
ನವದೆಹಲಿ/ಇಂಫಾಲ (ಜುಲೈ 21, 2023): ಮಣಿಪುರದಲ್ಲಿ ಎರಡು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಸಂಘರ್ಷದ ನಡುವೆ ಇಬ್ಬರು ಮಹಿಳೆಯರನ್ನು ನಗ್ನವಾಗಿ ಪರೇಡ್ ಮಾಡಿದ ಘಟನೆಗೆ ದೇಶಾದ್ಯಂತ ದಿಗ್ಭ್ರಮೆ ಹಾಗೂ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದೆ. ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿಯಾಗಿ ಹಲವು ನಾಯಕರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಚಲನಚಿತ್ರ ನಟರು, ಕ್ರೀಡಾಪಟುಗಳು ಕಟುವಾದ ಶಬ್ದಗಳಲ್ಲಿ ಖಂಡಿಸಿದ್ದಾರೆ. ದೋಷಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ಖಾತರಿಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ‘ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಮಣಿಪುರದ ಹೆಣ್ಣುಮಕ್ಕಳಿಗೆ ಆಗಿರುವ ಅನ್ಯಾಯಕ್ಕೆ ಕ್ಷಮೆಯಿಲ್ಲ. ಕಾನೂನು ತನ್ನೆಲ್ಲಾ ಕಾಠಿಣ್ಯದೊಂದಿಗೆ ಕೆಲಸ ಮಾಡಲಿದೆ. ಘಟನೆಯಿಂದ 140 ಕೋಟಿ ಜನರು ಅವಮಾನ ಪಡುವಂತಾಗಿದೆ’ ಎಂದಿದ್ದಾರೆ. ಮಣಿಪುರ ಮುಖ್ಯಮಂತ್ರಿ ಬೀರೇನ್ ಸಿಂಗ್, ‘ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯೂ ಸೇರಿದಂತೆ ಕಠಿಣಾತಿಕಠಿಣ ಶಿಕ್ಷೆ ಕೊಡಿಸಲು ಯತ್ನಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಮಣಿಪುರ ಸಿಎಂ ಜೊತೆ ಮಾತನಾಡಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.
ಇದನ್ನು ಓದಿ: ಮಣಿಪುರ ಘಟನೆ ಅಪರಾಧಿಗಳನ್ನು ಸುಮ್ಮನೆ ಬಿಡಲ್ಲ: ಮೋದಿ; ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಕೈಗೊಳ್ತೇವೆ; ಸುಪ್ರೀಂಕೋರ್ಟ್
ಮತ್ತೊಂದೆಡೆ ಮಹಿಳೆಯರ ನಗ್ನ ಪರೇಡ್ ಖಂಡಿಸಿ ಗುರುವಾರ ಮಣಿಪುರ ರಾಜಧಾನಿ ಇಂಫಾಲ ಸೇರಿದಂತೆ ಹಲವೆಡೆ ಕುಕಿ ಸಮುದಾಯದ ಜನರು ಸಾವಿರಾರು ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದು, ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಮೇ 4ರಂದು ನಡೆದ ಘಟನೆಯ ವಿಡಿಯೋ ಬುಧವಾರ ಬಿಡುಗಡೆಯಾಗಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮಣಿಪುರ ಪೊಲೀಸರು, ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಪಕ್ಷಗಳ ಆಕ್ರೋಶ:
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸಮಾಜದ ಸೂಕ್ಷ್ಮತೆಗಳನ್ನು ನಾಶ ಮಾಡುವ ಮೂಲಕ ತಮ್ಮ ಒಟ್ಟಾಡಳಿತದಿಂದ ಪ್ರಜಾಪ್ರಭುತ್ವವನ್ನು ಬದಲಾಯಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದರೆ, ಮೋದಿ ಅವರ ಮೌನ ಹಾಗೂ ನಿಷ್ಕ್ರಿಯತೆ ಮಣಿಪುರದಲ್ಲಿ ಅರಾಜಕತೆ ಸೃಷ್ಟಿಸಿದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಇನ್ನು ಮಣಿಪುರ ಹಿಂಸಾಚಾರ ಗುರುವಾರ ಸಂಸತ್ತಿನ ಉಭಯ ಸದನಗಳ ಕಲಾಪವನ್ನೂ ಬಲಿ ಪಡೆದಿದ್ದು, ಮುಂದಿನ ದಿನಗಳನ್ನೂ ಆಹುತಿ ಪಡೆಯುವ ಸುಳಿವು ನೀಡಿದೆ. ಘಟನೆ ಕುರಿತು ಸ್ವತಃ ಪ್ರಧಾನಿ ಸದನದಲ್ಲಿ ಉತ್ತರ ನೀಡಬೇಕು, ಮಣಿಪುರ ಸಿಎಂ ಬೀರೇನ್ರನ್ನು ವಜಾ ಮಾಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ. ರಾಷ್ಟ್ರೀಯ ಮಹಿಳಾ ಆಯೋಗ ಕೂಡಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸರಿಗೆ ಸೂಚನೆ ನೀಡಿದೆ.
ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಮ್ಯಾನ್ಮಾರ್ ಜತೆ ಗಡಿ ಶಾಂತಿ, ಭದ್ರತೆ ವಿಚಾರವಾಗಿ ಮಾತುಕತೆ ನಡೆಸಿದ ಕೇಂದ್ರ ಸರ್ಕಾರ
ಸುಪ್ರೀಂಕೋರ್ಟ್ ಗರಂ:
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸುಪ್ರೀಂಕೋರ್ಟ್ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ನಾಲ್ವರ ಬಂಧನ:
ಈ ನಡುವೆ ವೈರಲ್ ಆದ ವಿಡಿಯೋದಲ್ಲಿದ್ದ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ವ್ಯವಸ್ಥೆ ಬಳಸಿಕೊಂಡು ವಿಡಿಯೋದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಈ ಪೈಕಿ ಪ್ರಕರಣದ ಮಾಸ್ಟರ್ಮೈಂಡ್ ಎನ್ನಲಾದ ಹುಯಿರಿಮ್ ಹೆರಾದಶ್ (32) ಕೂಡಾ ಸೇರಿದ್ದಾನೆ. ಬಂಧಿತರ ವಿಚಾರಣೆ ಮುಂದುವರೆದಿದ್ದು, ಅವರು ನಿಡುವ ಸುಳಿವು ಆಧರಿಸಿ ಇನ್ನಷ್ಟು ಜನರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಭದ್ರತೆ ನೆಪವೊಡ್ಡಿ ಮಣಿಪುರದಲ್ಲಿ ರಾಹುಲ್ ಗಾಂಧಿ ತಡೆದ ಪೊಲೀಸರು: ಹೆಲಿಕಾಪ್ಟರ್ನಲ್ಲಿ ಪ್ರಯಾಣ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ