
ನವದೆಹಲಿ(ಜ.04): ಗುಟ್ಕಾ, ಪಾನ್ ಮಸಾಲಾ ಹಾಗೂ ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ಉತ್ಪಾದಿಸಿ, ರಹಸ್ಯವಾಗಿ ದೇಶವ್ಯಾಪಿ ತಲುಪಿಸುವ ಮೂಲಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಂಚಿಸುತ್ತಿದ್ದ ಜಾಲವೊಂದನ್ನು ಜಿಎಸ್ಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟಾರೆ 831.72 ಕೋಟಿ ರು. ತೆರಿಗೆ ವಂಚನೆಯಾಗಿರುವುದು ದೃಢಪಟ್ಟಿದೆ.
ಜಿಎಸ್ಟಿ ಅಡಿ ನೋಂದಣಿ ಮಾಡಿಕೊಳ್ಳದೆ, ಯಾವುದೇ ಸುಂಕವನ್ನೂ ಪಾವತಿಸದೆ ತಂಬಾಕು ಉತ್ಪನ್ನಗಳ ಘಟಕವನ್ನು ನಡೆಸಲಾಗುತ್ತಿತ್ತು. ಈ ಸಂಬಂಧ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ವಂಚನೆಯ ರೂವಾರಿಗಳನ್ನು ಪತ್ತೆ ಹಚ್ಚಿ ತೆರಿಗೆ ವಂಚನೆ ವಸೂಲಿ ಮಾಡಲು ತನಿಖೆ ಮುಂದುವರಿದಿದೆ ಎಂದು ಹಣಕಾಸು ಸಚಿವಾಲಯ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.
ವಶಪಡಿಸಿಕೊಳ್ಳಲಾದ ದಾಖಲೆಗಳು, ಜಪ್ತಿ ಮಾಡಲಾದ ಸರಕು, ಬಂಧಿತನ ತಪ್ಪೊಪ್ಪಿಗೆಯ ಆಧಾರದಲ್ಲಿ 831.72 ಕೋಟಿ ರು. ವಂಚನೆಯಾಗಿರುವುದು ಬೆಳಕಿಗೆ ಬಂದಿದೆ. ತನಿಖೆ ನಡೆಯುತ್ತಿದೆ. ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ ಗುಟ್ಕಾ/ಪಾನ್ ಮಸಾಲಾ/ತಂಬಾಕು ಉತ್ಪನ್ನಗಳ ಉತ್ಪಾದನೆ ನಡೆಯುತ್ತಿರುವುದು ಕಂಡುಬಂದಿದೆ. ಆ ಅಕ್ರಮ ಕಾರ್ಖಾನೆಯಲ್ಲಿ 65 ಕಾರ್ಮಿಕರು ದುಡಿಯುತ್ತಿದ್ದರು. ಗುಟ್ಕಾ ತಯಾರಾದ ಬಳಿಕ ರಹಸ್ಯವಾಗಿ ಅದನ್ನು ವಿವಿಧ ರಾಜ್ಯಗಳಿಗೆ ಸಾಗಿಸಲಾಗುತ್ತಿತ್ತು. ಅಕ್ರಮ ಘಟಕದಿಂದ ಮಾರಾಟಕ್ಕೆ ಸಿದ್ಧವಾಗಿದ್ದ ಗುಟ್ಕಾ ಹಾಗೂ ಸುಣ್ಣ, ಸಾದಾ ಕತ್ಥಾ, ತಂಬಾಕು ಎಲೆ ಮತ್ತಿತರ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 4.14 ಕೋಟಿ ರು. ಎಂಬ ಅಂದಾಜಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ದೆಹಲಿಯ ಜಿಎಸ್ಟಿ ವಲಯ 4327 ಕೋಟಿ ರು. ಜಿಎಸ್ಟಿ ವಂಚನೆಯನ್ನು ಪತ್ತೆ ಹಚ್ಚಿದ್ದು, 15 ಮಂದಿಯನ್ನು ಬಂಧಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ