ಅಂಫನ್‌ ಸೈಕ್ಲೋನ್‌ ರುದ್ರನರ್ತನ: ಪ.ಬಂಗಾಳ, ಒಡಿಶಾದಲ್ಲಿ ಭಾರೀ ವಿನಾಶ!

Published : May 21, 2020, 08:26 AM IST
ಅಂಫನ್‌ ಸೈಕ್ಲೋನ್‌ ರುದ್ರನರ್ತನ: ಪ.ಬಂಗಾಳ, ಒಡಿಶಾದಲ್ಲಿ ಭಾರೀ ವಿನಾಶ!

ಸಾರಾಂಶ

ಅಂಫನ್‌ ಸೈಕ್ಲೋನ್‌ ರುದ್ರನರ್ತನ| ಗಂಟೆಗೆ 190 ಕಿ.ಮೀ. ವೇಗದಲ್ಲಿ ಬೀಸಿದ ಚಂಡಮಾರುತ| ಪ.ಬಂಗಾಳ, ಒಡಿಶಾದಲ್ಲಿ ಭಾರೀ ವಿನಾಶ; 2 ಸಾವು| 6.58 ಲಕ್ಷ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಕೋಲ್ಕತಾ/ಭುವನೇಶ್ವರ(ಮೇ.21): ಭೀಕರ ‘ಅಂಫನ್‌’ ಚಂಡಮಾರುತ ಬುಧವಾರ ಪಶ್ಚಿಮ ಬಂಗಾಳದ ಕರಾವಳಿಗೆ ಬುಧವಾರ ಅಪ್ಪಳಿಸಿದೆ. ಗಂಟೆಗೆ 190 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಅಪ್ಪಳಿಸಿರುವ ಈ ಚಂಡಮಾರುತ, ಬಂಗಾಳ ಹಾಗೂ ಒಡಿಶಾದಲ್ಲಿ ಮೊದಲ ದಿನವೇ ವ್ಯಾಪಕ ವಿನಾಶ ಸೃಷ್ಟಿಸಿದೆ. ಬಂಗಾಳದಲ್ಲಿ ಇಬ್ಬರು ಮಹಿಳೆಯರು ಅಸುನೀಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಂಗಾಳದಲ್ಲಿ 5 ಲಕ್ಷ ಹಾಗೂ ಒಡಿಶಾದಲ್ಲಿ 1.58 ಲಕ್ಷ ಜನ ಸೇರಿದಂತೆ ಒಟ್ಟು 6.58 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಮಧ್ಯಾಹ್ನ 2.30ಕ್ಕೆ ಚಂಡಮಾರುತವು ಪ.ಬಂಗಾಳದ ದಿಘಾ ಹಾಗೂ ಬಾಂಗ್ಲಾದೇಶದ ಹಟಿಯಾ ದ್ವೀಪದ ನಡುವೆ ಬಂದು ಅಪ್ಪಳಿಸಿತು. ಮೊದಲು 170 ಕಿ.ಮೀ. ವೇಗದಲ್ಲಿದ್ದ ಚಂಡಮಾರುತ 190 ಕಿ.ಮೀ. ವೇಗ ಪಡೆದುಕೊಂಡಿತು. ಇದರಿಂದಾಗಿ ಬಂಗಾಳದ ಹಲವೆಡೆ ಕರಾವಳಿ ಪ್ರದೇಶಗಳು ತತ್ತರಗೊಂಡಿದ್ದು, ಜನವಸತಿ ಪ್ರದೇಶಗಳು ಮುಳುಗಿವೆ. ಮರಗಳು ಹಾಗೂ ವಿದ್ಯುತ್‌ ಕಂಬಗಳು ಧರಾಶಾಯಿ ಆಗಿವೆ. ಹೌರಾ ಜಿಲ್ಲೆ ಹಾಗೂ ಉತ್ತರ 24 ಪರಗಣ ಜಿಲ್ಲೆಯಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.

ರಕ್ಷಣಾ ಕಾರ್ಯಗಳಿಗೆಂದು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯು (ಎನ್‌ಡಿಆರ್‌ಎಫ್‌), 20 ತಂಡಗಳನ್ನು ಒಡಿಶಾಗೆ ಹಾಗೂ 19 ತಂಡಗಳನ್ನು ಪ.ಬಂಗಾಳಕ್ಕೆ ಕಳಿಸಿಕೊಟ್ಟಿದೆ. ಪಡೆಗಳು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿವೆ ಹಾಗೂ ಬಿದ್ದ ಮರ ತೆರವು ಮಾಡಿ ರಸ್ತೆ ಸಂಚಾರ ಸುಗಮಕ್ಕೆ ದಾರಿ ಮಾಡಿಕೊಡುತ್ತಿವೆ. ಚಂಡಮಾರುತದ ಭೀಕರತೆ ಎಷ್ಟಿತ್ತೆಂದರೆ ದೈತ್ಯಾಕಾರದ ಅಲೆಗಳು ಕರಾವಳಿಗೆ ಅಪ್ಪಳಿಸುತ್ತಿರುವುದು ಹಾಗೂ ಭೀಕರ ಮಳೆ ಸುರಿಯುತ್ತಿರುವುದು ದೃಶ್ಯಗಳಲ್ಲಿ ಗೋಚರಿಸಿತು.

ಕೋಲ್ಕತಾ, ಪರಗಣ, ಹೂಗ್ಲಿ, ಮೇದಿನಿಪುರ ಸೇರಿದಂತೆ ಬಂಗಾಳದ ಅನೇಕ ಭಾಗಗಳು, ಒಡಿಶಾದ ಪುರಿ, ಜಗತ್‌ಸಿಂಗ್‌ಪುರ, ಕಟಕ್‌, ಬಾಲಸೋರ್‌ ಸೇರಿದಂತೆ ಅನೇಕ ಕಡೆ ಭಾರಿ ಮಳೆ ವರದಿ ಬಂದಿವೆ. ಇನ್ನೂ 1-2 ದಿನ ಬೀಸಿ ಚಂಡಮಾರುತ ದುರ್ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮನ ಇಲಾಖೆ ಹೇಳಿದೆ.

ವಂದೇ ಭಾರತ ಎಕ್ಸ್‌ಪ್ರೆಸ್‌ಗಿಂತ ವೇಗದ ಮಾರುತ!

ಅಂಫಾನ್‌ ಚಂಡಮಾರುತವು ವಂದೇಭಾರತ ಎಕ್ಸ್‌ಪ್ರೆಸ್‌ ರೈಲಿನ ವೇಗಕ್ಕಿಂತ ಹೆಚ್ಚು ವೇಗವಾಗಿ ಬೀಸಿದೆ. ವಂದೇಭಾರತ ಎಕ್ಸ್‌ಪ್ರೆಸ್‌ ಗಂಟೆಗೆ 160 ಕಿ.ಮೀ. ವೇಗದಲ್ಲಿ ಓಡುತ್ತಿದ್ದರೆ, ಅಂಫಾನ್‌ ಗಂಟೆಗೆ 190 ಕಿ.ಮೀ. ವೇಗದಲ್ಲಿ ಬೀಸಿದೆ.

ಅಂಫನ್‌ ಎಂದರೆ ಆಕಾಶ

ಅಂಫನ್‌ ಎಂದು ಈ ಚಂಡಮಾರುತಕ್ಕೆ ಹೆಸರು ಇಟ್ಟಿದ್ದು ಥಾಯ್ಲೆಂಡ್‌. 2004ರಲ್ಲೇ ಅದು ನಾಮಕರಣ ಮಾಡಿತ್ತು. ಅಂಫನ್‌ ಎಂದರೆ ‘ಆಕಾಶ’ ಎಂದರ್ಥ. ‘ಉಂಪುನ್‌’ ಎಂದೂ ಥಾಯ್‌ ಭಾಷೆಯಲ್ಲಿ ಇದಕ್ಕೆ ಸಂಬೋಧಿಸುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!