
ಬೆಳಗಾವಿ (ಏ.25): ಹಿಂಡಲಗಾ ಕೇಂದ್ರ ಕಾರಾಗೃಹ ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ ಎಂಬ ಗಂಭೀರ ಆರೋಪಗಳ ಮಧ್ಯೆಯೇ ಮಹಾರಾಷ್ಟ್ರ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಹೇಳಿಕೆಯಲ್ಲಿ ಈ ವಿಷಯ ದೃಢಪಟ್ಟಿದೆ.
ಬೆಂಗಳೂರು ಮತ್ತು ಢಾಕಾ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿ ಅಪ್ಸರ್ ಪಾಷಾ ಜೊತೆ ಸೇರಿ ಜಯೇಶ್ ಪೂಜಾರಿ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದಾನೆಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜಯೇಶ್ ಪೂಜಾರಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಕೋರ್ಟ್ಗೆ ಮಹಾರಾಷ್ಟ್ರ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣವೊಂದರ ವಿಚಾರಣೆ ವೇಳೆ ನಾಗ್ಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಾಗ್ಪುರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ನಿಲೇಶ್ ಪಾಳ್ವೆ ಈ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಹಿಂಡಲಗಾ ಜೈಲಿನಲ್ಲಿದ್ದೇ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿ ₹100 ಕೋಟಿ ಹಣದ ಬೇಡಿಕೆ ಇಟ್ಟಿದ್ದ ಆರೋಪ ಜಯೇಶ್ ಪೂಜಾರಿ ಮೇಲಿದೆ. ಹಣ ನೀಡದಿದ್ದರೆ ಗಡ್ಕರಿ ಅವರ ಮನೆ ಸ್ಫೋಟ ಮಾಡುವುದಾಗಿ ಬೆದರಿಕೆ ಕರೆ ಮಾಡಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್ಐಎ ಹಾಗೂ ನಾಗ್ಪುರ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.
2024ರಲ್ಲಿ ಬೆಳಗಾವಿ ನ್ಯಾಯಾಲಯದಲ್ಲೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪವೂ ಜಯೇಶ್ ಪೂಜಾರಿ ಮೇಲಿದ್ದು, ಪ್ರಕರಣದ ಗಂಭೀರತೆ ಹೆಚ್ಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ