
ಚೆನ್ನೈ (ಮೇ 4): ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿದ್ದ ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಇಂದು (ಸೋಮವಾರ) ಆರಂಭವಾಗಿದೆ. ಕಳೆದ ಏಪ್ರಿಲ್ 23 ರಂದು ನಡೆದ ಮತದಾನದ ಫಲಿತಾಂಶ ಇಂದು ಹೊರಬೀಳಲಿದ್ದು, ತಮಿಳುನಾಡಿನ ಮುಂದಿನ ಸರ್ಕಾರ ಯಾರದ್ದು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.
ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಈ ಬಾರಿ ಹಿಂದೆಂದೂ ಕಾಣದ ಕುತೂಹಲ ಮೂಡಿದೆ. ಡಿಎಂಕೆ ಮತ್ತೆ ಅಧಿಕಾರ ಉಳಿಸಿಕೊಂಡು ಇತಿಹಾಸ ಸೃಷ್ಟಿಸುತ್ತದೆಯೇ? ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟ ಮತ್ತೆ ಗದ್ದುಗೆ ಹಿಡಿಯಲಿದೆಯೇ? ಎಲ್ಲಕ್ಕಿಂತ ಹೆಚ್ಚಾಗಿ, ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ 'ತಮಿಳಗ ವೆಟ್ರಿ ಕಳಗಂ' (TVK) ಪಕ್ಷದ ಅಧ್ಯಕ್ಷ, ನಟ ವಿಜಯ್ ಅಧಿಕಾರ ಹಿಡಿಯುತ್ತಾರಾ? ಅಥವಾ ಬಲಿಷ್ಠ ವಿರೋಧ ಪಕ್ಷದ ನಾಯಕರಾಗಿ ವಿಧಾನಸಭೆ ಪ್ರವೇಶಿಸುತ್ತಾರಾ? ಎಂಬ ಪ್ರಶ್ನೆಗಳಿಗೆ ಇಂದು ಸಂಜೆಯ ವೇಳೆಗೆ ಉತ್ತರ ಸಿಗಲಿದೆ.
ರಾಜ್ಯಾದ್ಯಂತ ಸ್ಥಾಪಿಸಲಾದ 62 ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಇವಿಎಂ ಯಂತ್ರಗಳನ್ನು ಇರಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. 15 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಮತ ಎಣಿಕೆ ಕೇಂದ್ರಗಳ ಸುತ್ತ 18 ಸಾವಿರ ಪೊಲೀಸರು ಹಾಗೂ 70 ಕಂಪನಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ರಾಜ್ಯಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಒಟ್ಟು 1 ಲಕ್ಷ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಬೆಳಿಗ್ಗೆ 11 ಗಂಟೆಯ ವೇಳೆಗೆ ಆರಂಭಿಕ ಟ್ರೆಂಡ್ ತಿಳಿಯಲಿದ್ದು, ಸಂಜೆ ಅಥವಾ ಮಧ್ಯರಾತ್ರಿಯ ವೇಳೆಗೆ ಅಧಿಕೃತ ಫಲಿತಾಂಶಗಳು ಹೊರಬೀಳಲಿವೆ.
ತಮಿಳುನಾಡಿನಲ್ಲಿ ಈ ಬಾರಿ ಒಟ್ಟು 4,023 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 5.73 ಕೋಟಿ ಮತದಾರರ ಪೈಕಿ 4.88 ಕೋಟಿ ಜನರು ಹಕ್ಕು ಚಲಾಯಿಸಿದ್ದು, ದಾಖಲೆಯ 85.10% ಮತದಾನವಾಗಿದೆ. ಇದು ರಾಜ್ಯದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರೆ, ಎಡಪ್ಪಾಡಿ ಕೆ. ಪಳನಿಸ್ವಾಮಿ, ಎಡಪ್ಪಾಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಇನ್ನು ನಟ ಜೋಸೆಫ್ ವಿಜಯ್ ತಿರುಚ್ಚಿ ಪೂರ್ವ ಮತ್ತು ಪೆರಂಬೂರ್ ಕ್ಷೇತ್ರಗಳಿಂದ ಕಣದಲ್ಲಿದ್ದಾರೆ. ನಾಮ್ ತಮಿಳರ್ ಕಕ್ಷಿಯ ಮುಖ್ಯಸ್ಥ ಸೀಮನ್ ಕಾರೈಕುಡಿ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ