
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿಯ ವಿರುದ್ಧ ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ನೀಡಿರುವ ಮೌಲಾನಾ ಅಬ್ದುಲ್ಲಾ ಸಲೀಂ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ಸಂಬಂಧ ಬಲರಾಂಪುರ ಸೇರಿದಂತೆ ವಿವಿಧೆಡೆ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ವಿವಾದಾತ್ಮಕ ಹೇಳಿಕೆ ನೀಡಿದ ಬಿಹಾರ ಮೂಲದ ಮೌಲಾನಾ ಅಬ್ದುಲ್ಲಾ ಸಲೀಂ ವಿರುದ್ಧ ಬಲರಾಂಪುರ ಬಿಜೆಪಿ ಜಿಲ್ಲಾಧ್ಯಕ್ಷರು ದೂರು ನೀಡಿದ್ದು, ಅದರಂತೆ ಎಫ್ಐಆರ್ ದಾಖಲಾಗಿದೆ. ವಿಶೇಷವೆಂದರೆ, ಉತ್ತರ ಪ್ರದೇಶದಾದ್ಯಂತ ಸುಮಾರು 83 ಪೊಲೀಸ್ ಠಾಣೆಗಳಲ್ಲಿ ಮೌಲಾನಾ ವಿರುದ್ಧ ದೂರುಗಳು ಸಲ್ಲಿಕೆಯಾಗಿವೆ. ಹಿಂದೂ ಸಂಘಟನೆಗಳು, ಬಿಜೆಪಿ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಕೂಡಲೇ ಮೌಲಾನಾನನ್ನು ಬಂಧಿಸಬೇಕೆಂದು ಪಟ್ಟು ಹಿಡಿದಿವೆ.
ಮೌಲಾನಾ ಅಬ್ದುಲ್ಲಾ ಸಲೀಂ ಮುಖ್ಯಮಂತ್ರಿಗಳ ತಾಯಿಯ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಈ ವಿವಾದ ಉಂಟಾಗಿದೆ. ಇದು ಕೇವಲ ವೈಯಕ್ತಿಕ ಟೀಕೆಯಲ್ಲ, ಬದಲಾಗಿ ಮುಖ್ಯಮಂತ್ರಿಯವರ ತಾಯಿಗೆ ಮಾಡಿದ ಅಪಮಾನ ಎಂದು ಹಲವು ಸಾಮಾಜಿಕ ಕಾರ್ಯಕರ್ತರು ಕಿಡಿಕಾರಿದ್ದಾರೆ. ಈ ವಿಡಿಯೋ ಸೃಷ್ಟಿಸಿದ ಕಿಡಿ ಈಗ ರಾಜ್ಯಾದ್ಯಂತ ಕಿಚ್ಚು ಹಚ್ಚಿದೆ.
ಲಕ್ನೋದಲ್ಲಿ ಹೋರ್ಡಿಂಗ್ಸ್ ವಾರ್: ಪ್ರತಿಭಟನೆ ತೀವ್ರ
ರಾಜಧಾನಿ ಲಕ್ನೋದ ಹಜರತ್ಗಂಜ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ 'ಯೋಗಿಜಿಯ ತಾಯಿಯ ಅವಮಾನವನ್ನು ಹಿಂದೂ ಸಮಾಜ ಸಹಿಸುವುದಿಲ್ಲ' ಎಂಬ ಬರಹವಿರುವ ಬೃಹತ್ ಹೋರ್ಡಿಂಗ್ಗಳನ್ನು ಹಾಕಲಾಗಿದೆ. ಮಾರ್ಚ್ 7ರಂದು ಅಟಲ್ ಚೌಕ್ನಲ್ಲಿ ಜಮಾಯಿಸಿದ ನೂರಾರು ಯುವಕರು ಮೌಲಾನಾ ವಿರುದ್ಧ ಘೋಷಣೆ ಕೂಗಿ, ಆತನ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಂಧಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
ಪೊಲೀಸ್ ಆಡಳಿತವು ಮೌಲಾನಾನನ್ನು ಕೂಡಲೇ ಬಂಧಿಸದಿದ್ದರೆ ರಾಜ್ಯಾದ್ಯಂತ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ