
ನವದೆಹಲಿ(ಜ.25): ಕೃಷಿ ಕಾಯ್ದೆ ರದ್ದುಪಡಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 2 ತಿಂಗಳಿನಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಇದೀಗ, ‘ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿಸಿ ಕಾಯ್ದೆ ರದ್ದು ಮಾಡಿಸಿ’ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕಾಯ್ದೆ ರದ್ದು ಮಾಡಿಸಿದರೆ ದೇಶವೇ ನಿಮಗೆ ಕೃತಜ್ಞತೆ ಸಲ್ಲಿಸಲಿದೆ ಎಂದಿದ್ದಾರೆ.
ಈ ಕುರಿತು ಹೀರಾಬೆನ್ ಅವರಿಗೆ ಪತ್ರ ಬರೆದಿರುವ ಪಂಜಾಬ್ ಮೂಲದ ರೈತ ಹರ್ಪ್ರೀತ್ಸಿಂಗ್ ‘ನಾನು ಭಾರವಾದ ಹೃದಯದಿಂದ ಈ ಪತ್ರ ಬರೆಯುತ್ತಿದ್ದೇನೆ. ನಿಮಗೆ ಗೊತ್ತಿರುವ ದೇಶಕ್ಕೆ ಅನ್ನ ಉಣ್ಣಿಸುವ ಅನ್ನದಾತ ಇದೀಗ ದೆಹಲಿಯ ಮೈಕರಗುವ ಚಳಿಯಲ್ಲಿ ಬೀದಿಯಲ್ಲಿ ಮಲಗುವ ಸ್ಥಿತಿ ಬಂದಿದೆ. 90-95 ವರ್ಷದ ವೃದ್ಧರು, ಮಕ್ಕಳು, ಮಹಿಳೆಯರು ಕೂಡಾ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ತೀವ್ರ ಚಳಿ ಜನರನ್ನು ಅನಾರೋಗ್ಯಕ್ಕೆ ತುತ್ತು ಮಾಡುತ್ತಿದೆ. ಪರಿಣಾಮ ಹಲವರು ಸಾವನ್ನಪ್ಪಿದ್ದಾರೆ. ಇದು ನಮಗೆಲ್ಲಾ ಆತಂಕದ ಸಂಗತಿ’ ಎಂದಿದ್ದಾರೆ.
‘ಅದಾನಿ, ಅಂಬಾನಿ ಮತ್ತು ಇತರೆ ಕಾರ್ಪೊರೆಟ್ ಕುಳಗಳ ಪರವಾಗಿ ಈ ಮೂರು ಕರಾಳ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿತ್ತು. ಅದರ ವಿರುದ್ಧವಾಗಿ ನಾವೆಲ್ಲಾ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ. ಹೀಗಾಗಿ ನೀವು ಓರ್ವ ತಾಯಿಯಾಗಿ ನಿಮ್ಮೆಲ್ಲಾ ಶಕ್ತಿಯನ್ನು ಬಳಸಿ, ಕಾಯ್ದೆ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಮನಸ್ಸು ಬದಲಿಸುವಂತೆ ಮಾಡಿ. ಹಾಗಾದಲ್ಲಿ ಇಡೀ ದೇಶ ನಿಮಗೆ ಕೃತಜ್ಞತೆ ಸಲ್ಲಿಸಲಿದೆ’ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ