
ಬೆಂಗಳೂರು(ಜ.02): ಪ್ರಧಾನಿ ನರೇಂದ್ರ ಮೋದಿ ಇಂದು ತುಮಕೂರಿನ ಸಿದ್ಧಗಂಗಾ ಮಠಲಕ್ಕೆ ಖಾಸಗಿ ಭೇಟಿ ನೀಡಿದ್ದು, ಮಠದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.
ಈ ಮಧ್ಯೆ ಪ್ರಧಾನಿ ಮೋದಿ ಕರ್ನಾಟಕ ಭೇಟಿ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ 'ಗೋ ಬ್ಯಾಕ್ ಮೋದಿ' ಟ್ರೆಂಡ್ ಆಗಿದೆ.
ತುಮಕೂರಿಗೆ ಪ್ರಧಾನಿ ಮೋದಿ : ಸಿದ್ಧಗಂಗಾ ಮಠಕ್ಕೆ ಭೇಟಿ
ಪ್ರಮುಖವಾಗಿ ನೆರೆ ಪರಿಹಾರದಲ್ಲಿ ವಿಳಂಬ, ಕಳಸಾ ಬಂಡೂರಿ ವಿವಾದ ಹಾಗೂ ಬೆಳಗಾವಿ ಗಡಿ ವಿವಾದ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಕೇಂದ್ರ ಧ್ವನಿಯಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರಿಸಿತ್ತು. ಆದರೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸಿದೆ ಎಂದು ಕೆಲವರು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತ್ಯಜಿಸಿ ಬಿಜೆಪಿ ಸೇರಿದ ಶಾಸಕರಿಗೆ ತಲಾ 100 ಕೋಟಿ ರೂ. ನೀಡಲಾಗಿದೆ. ಅಂದರೆ 15 ಶಾಸಕರಿಗೆ ಒಟ್ಟು 1,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಆದರೆ ನೆರೆಪರಿಹಾರಕ್ಕೆ 8 ಲಕ್ಷಕ್ಕೂ ಅಧಿಕ ಜನಸಂಖ್ಯೆಗೆ ಕೇವಲ 1,800 ಕೋಟಿ ರೂ. ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಇದೇ ವೇಳೆ ಕೆಪಿಸಿಸಿ ಕೂಡ ಪ್ರಧಾನಿ ಮೋದಿ ಅವರ ರಾಜ್ಯ ಪ್ರವಾಸವನ್ನು ವಿರೋಧಿಸಿದ್ದು, ತುಮಕೂರಿಗೆ ಭೇಟಿ ನೀಡಿರುವ ಪ್ರಧಾನಿ ಜಿಲ್ಲೆಯ ಅಭಿವೃದ್ಧಿಗಾಗಿ ಈ ಹಿಂದೆ ನೀಡಿದ್ದ ಭರವಸೆಗಳು ಏನಾದವು ಎಂದು ಪ್ರಶ್ನಿಸಿದೆ.
ಪ್ರಧಾನಿ ಮೋದಿ ಈ ಹಿಂದೆ ತಮಿಳುನಾಡಿಗೂ ಭೇಟಿ ನೀಡಿದ್ದಾಗ 'ಗೋ ಬ್ಯಾಕ್ ಮೋದಿ' ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ