ್ವಿಬಿಸಿ) ಹಾಗೂ ರೇಡಿಯೋಗಳಲ್ಲಿ ನಿರಂತರ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ