
ನವದೆಹಲಿ(ಜ.07): ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ಸರ್ಕಾರಗಳು ಜಾರಿಗೆ ತಂದಿರುವ ‘ಮದುವೆಗಾಗಿ ಮತಾಂತರ ನಿಷೇಧ’ ಕಾಯ್ದೆಗಳು ಸಂವಿಧಾನಬದ್ಧವಾಗಿವೆಯೇ ಇಲ್ಲವೇ ಎಂಬುದನ್ನು ಪರಾಮರ್ಶಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಲು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರ ಪೀಠ ಎರಡೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಿದೆ.
‘ಲವ್ ಜಿಹಾದ್ ನಿಷೇಧ ಕಾಯ್ದೆ’ ಎಂದೇ ಪ್ರಸಿದ್ಧವಾಗಿರುವ ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಸುಗ್ರೀವಾಜ್ಞೆ-2020 ಹಾಗೂ ಉತ್ತರಾಖಂಡದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ-2018ನ್ನು ಪ್ರಶ್ನಿಸಿ ಕೆಲ ವಕೀಲರು ಹಾಗೂ ಎನ್ಜಿಒಗಳು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು. ಬುಧವಾರ ಇವುಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಮೊದಲಿಗೆ ಈ ಅರ್ಜಿಗಳನ್ನು ಆಯಾ ರಾಜ್ಯಗಳ ಹೈಕೋರ್ಟ್ನಲ್ಲಿ ಸಲ್ಲಿಸಲು ಸೂಚಿಸಿತು. ಆಗ ಹಿರಿಯ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ‘ಇನ್ನೂ ಹಲವು ರಾಜ್ಯಗಳಲ್ಲಿ ಇಂತಹುದೇ ಕಾಯ್ದೆ ಜಾರಿಗೆ ತರಲಾಗುತ್ತಿದೆ. ಕೆಲ ರಾಜ್ಯಗಳಲ್ಲಿ ಮದುವೆ ನಡೆಯುತ್ತಿರುವಾಗಲೇ ಜನರನ್ನು ‘ಎತ್ತಾಕಿಕೊಂಡು’ ಹೋಗಲಾಗುತ್ತಿದೆ. ಜನರಿಗೆ ಸಂವಿಧಾನಬದ್ಧವಾಗಿ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಈ ಕಾಯ್ದೆಗಳು ಉಲ್ಲಂಘಿಸುತ್ತಿವೆ. ಹೀಗಾಗಿ ಈ ಕಾಯ್ದೆಗಳಿಗೆ ತಡೆ ನೀಡಿ ಸುಪ್ರೀಂಕೋರ್ಟ್ನಲ್ಲೇ ವಿಚಾರಣೆ ನಡೆಸಬೇಕು’ ಎಂದು ಕೋರಿದರು.
ಆಗ ಉತ್ತರಪ್ರದೇಶ ಹಾಗೂ ಉತ್ತರಾಖಂಡ ಸರ್ಕಾರಗಳ ವಾದವನ್ನೇ ಆಲಿಸದೆ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಪೀಠ, ಸುಪ್ರೀಂಕೋರ್ಟ್ನಲ್ಲೇ ಈ ಕಾಯ್ದೆಗಳ ಸಂವಿಧಾನಬದ್ಧತೆಯನ್ನು ನಿಷ್ಕರ್ಷೆ ಮಾಡುವುದಾಗಿ ಹೇಳಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ