
ಪಟನಾ(ಮೇ.08): ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಮುಸ್ಲಿಮರಿಗೆ ಪಾಲು ನೀಡುವ ವಿಚಾರ ದೇಶಾದ್ಯಂತ ಚುನಾವಣಾ ಪ್ರಚಾರದ ಸರಕಾಗಿರುವ ಸಮಯದಲ್ಲೇ ಬಿಹಾರದ ಆರ್ಜೆಡಿ ನಾಯಕ ಲಾಲುಪ್ರಸಾದ್ ಯಾದವ್ ‘ಮುಸ್ಲಿಮರಿಗೆ ಪೂರ್ಣ ಮೀಸಲಾತಿ ಸಿಗಬೇಕು’ ಎಂದು ಹೇಳುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ಲಾಲು ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದು, ‘ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗಿರುವವರು ಮುಸ್ಲಿಂ ಮೀಸಲಾತಿಯ ಪರ ಮಾತನಾಡುತ್ತಿದ್ದಾರೆ. ಇಂಡಿಯಾ ಒಕ್ಕೂಟಕ್ಕೆ ತುಷ್ಟೀಕರಣದಿಂದ ಆಚೆ ಏನೂ ಕಾಣಿಸುವುದಿಲ್ಲ. ಅವರು ಎಸ್ಸಿ, ಎಸ್ಟಿ ಹಾಗೂ ಒಬಿಸಿ ಮೀಸಲನ್ನು ಕಿತ್ತು ಮುಸ್ಲಿಮರಿಗೆ ನೀಡಲು ಬಯಸುತ್ತಿದ್ದಾರೆ. ಲಾಲು ಹೇಳಿಕೆ ಇಂಡಿಯಾ ಕೂಟದ ಬಣ್ಣವನ್ನು ಬಯಲು ಮಾಡಿದೆ’ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಗೆದ್ದರೆ ರಾಮಮಂದಿರಕ್ಕೆ ಬಾಬ್ರಿ ಬೀಗ: ಮೋದಿ..!
ಮಂಗಳವಾರ ಪಟನಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಲಾಲುಪ್ರಸಾದ್, ‘ಬಿಜೆಪಿಯವರು ಸಂವಿಧಾನದಲ್ಲಿ ನೀಡಿರುವ ಮೀಸಲಾತಿಗೆ ವಿರುದ್ಧವಿದ್ದಾರೆ. ಅವರು ಸಂವಿಧಾನವನ್ನು ಬದಲಿಸಿ ಮೀಸಲಾತಿ ರದ್ದುಪಡಿಸಲು ಹೊರಟಿದ್ದಾರೆ. ಆದರೆ ಮುಸ್ಲಿಮರಿಗೆ ಪೂರ್ಣ ಮೀಸಲಾತಿ ಸಿಗಬೇಕು’ ಎಂದು ಹೇಳಿದರು.
ಇದಕ್ಕೆ ಮಧ್ಯಪ್ರದೇಶದ ಧಾರ್ನಲ್ಲಿ ಮಾಡಿದ ಚುನಾವಣಾ ಪ್ರಚಾರ ಭಾಷಣದಲ್ಲಿ ಮೋದಿ ತಿರುಗೇಟು ನೀಡಿ, ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಆರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಇತ್ತೀಚೆಗೆ ಹೊರಬಂದ ಇಂಡಿಯಾ ಒಕ್ಕೂಟದ ದೊಡ್ಡ ನಾಯಕರೊಬ್ಬರು ಮುಸ್ಲಿಮರಿಗೆ ಪೂರ್ಣ ಮೀಸಲು ಸಿಗಬೇಕೆನ್ನುವ ಮೂಲಕ ಇಂಡಿಯಾ ಕೂಟದ ಬಣ್ಣವನ್ನು ಬಯಲು ಮಾಡಿದ್ದಾರೆ ಎಂದು ಹೇಳಿದರು. ಲಾಲು ಹೇಳಿಕೆಗೆ ಬಿಹಾರದ ಜೆಡಿಯು ಕೂಡ ವಿರೋಧ ವ್ಯಕ್ತಪಡಿಸಿದ್ದು, ‘ಅವರ ಹೇಳಿಕೆ ಸಂವಿಧಾನಕ್ಕೆ ಹಾಗೂ ಮಂಡಲ ಆಯೋಗದ ವರದಿಗೆ ವಿರುದ್ಧವಾದುದು’ ಎಂದು ಹೇಳಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಅವರು ಲಾಲು ಹೇಳಿಕೆಗೆ ಪ್ರತಿಕ್ರಿಯಿಸಿ, ‘ಮುಸ್ಲಿಮರಿಗೆ ಪೂರ್ಣ ಮೀಸಲು ಸಿಗಬೇಕು ಎಂಬ ಹೇಳಿಕೆ ಬಹಳ ಗಂಭೀರವಾದುದು. ಇಂಡಿಯಾ ಒಕ್ಕೂಟದವರು ಎಸ್ಸಿ, ಎಸ್ಟಿ ಹಾಗೂ ಒಬಿಸಿಯವರ ಮೀಸಲು ಕಿತ್ತು ಮುಸ್ಲಿಮರಿಗೆ ನೀಡಲು ಹೊರಟಿದ್ದಾರೆ’ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ