
ಕೋಲ್ಕತ್ತಾ (ಮೇ.6): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದು, 15 ವರ್ಷಗಳ ಆಡಳಿತದ ನಂತರ ತೃಣಮೂಲ ಕಾಂಗ್ರೆಸ್ (TMC) ಅಧಿಕಾರ ಕಳೆದುಕೊಂಡಿದೆ. ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ಇದೊಂದು "ಬಲವಂತದ ಸೋಲು" ಎಂದು ಬಣ್ಣಿಸಿದ್ದಾರೆ. ಮೌಖಿಕವಾಗಿ ನಾವು ಸೋತಿರಬಹುದು ಆದರೆ ನೈತಿಕವಾಗಿ ನಾವೇ ಗೆದ್ದಿದ್ದೇವೆ ಎಂದು ಹೇಳಿರುವ ಅವರು, ತಾವು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಬೇಕಿದ್ದರೆ ಅವರು ನನ್ನನ್ನು ವಜಾ ಮಾಡಲಿ ಎಂದು ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಚುನಾವಣಾ ಆಯೋಗ ಮತ್ತು ಕೇಂದ್ರ ಪಡೆಗಳು ನೇರವಾಗಿ ಬಿಜೆಪಿಯ ಪರವಾಗಿ ಕೆಲಸ ಮಾಡಿವೆ ಎಂದು ಆರೋಪಿಸಿರುವ ಅವರು, ವಿಧಾನಸಭೆಯ ಮೊದಲ ದಿನ ಎಲ್ಲರೂ ಕಪ್ಪು ಬಟ್ಟೆ ಧರಿಸುವ ಮೂಲಕ ಈ ದಿನವನ್ನು "ಕರಾಳ ದಿನ" ಎಂದು ಆಚರಿಸುವಂತೆ ಕರೆ ನೀಡಿದ್ದಾರೆ.
'ಲವಂತವಾಗಿ ಸೋಲಿಸಲಾಯಿತು. ಪಶ್ಚಿಮ ಬಂಗಾಳ ಪೊಲೀಸರು, ಸಿಆರ್ಪಿಎಫ್, ಬಿಜೆಪಿ ಪರ ಕೆಲಸ ಮಾಡುವ ಮುಖ್ಯ ಚುನಾವಣಾ ಅಧಿಕಾರಿ ಮತ್ತು ಇಸಿಐ ಅನ್ನು ನಾನು ಖಂಡಿಸುತ್ತೇನೆ. 1500 ಕ್ಕೂ ಹೆಚ್ಚು ಪಕ್ಷದ ಕಚೇರಿಗಳನ್ನು ಕಂಟ್ರೋಲ್ಗೆ ತೆಗೆದುಕೊಳ್ಳಲಾಯಿತು. ನನ್ನನ್ನು ಗದರಿಸಲಾಯಿತು ಮತ್ತು ತಳ್ಳಲಾಯಿತು. ನನಗೆ ಎದೆ ನೋವು ಇತ್ತು. ಇದು ಚುನಾವಣೆಯಲ್ಲ, ಆದರೆ ದೌರ್ಜನ್ಯ' ಎಂದು ಮಮತಾ ಬ್ಯಾನರ್ಜಿ ಪಕ್ಷದ ಸಭೆಯಲ್ಲಿ ಹೇಳಿದ್ದಾರೆ ಎಂದು ಎಐಟಿಸಿ ವರದಿ ಮಾಡಿದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಬಹುಮತ ಸಾಧಿಸಿದ್ದು, ಟಿಎಂಸಿ ಕೇವಲ 80 ಸ್ಥಾನಗಳಿಗೆ ಕುಸಿದಿದೆ. ಸ್ವತಃ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಕ್ಷೇತ್ರದಲ್ಲಿ ಸುುವೇಂದು ಅಧಿಕಾರಿಯವರ ವಿರುದ್ಧ ಸುಮಾರು 15,000 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಸುಮಾರು 90 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಮತ್ತು 1500ಕ್ಕೂ ಹೆಚ್ಚು ಪಕ್ಷದ ಕಚೇರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಮತಾ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಿಂದ ಪ್ರಧಾನಿ ಮತ್ತು ಗೃಹ ಸಚಿವರು ಈ ದೌರ್ಜನ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಕಿಡಿಕಾರಿರುವ ಅವರು, ಪಕ್ಷಕ್ಕೆ ದ್ರೋಹ ಮಾಡಿದವರನ್ನು ತಕ್ಷಣವೇ ಹೊರಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸದ್ಯ ಪಶ್ಚಿಮ ಬಂಗಾಳದಲ್ಲಿ ದಶಕಗಳ ನಂತರ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದ್ದು, ಮೇ 9 ರಂದು ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭ ನಡೆಯುವ ಸಾಧ್ಯತೆಯಿದೆ. ಸೋಲಿನ ನಡುವೆಯೂ ಮಮತಾ ಬ್ಯಾನರ್ಜಿ ಅವರು ಇಂಡಿಯಾ (INDIA) ಮೈತ್ರಿಕೂಟದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಮುಂಬರುವ ದಿನಗಳಲ್ಲಿ ಮೈತ್ರಿಕೂಟವನ್ನು ಇನ್ನಷ್ಟು ಬಲಿಷ್ಠಗೊಳಿಸುವುದಾಗಿ ಘೋಷಿಸಿದ್ದಾರೆ. ತಾವು ಈಗ "ಮುಕ್ತ ಹಕ್ಕಿ" (Free Bird) ಎಂದು ಹೇಳಿಕೊಂಡಿರುವ ಮಮತಾ, ಅಧಿಕಾರ ಇರಲಿ ಇಲ್ಲದಿರಲಿ ಜನರ ಪರವಾಗಿ ತಮ್ಮ ಹೋರಾಟ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ