ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಪರ್ವದಿಂದ ಪುದುಚೇರಿ ಮಾಜಿ ಮುಖ್ಯಮಂತ್ರಿ ನಾರಾಯಣ ಸಾಮಿ ಸರ್ಕಾರ ಪತನ| ಪುದುಚೇರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ: ಕೇಂದ್ರ ಘೋಷಣೆ
ನವದೆಹಲಿ(ಫೆ.25): ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಪರ್ವದಿಂದ ಪುದುಚೇರಿ ಮಾಜಿ ಮುಖ್ಯಮಂತ್ರಿ ನಾರಾಯಣ ಸಾಮಿ ಸರ್ಕಾರ ಪತನದ ಬೆನ್ನಲ್ಲೇ, ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಮೇಲೆ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿದೆ.
ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದ ಪತನದ ಬಳಿಕ ಯಾವೊಂದು ಪಕ್ಷವೂ ಸರ್ಕಾರ ರಚನೆಗೆ ಮುಂದೆ ಬಂದಿಲ್ಲ. ಹೀಗಾಗಿ ಪುದುಚೇರಿ ಮೇಲೆ ರಾಷ್ಟ್ರಪತಿ ಆಳ್ವಿಕೆ ಮಾಡಬೇಕೆಂಬ ಅಲ್ಲಿನ ಉಪ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಈ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅಂಗೀಕಾರ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ರಾಷ್ಟ್ರಪತಿಗಳ ಅನುಮೋದನೆ ಬಳಿಕ ಪುದುಚೇರಿ ವಿಧಾನಸಭೆಯನ್ನು ವಿಸರ್ಜಿಸಲಾಗುತ್ತದೆ ಎಂದರು.
ತನ್ಮೂಲಕ ನಾರಾಯಣಸಾಮಿ ರಾಜೀನಾಮೆ ಬಳಿಕ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯಲ್ಲಿ ಸರ್ಕಾರ ರಚನೆಯಾಗಬಹುದೆಂಬ ಕುತೂಹಲಕ್ಕೆ ತೆರೆಬಿದ್ದಿದೆ.