
ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ಶಿಕ್ಷಕರ ನೈತಿಕತೆಯ ಬಗ್ಗೆ ತೀವ್ರ ಆತಂಕ ಹುಟ್ಟಿಸುವ ಘಟನೆಯೊಂದು ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಸ್ವಾತಂತ್ರ್ಯ ದಿನಾಚರಣೆಯ ನೆಪದಲ್ಲಿ ವಿದ್ಯಾರ್ಥಿನಿಯರನ್ನು ಡ್ಯಾಂ ಬಳಿ ಕರೆದೊಯ್ದು, ಅವರ ಜೊತೆ ಪ್ರಿನ್ಸಿಪಾಲ್ ಸ್ನಾನ ಮಾಡುತ್ತಿರುವ ಆಕ್ಷೇಪಾರ್ಹ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಶಿಕ್ಷಣ ಇಲಾಖೆ ಪ್ರಾಂಶುಪಾಲನನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.
ರಾಜಸ್ಥಾನದ ಅಲ್ವಾರ್ನ ಥಾನಗಾಜಿ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿದ ಬಳಿಕ ಈ ಕೃತ್ಯ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್, ಈಜು ಕಲಿಸುವುದು ಮತ್ತು ಟ್ರಿಪ್ ನೆಪವೊಡ್ಡಿ ಸುಮಾರು 20 ರಿಂದ 25 ಹಿರಿಯ ವಿದ್ಯಾರ್ಥಿನಿಯರು ಸೇರಿದಂತೆ ಮಕ್ಕಳನ್ನು ಕಾಡಿನ ಮಾರ್ಗವಾಗಿ ಎರಡು ಕಿಲೋಮೀಟರ್ ದೂರದಲ್ಲಿರುವ ‘ಭದಾಜ್ ಡ್ಯಾಂ’ಗೆ ಕರೆದೊಯ್ದಿದ್ದರು.
ಅಲ್ಲಿ ಪ್ರಿನ್ಸಿಪಾಲ್ ವಿದ್ಯಾರ್ಥಿನಿಯರ ಜೊತೆ ನೀರಿಗಿಳಿದು ಆಕ್ಷೇಪಾರ್ಹ ರೀತಿಯಲ್ಲಿ ಸ್ನಾನ ಮಾಡಿದ್ದು, ಇದನ್ನು ಸ್ಥಳದಲ್ಲಿದ್ದ ಯಾರೋ ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಮಕ್ಕಳನ್ನು ಕರೆದೊಯ್ದ ಜಾಗ ಅತ್ಯಂತ ಅಪಾಯಕಾರಿಯಾಗಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ:
ವಿಡಿಯೋ ವೈರಲ್ ಆಗುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಮತ್ತು ಪೋಷಕರು ಶಾಲೆಗೆ ಮುತ್ತಿಗೆ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆಯು, ‘ಪ್ರಾಂಶುಪಾಲರ ಈ ವರ್ತನೆಯು ಶಿಕ್ಷಕರ ನೈತಿಕ ನಡವಳಿಕೆ ಸಂಹಿತೆಗೆ (Code of Conduct) ಸಂಪೂರ್ಣ ವಿರುದ್ಧವಾಗಿದೆ’ ಎಂದು ತಿಳಿಸಿ, ಪ್ರಿನ್ಸಿಪಾಲ್ನನ್ನು ತಕ್ಷಣವೇ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.
ಥಾನಗಾಜಿ ಪೊಲೀಸ್ ಠಾಣಾಧಿಕಾರಿ ರಾಜ್ಕುಮಾರ್ ಮೀನಾ ಮಾತನಾಡಿ, 'ವೈರಲ್ ವಿಡಿಯೋ ಆಧಾರದ ಮೇಲೆ ಪ್ರಿನ್ಸಿಪಾಲ್ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಸದ್ಯಕ್ಕೆ ಯಾವುದೇ ಲಿಖಿತ ದೂರು ಬಂದಿಲ್ಲವಾದರೂ, ಮಕ್ಕಳನ್ನು ಅಲ್ಲಿಗೆ ಕರೆದೊಯ್ದ ಉದ್ದೇಶದ ಕುರಿತು ಕೂಲಂಕಷ ತನಿಖೆ ನಡೆಸಲಾಗುತ್ತಿದೆ' ಎಂದು ತಿಳಿಸಿದ್ದಾರೆ. ಮುಖ್ಯ ಬ್ಲಾಕ್ ಶಿಕ್ಷಣಾಧಿಕಾರಿ (CBEO) ಶಕುಂತಲಾ ಯಾದವ್ ನೇತೃತ್ವದ ವಿಶೇಷ ತನಿಖಾ ತಂಡವು ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ಶೀಘ್ರದಲ್ಲೇ ವರದಿ ಸಲ್ಲಿಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ