
ಬೆಂಗಳೂರು (ಮಾ.19): 'ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು 'ಸ್ಟ್ರಾಂಗ್ ಸಿಎಂ', ನಿಮ್ಮ ಹಾಗೆ ನಾನು 'ವೀಕ್ ಪಿಎಂ' ಅಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಲೋಕಸಭಾ ಚುನಾವಣಾ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರು. ಇನ್ನು ಮೋದಿಯವರ ಎಲ್ಲ ಟೀಕೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು, ಭಾನುವಾರ ತಮ್ಮ ಸಾಮಾಜಿಕ ಜಾಲತಾಣದ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ. ನಮ್ಮಲ್ಲಿ ಶ್ಯಾಡೋ, ಸೂಪರ್ ಸಿಎಂ ಯಾರೂ ಇಲ್ಲ. ನಿಮ್ಮನ್ನು ಯಡಿಯೂರಪ್ಪ ಟೀಕೆ ಮಾಡಿದರೂ ಅವರ ಕಾಲಿಗೆ ಬಿದ್ದು ಪಕ್ಷಕ್ಕೆ ಕರೆದುಕೊಂಡ ನೀವೇ ವೀಕ್ ಪಿಎಂ ಎಂದು ಟೀಕೆ ಮಾಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ''ಸಿಎಂ''ಗಳ ಕಾಟ: ಮೋದಿ ವ್ಯಂಗ್ಯ
ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ 'ವೀಕ್ ಪಿಎಂ' ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ. ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ 'ವೀಕ್ ಪಿಎಂ' ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಟೀಕೆ ಮಾಡಿದ್ದಾರೆ.
ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ಬಿಜೆಪಿ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ ನರೇಂದ್ರ ಮೋದಿ? ಎಂದು ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಜನರು ಹತಾಶ: ಕರ್ನಾಟಕದ ಮನಸ್ಥಿತಿಯನ್ನು ನಾನು ಕಂಡೆ, ಪ್ರಧಾನಿ ಮೋದಿ
ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಕರ್ನಾಟಕ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು 'ವೀಕ್ ಪಿಎಂ' ಅಲ್ಲದೆ ಮತ್ತೇನು?
ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಬಿಜೆಪಿ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ... ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ ನರೇಂದ್ರ ಮೋದಿ ಅವರೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ