
ಡಾರ್ಜೀಲಿಂಗ್ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಡಾರ್ಜೀಲಿಂಗ್ ಬೆಟ್ಟಗಳಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದಾಗಿ ಮಕ್ಕಳು ಸೇರಿದಂತೆ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡ ದಾರುಣ ಘಟನೆ ನಡೆದಿದೆ.
ಕೇವಲ 12 ಗಂಟೆ ಅವಧಿಯಲ್ಲಿ 300 ಮಿ.ಮೀ.ಗೂ ಅಧಿಕ ಮಳೆಯಾಗಿದೆ. ಸರ್ಸಾಲಿ, ಜಸ್ಟಿರ್ಗಾಂ, ಮಿರಿಕ್ ಬಸ್ತಿ, ಧಾರ್ ಗಾವ್ (ಮೆಚಿ) ಮತ್ತು ಮಿರಿಕ್ ಸರೋವರ ಪ್ರದೇಶ ಸೇರಿದಂತೆ ಹಲವು ಸ್ಥಳಗಳಲ್ಲಿ ಸಾವುನೋವು ವರದಿಯಾಗಿದೆ. ಮಿರಿಕ್ ಮತ್ತು ಸುಖಿಯಾ ಪೋಖರಿ ಮೊದಲಾದೆಡೆ ಭೂಕುಸಿತವುಂಟಾಗಿದೆ. ಬಂಗಾಳ-ಸಿಕ್ಕಿಂ, ಡಾರ್ಜೀಲಿಂಗ್ -ಸಿಲಿಗುರಿ ಸೇರಿದಂತೆ ಪ್ರಮುಖ ಮಾರ್ಗ ಗಳಲ್ಲಿ ಭೂಕುಸಿತಸಂಭವಿಸಿದ್ದು, ರಸ್ತೆ ತಡೆಗೆ ಕಾರಣವಾಗಿದೆ. ಮಳೆ ಭೀಕರತೆಗೆ ಹಲವಾರು ಮನೆಗಳು ಕೊಚ್ಚಿಹೋಗಿದ್ದು, ದೂರದ ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.
ರಕ್ಷಣಾ ಕಾರ್ಯ, ಮುನ್ನೆಚ್ಚರಿಕೆ: ಪೊಲೀಸರು, ವಿಪತ್ತು ನಿರ್ವಹಣಾ ತಂಡ ಮತ್ತು ಸ್ಥಳೀಯ ಆಡಳಿತ ಸಂತ್ರಸ್ತರ ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ನಾಗರಕಟಾದ ಧಾರ್ಗಾಂವ್ನಲ್ಲಿ ಭೂಕುಸಿತದಿಂದಾಗಿ ನೆಲಸಮವಾದ ಮನೆಗಳ ಅವಶೇಷಗಳಡಿಯಿಂದ ಕನಿಷ್ಠ 40 ಜನರನ್ನು ರಕ್ಷಿಸಲಾಗಿದೆ. ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ, ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತವು ಡಾರ್ಜೀಲಿಂಗ್ನ ಟೈಗರ್ಹಿಲ್ ಮತ್ತು ರಾಕ್ ಗಾರ್ಡನ್ ಸೇರಿದಂತೆ ಪ್ರವಾಸಿ ತಾಣಗಳನ್ನು ಮುಚ್ಚಲು ನಿರ್ಧರಿಸಿದೆ. ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸೋಮವಾರದವರೆಗೂ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಸ್ಥಳೀಯರು ಮತ್ತು ಪ್ರವಾಸಿಗರಿಗಾಗಿ 9147889078 ಸಹಾಯವಾಣಿ ಆರಂಭಿಸಲಾಗಿದೆ.
ಇಂದು ಸಿಎಂ ಮಮತಾ ಭೇಟಿ : ಪರಿಸ್ಥಿತಿ ವೀಕ್ಷಣೆಗೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಲಿದ್ದಾರೆ.
ಪ್ರಧಾನಿ ಮೋದಿ ಸಂತಾಪ: ಪ್ರಧಾನಿ ನರೇಂದ್ರ ಮೋದಿ ಈ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಡಾರ್ಜೀಲಿಂಗ್ ಹಾಗೂ ನೇಪಾಳದಲ್ಲಿ ಭಾರಿ ಪ್ರವಾಹ ಸಂಭವಿಸಿರುವ ನಡುವೆ ಭೂತಾನ್ನಲ್ಲೂ ಪ್ರವಾಹ ಉಂಟಾಗಿದೆ. ಅಮೋಚು ನದಿಯ ಸುತ್ತಮುತ್ತಲ ಪ್ರದೇಶದಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ.
ಇದರ ಬೆನ್ನಲ್ಲೇ ಭೂತಾನ್ನ ರಕ್ಷಣಾ ಸಿಬ್ಬಂದಿ ಜತೆ ಭಾರತೀಯ ಸೇನೆ ಕೂಡ ಕೈ ಜೋಡಿಸಿದ್ದು, ರಕ್ಷಣಾ ಕಾರ್ಯ ಆರಂಭಿಸಿದೆ. ಪ್ರವಾಹದಲ್ಲಿ ಹಲವಾರು ಕುಟುಂಬಗಳು ಮತ್ತು ಕಾರ್ಮಿಕರು ಸಿಲುಕಿದ್ದು, ಹೆಲಿಕಾಪ್ಟರ್ ಮೂಲಕ ಅವರ ರಕ್ಷಣೆಯಲ್ಲಿ ಸೇನೆ ನಿರತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ