
ಶ್ರೀನಗರ: ಜಮ್ಮು ಪ್ರದೇಶ ಜಿಲ್ಲಾ ನ್ಯಾಯಾಧೀಶರು ವಿವಾದಾತ್ಮಕ ಆದೇಶವನ್ನು ರದ್ದುಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಮತದಾನದ ಹಕ್ಕನ್ನು ನೀಡಿ ಚುನಾವಣಾ ಆಯೋಗ ಆದೇಶ ಮಾಡಿತ್ತು. ಇದರಿಂದ ಕಣಿವೆ ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ಆರ್ಟಿಕಲ್ 370ರ ಅಡಿ ಇದ್ದ ವಿಶೇಷ ಸವಲತ್ತನ್ನು ರದ್ದುಗೊಳಿಸಿದ ನಂತರ ಬೇರೆಡೆಯಿಂದ ಮತದಾರರನ್ನು ಕರೆತಂದು ರಾಜ್ಯವನ್ನು ತನ್ನ ತೆಕ್ಕೆಗೆ ಪಡೆಯಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಮೆಹಬೂಬಾ ಮುಫ್ತಿ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮತದಾರರನ್ನು ಬಿಜೆಪಿ ಆಮದು ಮಾಡಿಕೊಂಡು ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ಯತ್ನ ಮಾಡುತ್ತಿದೆ ಎಂದು ಆರೋಪಿಸಲಾಗಿತ್ತು. ಇದರ ಬೆನ್ನಲ್ಲೇ ಮಂಗಳವಾರ ಜಿಲ್ಲಾ ನ್ಯಾಯಾಧೀಶ ದಾಖಲೆಗಳಿಲ್ಲದಿದ್ದರೂ ಸ್ಥಳೀಯರಲ್ಲದವರನ್ನು ನೋಂದಾಯಿಸಿಕೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದರು. ಒಂದು ವರ್ಷಗಳಿಂದ ಕಾಶ್ಮೀರದಲ್ಲಿ ವಾಸಿಸುತ್ತಿದ್ದರೆ ಯಾವುದೇ ದಾಖಲೆಗಳು ಇಲ್ಲದಿದ್ದರೂ ಮತದಾನದ ಹಕ್ಕು ನೀಡುವಂತೆ ಮಾಡಿದ ಆದೇಶವನ್ನು ಈಗ ಹಿಂಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಚುನಾವಣಾ ಆಯೋಗ ಮಾಡಿದ್ದ ಆದೇಶ ಇನ್ನೂ ಜಾರಿಯಲ್ಲಿದೆ. ಸರಿಯಾದ ದಾಖಲೆಗಳಿದ್ದರೆ ಕಾಶ್ಮೀರೇತರ ನಾಗರಿಕರು ಮತದಾನದ ಹಕ್ಕು ಪಡೆಯಬಹುದು. ಚುನಾವಣಾ ಆಯೋಗದ ಅಂದಾಜಿನ ಪ್ರಕಾರ ಇದರಿಂದ ಸುಮಾರು 20-25 ಲಕ್ಷ ಹೊಸ ಮತದಾರರು ಸೃಷ್ಟಿಯಾಗಲಿದ್ದಾರೆ. ಅಂದರೆ ಸುಮಾರು 33% ಹೊಸ ಮತದಾರರು.
ಆಯೋಗದ ಆದೇಶಕ್ಕೆ ಆಕ್ರೋಶ:
ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಅಲ್ಲಿ ಯಾವುದೇ ಚುನಾವಣೆ ನಡೆದಿಲ್ಲ. ಹಾಗೂ, ಯಾವುದೇ ರಾಜಕೀಯ ಪಕ್ಷಗಳ ಸರ್ಕಾರ ಅಧಿಕಾರದಲ್ಲಿಲ್ಲ. ಕಳೆದ 4 ವರ್ಷಕ್ಕೂ ಹೆಚ್ಚು ಸಮಯದಿಂದ ಅಲ್ಲಿ ಯಾವುದೇ ಚುನಾವಣೆಯೂ ನಡೆದಿಲ್ಲ. ಆದರೆ, ಮುಂದಿನ ವರ್ಷ ಎಲೆಕ್ಷನ್ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ, ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ಸ್ಥಳೀಯರಲ್ಲದವರು ಸಹ ಇಲ್ಲಿ ಮತದಾನ ಮಾಡಲು ನೋಂದಣಿ ಮಾಡಲು ಅವಕಾಶ ಮಾಡಲಾಗಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಹಾಗೂ ಓಮರ್ ಅಬ್ದುಲ್ಲಾ ವಿರೋಧಿಸಿದ್ದು, ಇದು ಚುನಾವಣೆಗಳ ಮೇಲೆ ಪ್ರಭಾವ ಬೀರುವ ಅಪಾಯಕಾರಿ ಪ್ರಯತ್ನ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 2019 ರಲ್ಲಿ 370 ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಾಗಲಿದ್ದು, ಕಾಶ್ಮೀರೇತರರಿಗೆ ಮತ ಚಲಾಯಿಸಲು ಮತ್ತು ಭೂಮಿಯನ್ನು ಹೊಂದಲು ಸಂವಿಧಾನವನ್ನು ಬದಲಿಸಿದ ನಂತರ ಮೊದಲ ಬಾರಿಗೆ ಸ್ಥಳೀಯರಲ್ಲದವರು ಸಹ ಮತದಾರರಾಗಿ ನೋಂದಾಯಿಸಲು ಅನುವು ಮಾಡಿಕೊಡುತ್ತದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಇನ್ಮುಂದೆ ಸ್ಥಳೀಯರಲ್ಲದವರಿಗೂ ಮತ ಹಕ್ಕು..! ಮುಫ್ತಿ ವಿರೋಧ
ಈ ಸಂಬಂಧ ವರದಿಗಾರರಿಗೆ ಮಾಹಿತಿ ನೀಡಿದ ಜಮ್ಮು ಹಾಗೂ ಕಾಶ್ಮೀರ ಮುಖ್ಯ ಚುನಾವಣಾ ಅಧಿಕಾರಿ ಹಿರ್ದೇಶ್ ಕುಮಾರ್, ಚುನಾವಣೆಗೆ ಮುನ್ನ 20 ಲಕ್ಷಕ್ಕೂ ಅಧಿಕ ಹೊಸ ಮತದಾರರು ಈ ಪ್ರದೇಶದಲ್ಲಿ ನೋಂದಣಿಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇದರಿಂದ ಮತದಾರರ ಸಂಖ್ಯೆಯಲ್ಲಿ ಶೇಕಡ 33 ಕ್ಕೂ ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ, ಈ ಕೇಂದ್ರಾಡಳಿತ ಪ್ರದೇಶದಲ್ಲಿ 76 ಲಕ್ಷ ಮತದಾರರಿದ್ದಾರೆ.
370ನೇ ವಿಧಿಯನ್ನು ತೆಗೆದುಹಾಕಿದ ಬಳಿಕ, ಈ ಮೊದಲು ಮತ ಹಾಕಲು ಸಾಧ್ಯವಿಲ್ಲದವರು ಸಹ ಈಗ ಮತದಾರರಾಗಿ ನೋಂದಣಿ ಸಲ್ಲಿಸಬಹುದು. ಈ ಹಿನ್ನೆಲೆ ಕಾಶ್ಮೀರಿಯಲ್ಲದವರು ಸೇರಿ ಮತದಾರರ ಅಂತಿಮ ಪಟ್ಟಿಯಲ್ಲಿ 20 - 25 ಲಕ್ಷ ನೂತನ ಮತದಾರರು ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಹಿರ್ದೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ, ದೇಶದ ಇತರೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಂತೆ ಜಮ್ಮು ಹಾಗೂ ಕಾಶ್ಮೀರದಲ್ಲಿ ವಾಸಿಸುತ್ತಿರುವ ಹಾಗೂ ಕೆಲಸ ಮಾಡುತ್ತಿರುವ ಯಾರಾದರೂ ಅಲ್ಲಿ ಇನ್ಮುಂದೆ ಮತ ಹಾಕಬಹುದಾಗಿದೆ.
ಆದರೆ, ಚುನಾವಣಾ ಆಯೋಗದ ಈ ನಡೆಗೆ ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಪ್ರದೇಶದಲ್ಲಿ ಬಿಜೆಪಿಗೆ ಸಿಗುವ ಬೆಂಬಲದ ಬಗ್ಗೆ "ಅಭದ್ರತೆ" ಯಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಹೇಳಿದ್ದಾರೆ. "ಜಮ್ಮು ಹಾಗು ಕಾಶ್ಮೀರದ ನಿಜವಾದ ಮತದಾರರ ಬೆಂಬಲದ ಬಗ್ಗೆ ಬಿಜೆಪಿಯು ಎಷ್ಟು ಅಸುರಕ್ಷಿತವಾಗಿದೆ ಎಂದರೆ ಅದು ಸ್ಥಾನಗಳನ್ನು ಗೆಲ್ಲಲು ತಾತ್ಕಾಲಿಕ ಮತದಾರರನ್ನು ಆಮದು ಮಾಡಿಕೊಳ್ಳುವ ಅಗತ್ಯವಿದೆಯೇ..? ಜಮ್ಮು ಹಾಗೂ ಕಾಶ್ಮೀರದ ಜನರಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶ ನೀಡಿದಾಗ ಇವುಗಳಲ್ಲಿ ಯಾವುದೂ ಬಿಜೆಪಿಗೆ ಸಹಾಯ ಮಾಡುವುದಿಲ್ಲ" ಎಂದೂ ಮಾಜಿ ಮುಖ್ಯಮಂತ್ರಿ ಟೀಕೆ ಮಾಡಿದ್ದಾರೆ.
ಇದನ್ನೂ ಓದಿ: ಕಾಶ್ಮೀರಕ್ಕೆ 25 ಲಕ್ಷ ಮತದಾರರ ಸೇರ್ಪಡೆ ಸುಳ್ಳು:ವಿವಾದಕ್ಕೆ ತೆರೆ ಎಳೆದ ಕಣಿವೆ ಆಡಳಿತ
ಇನ್ನೊಂದೆಡೆ, ಮತ್ತೊಬ್ಬರು ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ಬಿಜೆಪಿ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರುವತ್ತ ಗಮನ ಹರಿಸಿದೆ ಎಂದು ಆರೋಪಿಸಿದ್ದಾರೆ. "ಸ್ಥಳೀಯರಲ್ಲದವರಿಗೆ ಮತ ಚಲಾಯಿಸಲು ಅವಕಾಶ ನೀಡುವುದು ಅಂದರೆ ನಿಸ್ಸಂಶಯವಾಗಿ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರುವುದು. ಸ್ಥಳೀಯರನ್ನು ಬಲಹೀನಗೊಳಿಸಲು ಕಬ್ಬಿಣದ ಮುಷ್ಟಿಯೊಂದಿಗೆ ಜಮ್ಮು ಹಾಗೂ ಕಾಶ್ಮೀರದ ಆಡಳಿತವನ್ನು ಮುಂದುವರಿಸುವುದು ನಿಜವಾದ ಗುರಿಯಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ. ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ನೀತಿಗಳನ್ನು ಟೀಕಿಸುವಾಗ ನಾಜಿ ಜರ್ಮನಿ ಮತ್ತು ಪ್ಯಾಲೆಸ್ತೀನ್ ಅನ್ನು ಉಲ್ಲೇಖಿಸಿದರು. ಅಲ್ಲದೆ, ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಹಿಂಬಾಗಿಲಿನ ಮೂಲಕ 25 ಲಕ್ಷ ಬಿಜೆಪಿ ಮತದಾರರನ್ನು ತರುವ ಪ್ರಯತ್ನ ಮಾಡುತ್ತಿದೆ ಎಂದೂ ಕಿಡಿ ಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ