* ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ, ಚುನಾವಣೆ?
* ಚುನಾವಣೆ ನಡೆಸುವ ನಿಟ್ಟಿನಲ್ಲಿ ಸಿದ್ಧತೆ ಆರಂಭ
* ರಾಜ್ಯದ ಸ್ಥಾನಮಾನದ ಬಗ್ಗೆ ಕೇಂದ್ರದಿಂದ ಚರ್ಚೆ ಸಾಧ್ಯತೆ
ಶ್ರೀನಗರ(ಜೂ.14): ಜಮ್ಮು- ಕಾಶ್ಮೀರಕ್ಕೆ ಪುನಃ ರಾಜ್ಯದ ಸ್ಥಾನಮಾನ ಕಲ್ಪಿಸುವ ಹಾಗೂ ಚುನಾವಣೆಗಳನ್ನು ನಡೆಸುವ ನಿಟ್ಟಿನಿಂದ ಕೇಂದ್ರ ಸರ್ಕಾರ ರಾಜಕೀಯ ಪಕ್ಷಗಳ ಜೊತೆ ಸದ್ಯದಲ್ಲೇ ಮಾತುಕತೆಯನ್ನು ಆರಂಭಿಸುವ ಸಾಧ್ಯತೆ ಇದೆ.
ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿಲ್ಲ. ಆದರೆ, ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಮರಳಿ ಸ್ಥಾಪಿಸುವ ನಿಟ್ಟಿನಿಂದ ರಚನೆಯಾದ 7 ರಾಜಕೀಯ ಪಕ್ಷಗಳನ್ನು ಒಳಗೊಂಡ ಗುಪ್ಕಾರ್ ಮೈತ್ರಿಕೂಟ ಚುನಾವಣೆ ಪ್ರಕ್ರಿಯೆ ಆರಂಭಿಸುವ ನಿಟ್ಟಿನಲ್ಲಿ ಮಾತುಕತೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಸುಳಿವು ನೀಡಿದೆ. ಪ್ರಮುಖ ರಾಜಕೀಯ ಪಕ್ಷ ನ್ಯಾಷನಲ್ ಕಾÜ್ಫರೆನ್ಸ್ ಕೂಡ ಕೇಂದ್ರದ ಜೊತೆಗೆ ಮಾತುಕತೆಗೆ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ.
2018ರಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿತ್ತು. ಬಳಿಕ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ರದ್ದುಗೊಳಿಸಿತ್ತು. ತದನಂತರದಲ್ಲಿ ರಾಜ್ಯದ ಸ್ಥಾನಮಾನ ಕಳೆದುಕೊಂಡ ಜಮ್ಮು- ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ.