ದೆಹಲಿಯಲ್ಲಿಂದು ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಧಾನ ಸಭೆ..!

By Kannadaprabha NewsFirst Published Dec 14, 2022, 7:30 AM IST
Highlights

ಇಂದು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ, ದೆಹಲಿಯ ಕೇಂದ್ರ ಗೃಹ ಸಚಿವರ ನಿವಾಸದಲ್ಲಿ ಸಭೆ, ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಭಾಗಿ

ನವದೆಹಲಿ(ಡಿ.14): ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬುಧವಾರ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.

ಅಮಿತ್‌ ಶಾ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವರ ನಿವಾಸದಲ್ಲಿ ನಡೆಯುವ ಈ ಸಭೆಯಲ್ಲಿ ಕರ್ನಾಟಕ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಪಾಲ್ಗೊಳ್ಳಲಿದ್ದಾರೆ. ಉಭಯ ರಾಜ್ಯಗಳ ನಡುವಿನ ಗಡಿಯಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಸಂಜೆ 7 ಗಂಟೆಗೆ ಸಭೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿಯವರು ಬುಧವಾರ ಸಂಜೆ 4 ಗಂಟೆಗೆ ದೆಹಲಿಗೆ ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗಾವಿ ಗಡಿ ವಿವಾದ ಹಳೇ ವಿವಾದಕ್ಕೆ ಮರುಜೀವ, ನಿಪ್ಪಾಣಿ ನಗರಸಭೆ ಮೇಲಿನ ಭಗವಾ ಧ್ವಜ ತೆರವಿಗೆ ಆಗ್ರಹ

ಮಹಾರಾಷ್ಟ್ರ ಸಂಸದೆ ಸುಪ್ರೀಂ ಸುಳೆ ನೇತೃತ್ವ ದಲ್ಲಿ ಮಹಾರಾಷ್ಟ್ರ ಸಂಸದರು ಕಳೆದ ವಾರ ಸಂಸತ್‌ ಭವನದಲ್ಲಿ ಅಮಿತ್‌ ಶಾ ಅವರನ್ನು ಭೇಟಿಯಾಗಿ, ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದರು. ಮಹಾರಾಷ್ಟ್ರ ಮತ್ತು ಕರ್ನಾಟಕ ಎರಡೂ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರಗಳು ಅಧಿಕಾರದಲ್ಲಿವೆ. ಹೀಗಾಗಿ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೂಡಲೇ ಮಧ್ಯಪ್ರವೇಶ ಮಾಡಿ, ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ್ದರು.

ಗಡಿ ವಿಚಾರವಾಗಿ ನಾನು ನಮ್ಮ ನಿಲುವಿನ ಬಗ್ಗೆ ತಿಳಿಸುವೆ: ಸಿಎಂ

ಮೈಸೂರು: ಗಡಿ ವಿವಾದ ವಿಚಾರವಾಗಿ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬುಧವಾರ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ನಾನು ದೆಹಲಿಗೆ ತೆರಳುತ್ತಿದ್ದು, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Border Dispute: ಗಡಿ ವಿವಾದ ವಿಚಾರಕ್ಕೆ ಉಭಯ ರಾಜ್ಯ ಮುಖ್ಯಮಂತ್ರಿಗಳ ಸಭೆ ಕರೆದ ಅಮಿತ್‌ಶಾ

ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗಡಿ ವಿವಾದ ಪ್ರಕರಣ ಕುರಿತು ಸುಪ್ರೀಂಕೋರ್ಟ್‌ನಲ್ಲಿರುವ ವರದಿ, ಗಡಿ ವಿಚಾರದ ಕುರಿತಾದ ಕಾನೂನು ನಿಯಮಗಳ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ, ಈ ವಿಚಾರದ ಬಗ್ಗೆ ನಾನು ಎಲ್ಲಾ ಸಿದ್ಧತೆ ನಡೆಸಿಯೇ ದಿಲ್ಲಿಗೆ ತೆರಳುತ್ತಿದ್ದೇನೆ. ಭೇಟಿ ವೇಳೆ, ಗೃಹ ಸಚಿವರು ಈ ಬಗ್ಗೆ ಪ್ರಸ್ತಾಪ ಮಾಡಿದರೆ ಅವರ ಜೊತೆ ಚರ್ಚಿಸುತ್ತೇನೆ ಎಂದರು.
 

click me!