
ಭಾವನಗರ (ಗುಜರಾತ್) : ‘ಇತರ ದೇಶಗಳ ಮೇಲಿನ ಅವಲಂಬನೆಯೇ ಭಾರತದ ಬಹುದೊಡ್ಡ ಶತ್ರು. ಇದಕ್ಕೆ ಸ್ವಾವಲಂಬನೆಯೊಂದೇ ಪರಿಹಾರ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಉಭಯ ದೇಶಗಳ ಸಂಬಂಧದ ಮೇಲೆ ಕರಿನೆರಳು ಬೀರಿರುವ ನಡುವೆಯೇ ಮೋದಿ ಇಂಥ ಮಾತುಗಳನ್ನು ಆಡಿದ್ದಾರೆ.
ಇಲ್ಲಿ ನಡೆದ ‘ಸಮುದ್ರದಿಂದ ಸಮೃದ್ಧಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸುಮಾರು 34,200 ಕೋಟಿ ರು. ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
‘ಭಾರತ ವಿಶ್ವಭ್ರಾತೃತ್ವದ ಚೈತನ್ಯದೊಂದಿಗೆ ಮುನ್ನುಗ್ಗುತ್ತಿದೆ. ಇಂದು ಭಾರತಕ್ಕೆ ಜಗತ್ತಿನಲ್ಲಿ ಯಾವುದೇ ದೊಡ್ಡ ಶತ್ರುವಿಲ್ಲ. ಆದರೆ ನಿಜವಾದ ಅರ್ಥದಲ್ಲಿ, ಭಾರತದ ದೊಡ್ಡ ಶತ್ರುವೆಂದರೆ ಇತರ ದೇಶಗಳ ಮೇಲಿನ ಅವಲಂಬನೆ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಜಗತ್ತಿನ ಅತಿ ಹೆಚ್ಚು ಜನಸಂಖ್ಯೆಯುಳ್ಳ ರಾಷ್ಟ್ರ ಆತ್ಮನಿರ್ಭರವಾಗಬೇಕು’ ಎಂದು ಕರೆ ನೀಡಿದರು.
‘140 ಕೋಟಿ ಭಾರತೀಯರ ಭವಿಷ್ಯವನ್ನು ಬಾಹ್ಯ ಶಕ್ತಿಗಳಿಗೆ ಬಿಡಲಾಗುವುದಿಲ್ಲ ಅಥವಾ ರಾಷ್ಟ್ರೀಯ ಅಭಿವೃದ್ಧಿಯ ಸಂಕಲ್ಪವು ವಿದೇಶಿ ಅವಲಂಬನೆಯನ್ನು ಆಧರಿಸಿರಲು ಸಾಧ್ಯವಿಲ್ಲ. 140 ಕೋಟಿ ಜನಸಂಖ್ಯೆಯುಳ್ಳ ದೇಶವು ಇತರರ ಮೇಲೆ ಅವಲಂಬಿತವಾಗಿದ್ದರೆ, ಅದು ರಾಷ್ಟ್ರೀಯ ಸ್ವಾಭಿಮಾನದೊಂದಿಗೆ ರಾಜಿ ಮಾಡಿಕೊಂಡಂತೆ’ ಎಂದರು.
ಮುಂದಿನ ತಿಂಗಳು ಪ್ರಧಾನಿ ಮೋದಿ - ಡೊನಾಲ್ಡ್ ಟ್ರಂಪ್ ಭೇಟಿ
ನವದೆಹಲಿ: ಶೇ.50 ಸುಂಕ ಹೇರಿಕೆ ಬಳಿಕ ಹದಗೆಟ್ಟಿರುವ ಭಾರತ-ಅಮೆರಿಕ ನಡುವಿನ ಸಂಬಂಧ ಸುಧಾರಣೆಗೆ ಮಲೇಷ್ಯಾದಲ್ಲಿ ಮುಂದಿನ ತಿಂಗಳು ನಡೆಯಲಿರುವ 45ನೇ ಆಸಿಯಾನ್ ಸಮ್ಮೇಳನ ವೇದಿಕೆಯಾಗುವ ನಿರೀಕ್ಷೆ ಇದೀಗ ಗರಿಗೆದರಿದೆ.
ಸುಂಕ ವಿವಾದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜತೆಗೆ ಮುಖಾಮುಖಿ ಭೇಟಿಯಿಂದ ಅಂತರ ಕಾಯ್ದುಕೊಂಡು ಬಂದಿದ್ದ ಪ್ರಧಾನಿ ಮೋದಿ ಅವರು ಆಸಿಯಾನ್ ಸಮ್ಮೇಳನದಲ್ಲಿ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಮೋದಿ ಮತ್ತು ಟ್ರಂಪ್ ಈ ಸಮ್ಮೇಳನದ ನೆಪದಲ್ಲಿ ಪ್ರತ್ಯೇಕವಾಗಿ ಭೇಟಿಯಾಗಿ ಕೆಲಕಾಲ ಚರ್ಚೆ ನಡೆಸುವ ನಿರೀಕ್ಷೆಯೂ ಇದೆ. ಒಂದು ವೇಳೆ ಇದು ಸಾಧ್ಯವಾದರೆ ಅಮೆರಿಕದ ಪ್ರತಿಸುಂಕ ವಿವಾದದ ಬಳಿಕ ಹಳೆಯ ದೋಸ್ತಿಗಳಾದ ಮೋದಿ ಮತ್ತು ಟ್ರಂಪ್ ನಡುವಿನ ಮೊದಲ ಮುಖಾಮುಖಿ ಭೇಟಿ ಇದಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ