
ಚಂಡೀಗಢ: ಪಂಜಾಬ್ನ ಆಮ್ ಆದ್ಮಿ ಪಕ್ಷದ ಸರ್ಕಾರದ ಮುಖ್ಯಮಂತ್ರಿ ಭಗವಂತ್ ಮಾನ್ ಮದ್ಯ ಸೇವಿಸಿ ಸದನಕ್ಕೆ ಬರುತ್ತಾರೆ, ಈ ಹಿನ್ನೆಲೆಯಲ್ಲಿ ಅವರನ್ನು ಮದ್ಯಪಾನ ಪತ್ತೆ ಪರೀಕ್ಷೆ (ಆಲ್ಕೋಹಾಲ್ ಟೆಸ್ಟ್)ಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿದ ಅಪರೂಪದ ಘಟನೆಗೆ ಪಂಜಾಬ್ ವಿಧಾನಸಭೆ ಶುಕ್ರವಾರ ಸಾಕ್ಷಿಯಾಗಿದೆ.
ಕಾರ್ಮಿಕರ ದಿನದ ಹಿನ್ನೆಲೆಯಲ್ಲಿ 1 ದಿನದ ವಿಶೇಷ ಅಧಿವೇಶನವನ್ನು ಸರ್ಕಾರ ಕರೆದಿತ್ತು. ಈ ವೇಳೆ ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖಾರಿಯಾ ಅವರು ಅಧಿವೇಶನದಲ್ಲಿ ಮೊಬೈಲ್ ಬಳಸುತ್ತಿದ್ದುದನ್ನು ಗಮನಿಸಿದ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.
ಈ ವೇಳೆ ಖಾರಿಯಾ, ಮುಖ್ಯಮಂತ್ರಿಗಳು ಮದ್ಯಪಾನ ಮಾಡಿ ಅಧಿವೇಶನಕ್ಕೆ ಬರುತ್ತಾರೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅವರೂ ಬೆಂಬಲಿಸಿ, ಸಿಎಂ ಸೇರಿ ಎಲ್ಲಾ ಶಾಸಕರು ಮದ್ಯಪಾನ ಪತ್ತೆ ಪರೀಕ್ಷೆಗೆ ಒಳಪಡಬೇಕು ಎಂದು ಒತ್ತಾಯಿಸಿದರು. ಈ ಬೇಡಿಕೆಗೆ ಅಕಾಲಿದಳವೂ ಬೆಂಬಲ ವ್ಯಕ್ತಪಡಿಸಿ ಸಾರ್ವಜನಿಕ ಡೋಪ್ ಟೆಸ್ಟ್ಗೆ ಆಗ್ರಹಿಸಿತು.
ಗದ್ದಲ ಹಿನ್ನೆಲೆಯಲ್ಲಿ ಕೆಲಕಾಲ ಕಲಾಪವನ್ನು ಮುಂದೂಡಿದರೂ ಮತ್ತೆ ಪ್ರತಿಪಕ್ಷಗಳಿಂದ ಅದೇ ಬೇಡಿಕೆ ಮಂಡನೆಯಾಯಿತು. ಆದರೆ, ಈ ಬೇಡಿಕೆಯನ್ನು ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ ತಿರಸ್ಕರಿಸಿದ್ದು, ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿ ಆಕ್ರೋಶ ಹೊರಹಾಕಿದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ