
ಹಿಂದೂಗಳ ಅತ್ಯಂತ ಪವಿತ್ರ ಕ್ಷೇತ್ರವಾದ ವಾರಣಾಸಿಯ ಗಂಗಾನದಿಯ ಮಧ್ಯ ಬೋಟಿಂಗ್ನಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಮಾಂಸಾಹಾರಿ ಬಿರಿಯಾನಿ ಸೇವಿಸಿ ಅದರ ಮೂಳೆಗಳನ್ನು ನದಿಗೆ ಎಸೆದ ಗಂಭೀರ ಆರೋಪದ ಮೇಲೆ ವಾರಣಾಸಿ ಪೊಲೀಸರು 14 ಯುವಕರನ್ನು ಬಂಧಿಸಿದ್ದಾರೆ.
ಸದ್ಯ ರಂಜಾನ್ ಮಾಸ ನಡೆಯುತ್ತಿದ್ದು, ಸೋಮವಾರ ಸಂಜೆ ವಾರಣಾಸಿಯ ಪಂಚಗಂಗಾ ಘಾಟ್ ಸಮೀಪದ ಗಂಗಾನದಿಯಲ್ಲಿ ಒಂದು ಗುಂಪು ಬೋಟ್ನಲ್ಲಿ ಇಫ್ತಾರ್ ಕೂಟವನ್ನು ಹಮ್ಮಿಕೊಂಡಿತ್ತು. ಈ ವೇಳೆ ನದಿಯ ಮಧ್ಯಭಾಗದಲ್ಲಿ ಬೋಟ್ ನಿಲ್ಲಿಸಿ ಎಲ್ಲರೂ ಸೇರಿ ಬಿರಿಯಾನಿ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ವಿಡಿಯೋದಲ್ಲಿ ಯುವಕರು ಮಾಂಸಾಹಾರ ಸೇವಿಸುವುದು ಮಾತ್ರವಲ್ಲದೆ, ತಿಂದ ನಂತರ ಉಳಿದ ಮೂಳೆಗಳನ್ನು ಪವಿತ್ರ ಗಂಗಾನದಿಯ ನೀರಿಗೆ ಎಸೆಯುತ್ತಿರುವುದು ಕಂಡುಬಂದಿತ್ತು.
ಈ ವಿಡಿಯೋ ಸಾರ್ವಜನಿಕವಾಗಿ ಹರಿದಾಡುತ್ತಿದ್ದಂತೆ ಹಿಂದೂ ಸಂಘಟನೆಗಳು ಮತ್ತು ಸ್ಥಳೀಯರಲ್ಲಿ ಭಾರಿ ಆಕ್ರೋಶ ವ್ಯಕ್ತವಾಯಿತು. ಬಿಜೆಪಿ ಯುವ ಮೋರ್ಚಾದ ಮಹಾನಗರ ಅಧ್ಯಕ್ಷ ರಜತ್ ಜೈಸ್ವಾಲ್ ಅವರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 'ಕೋಟಿಗಟ್ಟಲೆ ಹಿಂದೂಗಳ ಆರಾಧ್ಯ ದೇವತೆಯಾಗಿರುವ ಗಂಗೆಯನ್ನು ಈ ರೀತಿ ಅಪವಿತ್ರಗೊಳಿಸುವುದು ಅಕ್ಷಮ್ಯ ಅಪರಾಧ. ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದಲೇ ಈ ಕೃತ್ಯ ಎಸಗಲಾಗಿದೆ' ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ದೂರು ದಾಖಲಾದ ಬೆನ್ನಲ್ಲೇ ತಕ್ಷಣ ಕಾರ್ಯಪ್ರವೃತ್ತರಾದ ವಾರಣಾಸಿಯ ಕೊತ್ವಾಲಿ ಪೊಲೀಸರು ವಿಡಿಯೋದ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 14 ಮುಸ್ಲಿಂ ಯುವಕರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ಆರೋಪಿಗಳ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಸೇರಿದಂತೆ ಐಪಿಸಿಯ ವಿವಿಧ ಗಂಭೀರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಾರಣಾಸಿಯು ಧಾರ್ಮಿಕವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಅದರಲ್ಲೂ ರಾಮನವಮಿ ಹಬ್ಬದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿರುವುದು ನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಗಂಗಾನದಿಯಲ್ಲಿ ಮಾಂಸಾಹಾರ ಸೇವನೆ ನಿಷೇಧಿತವಾಗಿದ್ದರೂ, ಕಾನೂನು ಉಲ್ಲಂಘಿಸಿ ನದಿಯ ಮಧ್ಯಭಾಗದಲ್ಲಿ ಇಂತಹ ಕೃತ್ಯ ಎಸೆಗಿರುವುದು ಆತಂಕಕ್ಕೆ ಕಾರಣವಾಗಿದೆ. 'ಪವಿತ್ರ ನದಿಯ ಗೌರವ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಪರ-ವಿರೋಧದ ಚರ್ಚೆಗಳನ್ನು ಹುಟ್ಟುಹಾಕಿದ್ದು, ಪವಿತ್ರ ಸ್ಥಳಗಳ ಘನತೆಯನ್ನು ಕಾಪಾಡುವ ಬಗ್ಗೆ ಜಾಗೃತಿ ಮೂಡಬೇಕಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ