
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿರುವ ಡೊನಾಲ್ಡ್ ಟ್ರಂಪ್, ಉಗ್ರರ ದಾಳಿಯಲ್ಲಿ ಮೃತರಿಗೆ ಸಂತಾಪ ಸೂಚಿಸಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದ ಪರವಾಗಿ ಅಮೆರಿಕಾ ನಿಲ್ಲುತ್ತದೆ ಮತ್ತು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ ಬೆಂಬಲಕ್ಕೆ ಪ್ರಧಾನಿ ಮೋದಿಯವರ ಧನ್ಯವಾದ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ಉಗ್ರರ ಹೇಡಿತನ, ಸಾವುಗಳಿಗೆ ನ್ಯಾಯ ಕೊಡಿಸಲು ಭಾರತ ಬದ್ಧವಾಗಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಫೋನ್ ಕರೆಗೂ ಮುನ್ನ ಡೊನಾಲ್ಡ್ ಟ್ರಂಪ್, ಸಾಮಾಜಿಕ ಜಾಲತಾಣದಲ್ಲಿ ಕಾಶ್ಮೀರದಿಂದ ತುಂಬಾ ಗೊಂದಲದ ಸುದ್ದಿ ಬಂದಿದ್ದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಮೆರಿಕ ಭಾರತದ ಜೊತೆ ದೃಢವಾಗಿ ನಿಲ್ಲುತ್ತದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಪುಟಿನ್, ಜಾರ್ಜಿಯಾ ಮೆಲೋನಿ ಸಂತಾಪ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂತಾಪ ಸಂದೇಶ ಕಳುಹಿಸಿದ್ದಾರೆ. "ಮುಗ್ಧ ನಾಗರಿಕರ ವಿರುದ್ಧದ ಅಪರಾಧ ಎಂದು ಕರೆದಿರುವ ವ್ಲಾಡಿಮಿರ್ ಪುಟಿನ್, ಭಯೋತ್ಪಾದನೆಯ ವಿರುದ್ಧ ದೃಢವಾಗಿ ನಿಲ್ಲುವ ಭಾರತದ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಇಂದು ಭಾರತದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆಂದು ತಿಳಿದು ತುಂಬಾ ದುಃಖವಾಯಿತು ಎಂದು ಸಂತಾಪ ಸೂಚಿಸಿದ್ದಾರೆ.
ಆಗಿದ್ದೇನು?
ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನ ಬೈಸರನ್ ಹುಲ್ಲುಗಾಲು ಮಿನಿ ಸ್ವಿಜರ್ಲೆಂಡ್ ಎಂದೇ ಖ್ಯಾತಿ ಪಡೆದಿದೆ. ಅಪ್ರತಿಮ ಪ್ರಾಕೃತಿಕ ಸೌಂದರ್ಯದ ಕಾರಣ ಇದಕ್ಕೆ ಇಲ್ಲಿ ಅನೇಕ ಹಿಂದಿ ಚಿತ್ರಗಳೂ ಚಿತ್ರೀಕರಣಗೊಂಡಿವೆ. ಆದರೆ ಈ ಪ್ರದೇಶ ಬೆಟ್ಟಗುಡ್ಡದಿಂದ ಕೂಡಿದೆ. ಹೀಗಾಗಿ ವಾಹನಕ್ಕೆ ಪ್ರವೇಶಿಸಲಾಗದು. ಕಾಲ್ನಡಿಗೆ ಅಥವಾ ಕುದುರೆ ಮೂಲಕ ತಲುಪಬೇಕು. ಈ ಪ್ರಕೃತಿ ಸೌಂದರ್ಯ ಆಸ್ವಾದಿಸಲು ಭಾರತದ ವಿವಿಧ ಭಾಗ ಹಾಗೂ ವಿದೇಶಗಳಿಂದ ಪ್ರವಾಸಿಗರು ಆಗಮಿಸಿದ್ದರು.
ಆದರೆ ಪಕ್ಕದ ಅಡವಿಗಳಲ್ಲಿ ಅವಿತಿದ್ದ ಸುಮಾರು 5 ಉಗ್ರರು, ಅಲ್ಲಿಂದ ಹೊರಬಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರವಾಸಿಗರ ಜಾತಿ-ಧರ್ಮ ಕೇಳಿ, ಅವರು ಮುಸ್ಲಿಮರಲ್ಲ ಎಂದು ಖಚಿತಪಡಿಸಿಕೊಂಡು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಬಳಿಕ ಸ್ಥಳೀಯರು ಅಲ್ಲಿ ನೆರೆದು ಕುದುರೆ ಮೂಲಕ ಹಾಗೂ ಮೈಮೇಲೆ ಗಾಯಾಳುಗಳನ್ನು ಹೊತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಕಾಶ್ಮೀರ ಉಗ್ರರ ದಾಳಿಗೆ ಬೆಂಗಳೂರಿನ ವ್ಯಕ್ತಿ ಬಲಿ: ಹಿಂದೂ ಎನ್ನುತ್ತಿದ್ದಂತೆ ಗುಂಡು ಹಾರಿಸಿ ಹತ್ಯೆ!
ಕಾಂಗ್ರೆಸ್, ವಿಪಕ್ಷ ಖಂಡನೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಎಕ್ಸ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ‘ಜಮ್ಮು ಕಾಶ್ಮೀರದ ಪಹಾಲ್ಗಾಂನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಉಗ್ರವಾದದ ವಿರುದ್ಧ ಹೋರಾಡಲು ಇಡೀ ದೇಶ ಒಂದಾಗಿದೆ. ಈ ಹೀನ ಕೃತ್ಯಗಳು ಮಾನವೀಯತೆಗೆ ಕಪ್ಪುಚುಕ್ಕೆಯಾಗಿದೆ. ದುರ್ಘಟನೆಯಲ್ಲಿ ಮೃತರಾದ ಎಲ್ಲರಿಗೂ ಕಾಂಗ್ರೆಸ್ ಪಕ್ಷದ ಪರವಾಗಿ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ’ ಎಂದಿದ್ದಾರೆ. ಜತೆಗೆ ‘ಭಾರತದ ರಾಷ್ಟ್ರೀಯ ಭದ್ರತೆಯ ಅತಿಮುಖ್ಯವಾಗಿದ್ದು, ಇದನ್ನು ಸರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಿಯಾಂಕಾ, ಸೋನಿಯಾ ಆಕ್ರೋಶ: ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಆಕ್ರೋಶ ಹೊರಹಾಕಿದ್ದು, ನಿರಾಯುಧ ಮತ್ತು ಮುಗ್ಧ ಜನರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದು ಮಾನವೀಯತೆ ವಿರುದ್ಧದ ಅಪರಾಧವಾಗಿದೆ’ ಎಂದಿದ್ದಾರೆ. ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ಕಾಶ್ಮೀರ ಬಂದ್ಗೆ ಕರೆ ನೀಡಿದ್ದಾರೆ.
ಇದನ್ನೂ ಓದಿ: ಸಾವಿನ ಮನೆಯಲ್ಲಿ ಬೇಳೆ ಬೇಯಿಸಲೆತ್ನ: ಆರ್.ಅಶೋಕ್ ಕಿಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ