ಹಫ್ತಾ ಗೇಟ್ CBIಗೆ; ಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಮಹಾ ಸರ್ಕಾರ!

By Suvarna NewsFirst Published Apr 6, 2021, 7:33 PM IST
Highlights

ಮುಂಬೈ ಮಾಜಿ ಪೊಲೀಸ್ ಆಯುಕ್ತರ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಹೈಕೋರ್ಟ್ ಅನಿಲ್ ದೇಶ್‌ಮುಖ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದೆ. ಈ ಆದೇಶ ಪ್ರಶ್ನಿಸಿ ಅನಿಲ್ ದೇಶ್‌ಮುಖ್ ಹಾಗೂ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಮುಂಬೈ(ಏ.06): ಮಹಾರಾಷ್ಟ್ರ ಸರ್ಕಾರದ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ. ಒಂದೆಡೆ ಕೊರೋನಾ ವೈರಸ್ ಮೀತಿ ಮೀರಿ ಹರಡುತ್ತಿದ್ದರೆ ಮತ್ತೊಂದೆಡೆ 100 ಕೋಟಿ ಹಫ್ತಾ ವಸೂಲಿ ಆರೋಪದಡಿ ಗೃಹ ಸಚಿವ ಅನಿಲ್ ದೇಶ್‌ಮುಖ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬೈ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದೀಗ ಅನಿಲ್ ದೇಶ್‌ಮುಖ್ ಮಾತ್ರವಲ್ಲ, ಮಹಾರಾಷ್ಟ್ರ ಸರ್ಕಾರ ಕೂಡ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಹಫ್ತಾ ವಸೂಲಿ ಪ್ರಕರಣದಲ್ಲಿ ಮೊದಲ ವಿಕೆಟ್ ಪತನ: ಮಹಾರಾಷ್ಟ್ರ ಗೃಹ ಸಚಿವ ರಾಜೀನಾಮೆ!

ಪ್ರತಿ ತಿಂಗಳು 100 ಕೋಟಿ ರೂಪಾಯಿ ಹಫ್ತಾ ವಸೂಲಿ ಮಾಡುವಂತೆ ಗೃಹ ಸಚಿವರು ಟಾರ್ಗೆಟ್ ಮಾಡುತ್ತಿದ್ದರು ಎಂದು  ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಂ ಬೀರ್ ಸಿಂಗ್ ಅನಿಲ್ ದೇಶ್‌ಮುಖ್ ವಿರುದ್ಧ ಆರೋಪ ಮಾಡಿದ್ದರು. ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಗಂಭೀರ ಆರೋಪವಾಗಿದ್ದು, ಸಿಬಿಐ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಇದೀಗ ಇದೇ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಹಾಗೂ ಅನಿಲ್ ದೇಶ್‌ಮುಖ್ ಪ್ರಶ್ನಿಸಿದ್ದಾರೆ.

ಹೈಕೋರ್ಟ್ ಆದೇಶವನ್ನು ರದ್ದು ಮಾಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಅನಿಲ್ ದೇಶ್‌ಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನು ದಿಲೀಪ್ ವಾಲ್ಸೆ ಪಾಟೀಲ್ ನೂತನ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

click me!