
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆ ಜನತಾ ಪಕ್ಷ (ಸಿಜೆಪಿ) ಬಿಗಿಪಟ್ಟು ಹಿಡಿದಿರುವ ಹೊರತಾಗಿಯೂ, ಅವರ ರಾಜೀನಾಮೆ ಪಡೆಯುವ ಪ್ರಶ್ನೆಯೇ ಸರ್ಕಾರದ ಮುಂದಿಲ್ಲ. ಜವಾಬ್ದಾರಿಯಿಂದ ನುಣುಚಿಕೊಳ್ಳುವ ಬದಲು, ಜನಾದೇಶದಂತೆ ಕೆಲಸ ಮಾಡಲು ಸರ್ಕಾರ ನಿಶ್ಚಯಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನ್ ರಾಜೀನಾಮೆಗೆ ಸಿಜೆಪಿ ಹಾಗೂ ವಿಪಕ್ಷಗಳು ಪಟ್ಟು ಹಿಡಿದಿದ್ದು, ಈ ವಿಚಾರದಲ್ಲಿ ರಾಜಿಯಾಗುವುದಿಲ್ಲ ಎಂದು ಸಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಆದರೆ ಇದಕ್ಕೆ ಕೇಂದ್ರ ಸರ್ಕಾರದ ಮೂಲಗಳು ಪ್ರತಿಕ್ರಿಯೆ ನೀಡಿ, ‘ಪ್ರಧಾನ್ ರಾಜೀನಾಮೆಯ ಪ್ರಶ್ನೆಯೇ ಇಲ್ಲ. ರಾಜೀನಾಮೆ ನೀಡಿ ಜವಾಬ್ದಾರಿಯಿಂದ ಓಡಿಹೋಗುವುದು ಅತ್ಯಂತ ಸುಲಭದ ಕೆಲಸವಾಗುತ್ತದೆ. ಜನರು ನಮಗೆ ಜನಾದೇಶ ನೀಡಿದ್ದಾರೆ ಮತ್ತು ನಾವು ಅದನ್ನು ಸಾಕಾರಗೊಳಿಸುತ್ತೇವೆ’ ಎಂದು ಸ್ಪಷ್ಟಪಡಿಸಿವೆ. ಹೀಗಾಗಿ ಸಿಜೆಪಿ ಮತ್ತು ಸರ್ಕಾರದ ನಡುವಿನ ಜಟಾಪಟಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ವಿವಾದ ಸತತ 5ನೇ ದಿನವೂ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳನ್ನು ಬಲಿ ಪಡೆದಿದೆ.
ನೀಟ್ ಸೋರಿಕೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಸರ್ಕಾರ ಪರಿಚಯಿಸಲು ಮುಂದಾಗಿರುವ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ-2026 ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದವು. ಈ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಮುಂದೂಡಲಾಯಿತು. ಜು.20ರಿಂದ ಆರಂಭವಾಗಿರುವ ಅಧಿವೇಶನ ಇದೇ ಕಾರಣಕ್ಕೆ ಒಂದು ದಿನವೂ ಸುಗಮವಾಗಿ ನಡೆದಿಲ್ಲ.
ಕೇಂದ್ರ ಶಿಕ್ಷಣ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸುತ್ತಿರುವ ಜಿರಳೆ ಪಕ್ಷ (ಸಿಜೆಪಿ) ಹಾಗೂ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್ ನಡುವಿನ ಮಾತುಕತೆ ದೆಹಲಿಯ ವಿಠ್ಠಲ್ಭಾಯಿ ಪಟೇಲ್ ನಿವಾಸದಲ್ಲಿ ಶುಕ್ರವಾರ ನಡೆಯಿತು. ಆದರೆ ಸಿಜೆಪಿ ಪ್ರತಿನಿಧಿಗಳು ಪ್ರಧಾನ್ ರಾಜೀನಾಮೆ ಪಟ್ಟು ಸಡಿಲಿಸದಿದ್ದುದರಿಂದ ಯಾವುದೇ ತಾರ್ಕಿಕ ನಿರ್ಣಯಕ್ಕೆ ಬಾರದೆ ಸಭೆ ಅಂತ್ಯವಾಯಿತು. ಈ ಹಿನ್ನೆಲೆಯಲ್ಲಿ ಪುನಃ ಶನಿವಾರ ಸಭೆ ನಿಗದಿಪಡಿಸಲಾಗಿದೆ.
ಸಿಜೆಪಿ ನಾಯಕರೊಬ್ಬರ ಪ್ರಕಾರ, ಪ್ರಧಾನ್ ರಾಜೀನಾಮೆ ಬಗ್ಗೆ ನಿರ್ಧರಿಸಲು ಸರ್ಕಾರ ಶನಿವಾರದವರೆಗೆ ಸಮಯ ಕೇಳಿದೆ. ಆದರೆ ಮಾತುಕತೆಯಲ್ಲಿದ್ದ ನಡ್ಡಾ, ರಾಜೀನಾಮೆ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಸಭೆ ಶನಿವಾರ ಮುಂದುವರಿಯಲಿದೆ ಎಂದಷ್ಟೇ ಹೇಳಿದ್ದಾರೆ.
ಸರ್ಕಾರ ತಮ್ಮೊಡನೆ ಮಾತುಕತೆ ನಡೆಸಬೇಕು ಎಂದು ಸಿಜೆಪಿ ಕಳೆದೊಂದು ತಿಂಗಳಿನಿಂದ ಒತ್ತಾಯಿಸುತ್ತ ಬಂದಿತ್ತು. ಆದರೆ ನಡ್ಡಾ ನಿವಾಸದಲ್ಲಿ ಸಭೆ ನಡೆಸುವಂತಿಲ್ಲ, ಯಾವುದಾದರೂ ತಟಸ್ಥ ಸ್ಥಳದಲ್ಲಿ ನಡೆಸಬೇಕು ಎಂದು ನಂತರ ಪಟ್ಟು ಹಿಡಿಯಿತು. ಈ ಎಲ್ಲ ಜಟಾಪಟಿಗಳ ಬಳಿಕ ಶುಕ್ರವಾರ ವಿಠ್ಠಲ್ಭಾಯಿ ಪಟೇಲ್ ನಿವಾಸದಲ್ಲಿ ಸಭೆ ನಡೆಯಿತು. ಈ ಸಭೆಗೆ ಸಿಜೆಪಿ ಪ್ರತಿನಿಧಿಗಳಾಗಿ ಇಬ್ಬರು ಆಗಮಿಸಿದರೆ, ಸರ್ಕಾರದ ವತಿಯಿಂದ ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಭಾಗವಹಿಸಿದ್ದರು. ಸುಮಾರು 2 ಗಂಟೆಗಳ ಕಾಲ ಮಾತುಕತೆ ನಡೆಯಿತು.
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, ‘ಪ್ರಧಾನ್ ರಾಜೀನಾಮೆ ಬೇಡಿಕೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಕೇಂದ್ರ ಸಚಿವರಿಗೆ ತಿಳಿಸಿದ್ದೇವೆ. ನೀಟ್ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ 1 ಕೋಟಿ ರು. ಪರಿಹಾರ ನೀಡಬೇಕು ಹಾಗೂ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದೇವೆ’ ಎಂದಿದ್ದಾರೆ. ‘ಸಿಜೆಪಿ ಬೇಡಿಕೆಗಳನ್ನು ಆಲಿಸಿದ್ದೇವೆ. ಶನಿವಾರ ಮತ್ತೆ ಭೇಟಿಯಾಗುತ್ತೇವೆ’ ಎಂದು ನಡ್ಡಾ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ