NRC ದೇಶವ್ಯಾಪಿ ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ| ಮೊದಲ ಬಾರಿ ಅಧಿಕೃತ ಹೇಳಿಕೆ ನೀಡಿದ ಗೃಹ ಸಚಿವಾಲಯ| ಸಂಸತ್ತಿನಲ್ಲಿ ಕೇಳಲಾಗಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವ
ನವದೆಹಲಿ[ಫೆ.04]: ದೇಶದ ನಾನಾ ಭಾಗಗಳಲ್ಲಿ ಪೌರತ್ವ ಕಾಯ್ದೆ ಹಾಗೂ NRC ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಗೃಹ ಸಚಿವಾಲಯವು ಸದ್ಯ NRC ಜಾರಿಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಅಧಿಕೃತವಾಗಿ ಸಂಸತ್ತಿನಲ್ಲಿ ಇಂತಹ ಹೇಳಿಕೆ ನೀಡಿರುವುದು ಇದೇ ಮೊದಲು . ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಂಗಳವಾರ ಲೋಕಸಭೆಯಲ್ಲಿ ಲಿಖಿತ ರೂಪದಲ್ಲಿ ಈ ಉತ್ತರ ನೀಡುತ್ತಾ 'ಈವರೆಗೆ ದೇಶವ್ಯಾಪಿ NRC ಜಾರಿಗೊಳಿಸುವ ವಿಚಾರವಾಗಿ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ' ಎಂದಿದ್ದಾರೆ.
MoS Home Nityanand Rai in a written reply to a question in Lok Sabha: Till now, the government has not taken any decision to prepare National Register of Indian Citizens (NRIC) at the national level. pic.twitter.com/e3OarkJv9x
— ANI (@ANI)ಏನಿದು ಪೌರತ್ವ ತಿದ್ದುಪಡಿ ಕಾಯ್ದೆ?
ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಂದಿರುವ (ಸಕ್ರಮವಾಗಿ ಅಥವಾ ಅಕ್ರಮವಾಗಿ) 6 ಧಾರ್ಮಿಕ ಅಲ್ಪಸಂಖ್ಯಾತ (ಹಿಂದು, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ ಮತ್ತು ಬೌದ್ಧ) ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಕಾಯ್ದೆ-2019. ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನುಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ನೆಲೆಸಿದ್ದರೆ ಪೌರತ್ವ ಪಡೆಯಲು ಅರ್ಹರಾಗಿದ್ದರು.
ಆದರೆ ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸವಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ.
ತಿದ್ದುಪಡಿಯನುಸಾರ 2014ರ ಡಿಸೆಂಬರ್ 31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು. ಯಾವುದೇ ಸೂಕ್ತ ದಾಖಲೆ ಇಲ್ಲದಿದ್ದರೂ ಅವರು ಅರ್ಜಿ ಸಲ್ಲಿಸಬಹುದು. ಆದರೆ ಈ ರಾಷ್ಟ್ರಗಳಿಂದ ವಲಸೆ ಬಂದ ಮುಸ್ಲಿಮರಿಗೆ ಈ ಕಾಯ್ದೆಯು ಪೌರತ್ವ ನೀಡುವುದಿಲ್ಲ.
ಯಾರು ಅಕ್ರಮ ವಲಸಿಗರು?
ಪೌರತ್ವ ಕಾಯ್ದೆ-1955, ವಿದೇಶಿಗರ ಕಾಯ್ದೆ ಹಾಗೂ ಪಾಸ್ಪೋರ್ಟ್ ಕಾಯ್ದೆಗಳು ಭಾರತಕ್ಕೆ ಅಕ್ರಮವಾಗಿ ವಲಸೆ ಬರುವವರಿಗೆ ಪೌರತ್ವ ನೀಡುವಂತಿಲ್ಲ ಎಂದು ನಿರ್ಬಂಧಿಸಿವೆ. ಭಾರತದ ಸಂವಿಧಾನದ ಪ್ರಕಾರ ಕಾನೂನುಬದ್ಧ ಪಾಸ್ಪೋರ್ಟ್ ಅಥವಾ ಸೂಕ್ತ ದಾಖಲೆ ಇಲ್ಲದೆ ಭಾರತಕ್ಕೆ ನುಸುಳಿದವರು ಅಕ್ರಮ ವಲಸಿಗರು. ಹೀಗೆ ವಲಸೆ ಬಂದ 3 ದೇಶಗಳ 6 ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಸ್ತಾಪ ಹೊಸ ತಿದ್ದುಪಡಿಯಲ್ಲಿದೆ.