
ಚಂಡೀಗಢ: ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಮಾನ್ಯತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವ ಸಂಬಂಧ ಪ್ರತಿಭಟನಾ ನಿರತ ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರ ಮಧ್ಯೆ 4ನೇ ಸುತ್ತಿನ ಮಾತುಕತೆ ಬಹುತೇಕ ಯಶಸ್ವಿಯಾಗಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಕುರಿತು ಕೇಂದ್ರ ಸರ್ಕಾರ ಹೊಸ ಆಫರ್ ನೀಡಿದ್ದು, ಈ ವಿಚಾರದ ಬಗ್ಗೆ ರೈತ ಸಂಘಟನೆಗಳು ಚಿಂತನೆ ನಡೆಸಲು ಮುಂದಾಗಿವೆ. ಹೀಗಾಗಿ ದೆಹಲಿಯ ಶಂಭು ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತಾತ್ಕಾಲಿಕ ವಿರಾಮ ದೊರಕಿದೆ.
ಈ ಮೊದಲು ನಡೆದ 3 ಸುತ್ತಿನ ಮಾತುಕತೆಯಲ್ಲಿ, ರೈತರ ಮೇಲಿನ ಕೇಸು ವಾಪಸ್, ಮೃತ ರೈತರಿಗೆ ಪರಿಹಾರ ವಿತರಣೆ ಮೊದಲಾದ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಸಮ್ಮತಿಸಿತ್ತು. ಆದರೆ ಕನಿಷ್ಠ ಖಾತರಿ ಬೆಲೆಗೆ ಕಾನೂನಿನ ಮಾನ್ಯತೆ, ರೈತರು, ಕೃಷಿ ಕಾರ್ಮಿಕರಿಗೆ ಪಿಂಚಣಿ ಮೊದಲಾದ ವಿಷಯಗಳ ಬಗ್ಗೆ ಶಂಭು ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮಧ್ಯೆ ಭಿನ್ನಾಭಿಪ್ರಾಯ ಮುಂದುವರೆದಿತ್ತು. ಭಾನುವಾರ ಮತ್ತೊಂದು ಸುತ್ತಿನ ಬಣಗಳು ಮಾತುಕತೆ ನಡೆಸಿದ್ದು, ಸರ್ಕಾರದ ಪರಿಹಾರದ ಬಗ್ಗೆ ಚಿಂತನೆ ನಡೆಸಲು ಮುಂದಾಗಿವೆ.
'ಇದು ರಾಮ ರಾಜ್ಯವೋ, ಹರಾಮ್ ರಾಜ್ಯವೋ..' ನಟ ಕಿಶೋರ್ ಟೀಕೆ!
ಇನ್ನು ಕೇಂದ್ರ ಸರ್ಕಾರವೂ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ರೂಪಿಸುತ್ತಿರುವ ಹೊಸ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಇಂದು ಮತ್ತು ನಾಳೆ ಈ ಬಗ್ಗೆ ಅಧ್ಯಯನ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ರೈತ ಸಂಘಟದ ಮುಖಂಡರು ಹೇಳಿದ್ದಾರೆ.
ಜೋಳ ಹತ್ತಿ ಹಾಗೂ ದ್ವಿದಳ ಧಾನ್ಯಗಳು ಸೇರಿ ಹಲವು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಬಗ್ಗೆ ಹೊಸ ಮಿತಿ ರಚಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ವೆಬ್ ಪೋರ್ಟಲ್ ಸ್ಥಾಪಿಸಲಿದೆ. ಹಾಗೂ ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲು ಯಾವುದೇ ಮಿತಿ ಇಲ್ಲ ಸೇರಿದಂತೆ ಹಲವು ಆಫರ್ಗಳನ್ನು ಕೇಂದ್ರ ಪ್ರತಿಭಟನಾನಿರತ ರೈತರಿಗೆ ತಿಳಿಸಿದೆ.
ರಾಮಮಂದಿರದಿಂದ ಏರಿದ ಮೋದಿ ಗ್ರಾಫ್ ಕೆಳಕ್ಕಿಳಿಸಲು ಪ್ರತಿಭಟನೆ, ರೈತ ನಾಯಕನ ವೈರಲ್ ವಿಡಿಯೋ!
ಈ ಸಭೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ಕೃಷಿ ಖಾತೆ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಖಾತೆ ಸಚಿವ ಪಿಯೂಶ್ ಗೋಯಲ್ ಹಾಗೂ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಭಾಗಿಯಾಗಿದ್ದರು. ಮತ್ತೊಂದೆಡೆ ಪಂಜಾಬ್ ಮತ್ತು ಹರ್ಯಾಣದ 200ಕ್ಕೂ ಹೆಚ್ಚು ರೈತ ಸಂಘಟನೆಗಳ ಪರವಾಗಿ ಹಲವು ರೈತ ನಾಯಕರು ಭಾಗಿಯಾಗಿದ್ದರು. ಈ ನಡುವೆ ದೆಹಲಿ ಚಲೋಗಾಗಿ ಆಗಮಿಸಿದ್ದ ರೈತರು ಪಂಜಾಬ್ ಮತ್ತು ಹರ್ಯಾಣದ ಗಡಿ ಭಾಗವಾದ ಶಂಭು ಬಳಿಯೇ ವಾಸ್ತವ್ಯ ಮುಂದುವರೆಸಿದ್ದಾರೆ. ಪ್ರತಿಭಟನೆ ಚರ್ಚೆ ಫಲಕೊಡದಿದ್ದರೆ ಮತ್ತೆ ದೆಹಲಿಗೆ ತೆರಳಲು ಉದ್ದೇಶಿಸಿದ್ದಾರೆ.
ಈ ಸಂಧಾನದ ನಂತರ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್, ನಾವು ಜೊತೆಯಾಗಿ ಬಹಳ ನಾವೀನ್ಯಪೂರ್ಣ ಹಾಗೂ ಔಟ್ ಆಫ್ ಬಾಕ್ಸ್ ಐಡಿಯಾಗಳನ್ನು ನೀಡಿದ್ದೇವೆ. ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ, ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರ್ಕೆಟಿಂಗ್ ಫೆಡರೇಶನ್ನಂತಹ ಸರ್ಕಾರವು ಉತ್ತೇಜಿಸಿದ ಸಹಕಾರಿ ಸಂಘಗಳು ಮುಂದಿನ 5 ವರ್ಷಗಳವರೆಗೆ ಒಪ್ಪಂದವನ್ನು ರೂಪಿಸುತ್ತವೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ಉತ್ಪನ್ನಗಳನ್ನು ಖರೀದಿಸುತ್ತೇವೆ. ಉತ್ಪನ್ನ ಖರೀದಿಯ ಪ್ರಮಾಣದಲ್ಲಿ ಯಾವುದೇ ಮಿತಿ ಇಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ