
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಅವರ ಮಗಳು ಕಯಲ್ವಿಳಿ ಅಳಗಿರಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಎಸ್ಬಿಐ ಬ್ಯಾಂಕ್ ಮ್ಯಾನೇಜರ್ಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಪೊಲೀಸರು ಕಯಲ್ವಿಳಿ ಅವರನ್ನು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿ, ಬಂಧನವನ್ನು ಅಧಿಕೃತವಾಗಿ ದಾಖಲಿಸಿಕೊಂಡರು. ನಂತರ, ಅವರನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು. ಪೊಲೀಸರು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಮತ್ತು ಅನುಮತಿ ಇಲ್ಲದೆ ಚೆನ್ನೈ ನಗರವನ್ನು ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.
ಕೆಲವು ದಿನಗಳ ಹಿಂದೆ, ಕಯಲ್ವಿಳಿ ಅವರು ಎಸ್ಬಿಐ ಅಡ್ಯಾರ್ ಶಾಖೆಯ ಮ್ಯಾನೇಜರ್ಗೆ ಥಳಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ ಆಗಿದ್ದವು. ಈ ವಿಡಿಯೋ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಇದೀಗ ಅವರನ್ನು ಬಂಧಿಸಿದ್ದಾರೆ.
ಚೆನ್ನೈನ ಅಡ್ಯಾರ್ನಲ್ಲಿರುವ ಕಯಲ್ವಿಳಿ ಮಾಲೀಕತ್ವದ ಕಟ್ಟಡದಲ್ಲೇ ಎಸ್ಬಿಐ ಶಾಖೆ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡದ ಲಿಫ್ಟ್ನಲ್ಲಿ ದೋಷವಿತ್ತು. ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಈ ಮೊದಲೇ ಕಟ್ಟಡದ ಉಸ್ತುವಾರಿ ನೋಡಿಕೊಳ್ಳುವವರಿಗೆ ಮಾಹಿತಿ ನೀಡಿದ್ದರು. ಕಟ್ಟಡಕ್ಕೆ ಕಯಲ್ವಿಳಿ ಬಂದಿದ್ದಾಗ, ಮ್ಯಾನೇಜರ್ ಲಿಫ್ಟ್ ಸಮಸ್ಯೆಯನ್ನು ನೇರವಾಗಿ ಅವರ ಗಮನಕ್ಕೆ ತಂದರು. ಈ ವೇಳೆ ಮಾತಿಗೆ ಮಾತು ಬೆಳೆದು, ಕೋಪಗೊಂಡ ಕಯಲ್ವಿಳಿ ಮ್ಯಾನೇಜರ್ ಮುಖಕ್ಕೆ ಹೊಡೆದಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ನಂತರ ಬಹಿರಂಗಗೊಂಡಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ