
ಭೋಪಾಲ್(ನ.19): ರಾಜ್ಯದಲ್ಲಿ ಗೋವುಗಳ ರಕ್ಷಣೆ ಮತ್ತು ಗೋ ಉತ್ಪನ್ನಗಳ ಉತ್ತೇಜನಕ್ಕಾಗಿ ಮೀಸಲಾದ ಸಚಿವ ಸಂಪುಟವೊಂದನ್ನು ರಚಿಸಲು ಮಧ್ಯಪ್ರದೇಶ ಸರ್ಕಾರ ತೀರ್ಮಾನಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಗೋವಿನ ರಕ್ಷಣೆಯ ಕುರಿತಂತೆ ಸಂಪುಟ ಸಭೆಯನ್ನು ನಡೆಸುತ್ತಿರುವುದು ಇದೇ ಮೊದಲು.
‘ಗೋವು ಕ್ಯಾಬಿನೆಟ್’ ಎಂದು ಕರೆಯಲ್ಪಡುವ ಈ ಸಂಪುಟ ಸಭೆಯಲ್ಲಿ ಪಶುಸಂಗೋಪನೆ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣ ಅಭಿವೃದ್ಧಿ, ಕಂದಾಯ, ಗೃಹ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಚಿವರು ಇರಲಿದ್ದಾರೆ. ಗೋವು ಕ್ಯಾಬಿನೆಟ್ನ ಮೊದಲ ಸಭೆ ನ.22ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಅಗರ್ ಮಾಲ್ವಾ ಜಿಲ್ಲೆಯಲ್ಲಿರುವ ಗೋ ಶಾಲೆಯಲ್ಲಿ ಗೋಪಾಷ್ಟಮಿಯ ನಿಮಿತ್ತ ಈ ಸಂಪುಟ ಸಭೆಯನ್ನು ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಚೌಹಾಣ್ ಅವರ ಜೊತೆ ಗೃಹ ಸಚಿವ ನರೋತ್ತಮ್ ಮಿಶ್ರಾ, ಅರಣ್ಯ ಸಚಿವ ವಿಜಯ್ ಶಾ, ಕೃಷಿ ಸಚಿವ ಕಮಲ್ ಪಟೇಲ್, ಪಂಚಾಯತ್ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಮತ್ತು ಪಶುಸಂಗೋಪನಾ ಸಚಿವ ಪ್ರೇಮ್ ಸಿಂಗ್ ಪಟೇಲ್ ಅವರು ಸಂಪುಟ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಗೋವಿನ ಸಗಣಿಯ ಬೆರಣಿ ಹಾಗೂ ಗೋ ಕಾಸ್ಟದ ಉತ್ಪಾದನೆ ಹೆಚ್ಚಳಕ್ಕೆ ಕಾರ್ಯಸೂಚಿ ಜಾರಿ ಹಾಗೂ ಹಾಲಿನ ಉತ್ಪನ್ನಗಳಿಗೆ ಮಾರುಕಟ್ಟೆಒದಗಿಸುವ ಕುರಿತಂತೆ 6 ಸಚಿವಾಲಯಗಳ ಸಹಯೋಗದೊಂದಿಗೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ