
ನವದೆಹಲಿ (ಫೆ.27): ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವುದರ ಜತೆಗೆ ಅಗತ್ಯವಿರುವ ಅನುದಾನ ಒದಗಿಸುವಂತೆ ರಾಜ್ಯ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನಗರದಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿಯಾದ ಶಿವಕುಮಾರ್ ಅವರು ನೆನೆಗುದಿಗೆ ಬಿದ್ದಿರುವ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಾತುಕತೆ ನಡೆಸಿದರು.
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ ಮತ್ತು ಸೋಂತಿ ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ಹಾಗೂ ಅನುದಾನ ನೀಡುವಂತೆ ಸಿ.ಆರ್.ಪಾಟೀಲ್ ಅವರಿಗೆ ಪ್ರಸ್ತಾವ ಸಲ್ಲಿಸಿದರು. ಈ ವೇಳೆ ಕೇಂದ್ರ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ರಾಜ್ಯ ಸಣ್ಣ ನೀರಾವರಿ ಸಚಿವ ಬೋಸರಾಜ್, ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.
ಬಸ್ ದಾಳಿ ತಡೆಗೆ ಕ್ರಮ ಕೈಗೊಳ್ಳಿ: ಹಿರಿಯ ಅಧಿಕಾರಿಗಳಿಗೆ ಸಿಎಂ ಸಿದ್ದು ಸೂಚನೆ
ತುಂಗಭದ್ರಾ ಯೋಜನೆಗೆ ₹1444 ಕೋಟಿ, ಘಟಪ್ರಭಾಗೆ ₹1596 ಕೋಟಿ ಪ್ರಸ್ತಾವ: ಭದ್ರಾ ಎಡದಂಡೆ ಕಾಲುವೆ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಈಗಾಗಲೇ ಕೇಂದ್ರಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಲ್ಲಿಸಲಾಗಿದೆ. ತುಂಗಭದ್ರಾ ಎಡದಂಡೆ ಕಾಲುವೆಯು ಉತ್ತರ ಕರ್ನಾಟಕದ 244,103 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲಿದ್ದು, ಈ ಯೋಜನೆಗೆ ₹1444.42 ಕೋಟಿ ಅನುದಾನ ಅಗತ್ಯವಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಅನುದಾನ ನೀಡಬೇಕು. ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆಗಳ ವಿಸ್ತರಣೆ, ನವೀಕರಣ ಸಂಬಂಧ ಫೆ.10ರಂದು ಡಿಪಿಆರ್ ಸಲ್ಲಿಸಿದ್ದು, ಈ ಯೋಜನೆಗೆ ₹1596.98 ಕೋಟಿ ಅನುದಾನ ಒದಗಿಸಬೇಕು ಎಂದು ಡಿಸಿಎಂ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಮಲಪ್ರಭಾ ಕಾಲುವೆ ವಿಸ್ತರಣೆಗೆ ಅನುಮತಿ ನೀಡಿ: ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಪ್ರಮುಖ ಭಾಗವಾಗಿರುವ ಇಂಡಿ ಕಾಲುವೆ ವಿಸ್ತರಣೆ, ನವೀಕರಣ ಯೋಜನೆಗಾಗಿ ₹2666.70 ಕೋಟಿ ಮೊತ್ತದ ಪೂರ್ವ ಕಾರ್ಯಸಾಧ್ಯತಾ ವರದಿಯನ್ನು ಫೆ.20ರಂದು ಸಲ್ಲಿಸಲಾಗಿದೆ. ಈ ವರದಿಯನ್ನು ಪರಿಗಣಿಸಿ ಅನುದಾನ ಒದಗಿಸಬೇಕು. ಇನ್ನು ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣಕ್ಕೆ ಅಗತ್ಯವಿರುವ ₹3000 ಕೋಟಿ ಅನುದಾನ ನೀಡುವುದರ ಜತೆಗೆ ಕೇಂದ್ರ ಸಚಿವಾಲಯವು ಡಿಪಿಆರ್ಗೆ ಅನುಮತಿ ನೀಡಬೇಕು ಎಂದು ಕೇಂದ್ರ ಸಚಿವರಿಗೆ ಡಿಕೆಶಿ ಮನವಿ ಮಾಡಿದ್ದಾರೆ.
ರಾಮನಗರದ ಹೆಸರು ಬದಲಾವಣೆಗೆ ಕುಮಾರಸ್ವಾಮಿಯಿಂದ ಅಡ್ಡಗಾಲು: ಡಿಕೆಶಿ ಕಿಡಿ
ಬೆಣ್ಣಿಹಳ್ಳ ಪ್ರವಾಹ ನಿರ್ವಹಣೆಗೆ ₹1610 ಕೋಟಿ ಮೊತ್ತ ಒದಗಿಸಿ: ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬೆಣ್ಣಿಹಳ್ಳದಿಂದ ಉಂಟಾಗುವ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಯ ಕಾಮಗಾರಿಗೆ ಅಗತ್ಯವಿರುವ ₹1610 ಕೋಟಿ ಅನುದಾನ ಹಾಗೂ ಸೋಂತಿ ಏತ ನೀರಾವರಿ ಯೋಜನೆಗೆ 2015 ಮೇ 25ರಂದು ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ತಾಂತ್ರಿಕ ಸಲಹಾ ಸಮಿತಿಯ 125ನೇ ಸಭೆಯಲ್ಲಿ ₹673.90 ಕೋಟಿ ಮೊತ್ತದ ಡಿಪಿಆರ್ಗೆ ಅನುಮೋದನೆ ನೀಡಲಾಗಿತ್ತು. ಈಗ ಈ ಯೋಜನೆಯ ಮೊತ್ತ ₹804.66 ಕೋಟಿಗೆ ಏರಿಕೆಯಾಗಿದ್ದು, ಅಗತ್ಯ ಅನುದಾನ ನೀಡಬೇಕು ಎಂದು ಡಿಸಿಎಂ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ