ನವದೆಹಲಿ: ಪ್ರಕರಣವೊಂದರಲ್ಲಿ ತಮ್ಮ ವಿರುದ್ಧ ಹೈಕೋರ್ಟ್ ಚಾಟೀ ಬೀಸಿದ್ದು ಮತ್ತು ದಂಡ ಹಾಕಿದ್ದನ್ನು ಪ್ರಶ್ನಿಸಿ ಉತ್ತರಪ್ರದೇಶದ ಗೌತಮಬುದ್ಧ ನಗರದ ಜಿಲ್ಲಾಧಿಕಾರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ನೌಕರರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದ ವಿದ್ಯಾರ್ಥಿ ನಾಯಕಿಯೊಬ್ಬರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ‘ಸರ್ಕಾರದಿಂದ ಸೃಷ್ಟಿಸಲ್ಪಟ್ಟ ಕಥೆಯ ಆಧಾರದಲ್ಲಿ ವಿದ್ಯಾರ್ಥಿ ಕೃತಿ ಚೌಧರಿಯನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿತ್ತು. ಅಲ್ಲದೆ ಆ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಸಿದ್ಧಪಡಿಸುವಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ವ್ಯಕ್ತಪಡಿಸಿದ ಅಸಮಾಧಾನವನ್ನು ಅವರ ಸೇವಾ ದಾಖಲೆಗಳಲ್ಲಿ ನಮೂದಿಸುವಂತೆ ಹಾಗೂ ಬಂಧನಕ್ಕೆ ಒಳಪಟ್ಟಿದ್ದಕ್ಕೆ ಪರಿಹಾರವಾಗಿ ಜಿಲ್ಲಾಧಿಕಾರಿ ಮೇಧಾರ ಸಂಬಳದಿಂದ 5 ಲಕ್ಷ ರು. ಪರಿಹಾರ ನೀಡುವಂತೆ ಆದೇಶಿಸಿತ್ತು. ಇದನ್ನು ಮೇಧಾ ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ.