
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿಯ ಮೂರು ಪಾಸ್ಪೋರ್ಟ್ಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ದೆಹಲಿ ನಿವಾಸಕ್ಕೆ ಅಸ್ಸಾಂ ಪೊಲೀಸರು ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳ ಪತ್ನಿ ನೀಡಿದ ದೂರಿನನ್ವಯ ವಿಚಾರಣೆ ನಡೆಸಲು ದೆಹಲಿ ಪೊಲೀಸರ ಸಹಾಯದೊಂದಿಗೆ ಅಸ್ಸಾಂ ತಂಡವು ಖೇರಾ ಅವರ ಮನೆಗೆ ತಲುಪಿದೆ.
ಏಪ್ರಿಲ್ 5 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ, 'ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಂಕಿ ಭೂಯಾನ್ ಶರ್ಮಾ ಅವರು ಮೂರು ಬೇರೆ ಬೇರೆ ಪಾಸ್ಪೋರ್ಟ್ಗಳನ್ನು ಹೊಂದಿದ್ದಾರೆ' ಎಂದು ಗಂಭೀರ ಆರೋಪ ಮಾಡಿದ್ದರು. ಭಾರತೀಯ ಕಾನೂನಿನ ಪ್ರಕಾರ ದ್ವಿಪೌರತ್ವಕ್ಕೆ ಅವಕಾಶವಿಲ್ಲದಿರುವಾಗ, ಅಸ್ಸಾಂ ಪತ್ನಿ ಅದ್ಹೇಗೆ ಮೂರು ಬೇರೆ ಬೇರೆ ಪಾಸ್ಪೋರ್ಟ್ಗಳನ್ನ ಹೊಂದಿದ್ದಾರೆ? ಇದು ಹೇಗೆ ಸಾಧ್ಯವಾಯ್ತು? ಮೂರು ಪಾಸ್ಪೋರ್ಟ್ಗಳು ಏಕೆ ಬೇಕು? ಅಸ್ಸಾಂ ಚುನಾವಣೆಯಲ್ಲಿ ಸೋತರೆ ದೇಶಬಿಟ್ಟು ಓಡಿಹೋಗಲು ತಯಾರಿ ನಡೆಸುತ್ತಿದ್ದಾರೆಯೇ ಎಂದು ಪವನ್ ಖೇರಾ ಪ್ರಶ್ನಿಸಿದ್ದರು.
ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರ ವಿರುದ್ಧ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡುತ್ತಾರೆ ಹೀಗಿರುವಾಗ ಅವರ ಪತ್ನಿ ಮಾತ್ರ ಎರಡು ಮುಸ್ಲಿಂ ರಾಷ್ಟ್ರಗಳ ಪಾಸ್ಪೋರ್ಟ್ ಹೊಂದಿರುವುದು ಏಕೆ? ಎಂದು ಖೇರಾ ವ್ಯಂಗ್ಯವಾಡಿದ್ದರು. ಈ ವಿಷಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದರು.
ಮೂರು ಪಾಸ್ಪೋರ್ಟ್ ವಿಚಾರವಾಗಿ ಪವನ್ ಖೇರಾ ಮಾಡಿರುವ ಗಂಭಿರ ಆರೋಪಗಳನ್ನ ತಳ್ಳಿಹಾಕಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಇವು ಆಧಾರರಹಿತ ಸುಳ್ಳುಗಳು ಎಂದು ಹೇಳಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಹಿಮಂತ್ ಪತ್ನಿ ರಿಂಕಿ ಭೂಯಾನ್ ಪವನ್ ಖೇರಾ ವಿರುದ್ಧ ಮಾನನಷ್ಟ ಮೊಕದ್ದಮೆ ಮತ್ತು ಎಫ್ಐಆರ್ ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಈಗ ಕ್ರಮಕ್ಕೆ ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ