
ನವದೆಹಲಿ : ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶದ ಜನರಲ್ಲಿ ತೀವ್ರ ಆತಂಕ ಮೂಡಿಸಿರುವ ಮಂಗನ ಕಾಯಿಲೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ವಿಜ್ಞಾನಿಗಳು ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಾಣಿಗಳ ಮೇಲಿನ ಪ್ರಯೋಗದ ಬಳಿಕ ಇದೀಗ ಮಾನವರ ಮೇಲೆ ಲಸಿಕೆಯ ಕ್ಲಿನಿಕಲ್ ಪ್ರಯೋಗ ಆರಂಭಿಸಲಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಕರ್ನಾಟಕ ಸರ್ಕಾರದ ಕೋರಿಕೆಯ ಮೇರೆಗೆ, ಐಸಿಎಂಆರ್ ಲಸಿಕೆ ಅಭಿವೃದ್ಧಿಪಡಿಸಿದೆ. 2 ಡೋಸ್ಗಳ ಈ ಲಸಿಕೆಯನ್ನು ದ ಇಂಡಿಯನ್ ಇಮ್ಯುನುಲಾಜಿಕಲ್ಸ್ (ಐಐಎಲ್) ಮತ್ತು ಐಸಿಎಂಆರ್ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. 28 ದಿನಗಳ ಅಂತರದಲ್ಲಿ 2 ಸಲ ನೀಡುವ ರೀತಿಯ ಲಸಿಕೆಯನ್ನು ಇದೀಗ ಅಭಿವೃದ್ಧಿಪಡಿಸಲಾಗಿದೆ.
‘ಈಗಾಗಲೇ ಲಸಿಕೆಯನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಲಾಗಿದೆ. ಅದನ್ನು ಪ್ರಾಣಿಗಳ ಮೇಲೆ ಪ್ರಯೋಗಿಸಲಾಗಿದೆ. ಲಸಿಕೆಯ ವಿಷಕಾರಿ ಅಂಶಗಳ ಅಧ್ಯಯನಗಳು ಪೂರ್ಣಗೊಂಡಿವೆ. ಇದೀಗ ಮಾನವನ ಮೇಲಿನ ಮೊದಲನೇ ಹಂತದ ಪ್ರಾಯೋಗಿಕ ಪರೀಕ್ಷೆ ಆರಂಭಿಸಲಾಗಿದೆ. ಈ ಹಂತ ಯಶಸ್ವಿಯಾದರೆ ಮುಂದಿನ ಪ್ರಯೋಗಗಳನ್ನು ನಡೆಸಲಾಗುತ್ತದೆ. ಲಸಿಕೆ ಸುರಕ್ಷಿತ ಎಂದು ಖಚಿತವಾದರೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಮಂಡಳಿಯಿಂದ ಅನುಮೋದನೆ ಪಡೆಯಲಾಗುವುದು’ ಎಂದು ಸಚಿವಾಲಯ ತಿಳಿಸಿದೆ.
ಮಂಗನ ಕಾಯಿಲೆಯು ಪಶ್ಚಿಮಘಟ್ಟ ಪ್ರದೇಶದಲ್ಲಿ ವ್ಯಾಪಕವಾಗಿದ್ದು, ಕರ್ನಾಟಕ, ತಮಿಳುನಾಡು, ಕೇರಳ, ಗೋವಾ ಮತ್ತು ಮಹಾರಾಷ್ಟ್ರದ ರಾಜ್ಯಗಳಲ್ಲಿ ತೀವ್ರವಾಗಿದೆ.
ಶಿವಮೊಗ್ಗ ಬಳಿಯ ಕ್ಯಾಸನೂರಿನ ಕಾಡಿನಲ್ಲಿ 1957ರಲ್ಲಿ ಮೊದಲ ಬಾರಿಗೆ ಈ ವೈರಸ್ ಕೋತಿಯಲ್ಲಿ ಕಂಡುಬಂದಿತ್ತು. ಇದನ್ನು ಕ್ಯಾಸನೂರು ಕಾಡಿನ ಕಾಯಿಲೆ ಅಥವಾ ಮಂಗನ ಕಾಯಿಲೆ ಎಂದು ಕರೆಯಲಾಗುತ್ತದೆ. ಇದು ಸೋಂಕಿತ ಪ್ರಾಣಿಗಳಿಂದ ಮಾನವರಿಗೆ ಹಬ್ಬುತ್ತದೆ. ಆದರೆ ಮಾನವರಿಂದ ಮಾನವರಿಗೆ ಹಬ್ಬುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ