ಕೋಲ್ಕತಾ (ಮೇ.12): ಬಾಂಗ್ಲಾದಿಂದ ಅಕ್ರಮ ಗಡಿ ನುಸುಳುವಿಕೆ ತಡೆಯನ್ನು ತನ್ನ ಪ್ರಮುಖ ಚುನಾವಣಾ ವಿಷಯಗಳ ಪೈಕಿ ಒಂದಾಗಿ ಮಾಡಿದ್ದ ಪಶ್ಚಿಮ ಬಂಗಾಳ ಬಿಜೆಪಿ, ತನ್ನ ಮೊದಲ ಸಂಪುಟ ಸಭೆಯಲ್ಲೇ ಗಡಿಯನ್ನು ಮತ್ತಷ್ಟು ಬಿಗಿಗೊಳಿಸುವ ಸಲುವಾಗಿ ಸೇನೆಗೆ ಜಾಗ ಹಸ್ತಾಂತರ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಸೋಮವಾರ ಇಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಗಡಿ ನಿರ್ಮಾಣಕ್ಕೆ ಅಗತ್ಯವಾದ ಭೂಮಿಯನ್ನು 45 ದಿನಗಳ ಒಳಗೆ ಬಿಎಸ್ಎಫ್ಗೆ, ಜೂನ್ 1ರಿಂದ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ, ಕೇಂದ್ರದ ಹಲವು ಯೋಜನೆಗಳ ವ್ಯಾಪ್ತಿಗೆ ಸೇರುವ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಯಿತು.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುವೇಂದು, ‘ಗಡಿ ಜಿಲ್ಲೆಗಳಲ್ಲಿ ಜನಸಂಖ್ಯಾಶಾಸ್ತ್ರ (ಡೆಮಾಗ್ರಫಿ) ನಿರಂತರವಾಗಿ ಬದಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಗಡಿಯಲ್ಲಿ ಬೇಲಿಗಳನ್ನು ನಿರ್ಮಿಸಲು ಬಿಎಸ್ಎಫ್ಗೆ ಅಗತ್ಯವಾದ ಭೂಮಿಯನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ನಮ್ಮ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂದಿನ 45 ದಿನಗಳಲ್ಲಿ ಭೂ ವರ್ಗಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯದ ಭೂ ಮತ್ತು ಭೂ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗೆ ಸೂಚಿಸಲಾಗಿದೆ’ ಎಂದರು.
ಉಳಿದಂತೆ ಆಯುಷ್ಮಾನ್ ಭಾರತ್ ಯೋಜನೆ ಜಾರಿ, ಜನಗಣತಿ ಆರಂಭ, ಪಿಎಂ ಜನ ಆರೋಗ್ಯ ಯೋಜನೆ, ಪಿಎಂ ಫಸಲ್ ಬಿಮಾ ಯೋಜನೆ, ಪಿಎಂ ಶ್ರೀ, ಪಿಎಂ ವಿಶ್ವಕರ್ಮ ಯೋಜನೆ ವ್ಯಾಪ್ತಿಗೆ ಸೇರ್ಪಡೆ, ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ತಕ್ಷಣದ ಅನುಷ್ಠಾನ, ಹಿಂದಿನ ವರ್ಷಗಳಲ್ಲಿ ನೇಮಕಾತಿ ಅವಕಾಶ ತಪ್ಪಿಸಿಕೊಂಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ, ಐಎಎಸ್, ಐಪಿಎಸ್ ಮತ್ತು ಡಬ್ಲ್ಯೂಬಿಪಿಎಸ್ ಅಧಿಕಾರಿಗಳನ್ನು ತರಬೇತಿಗಾಗಿ ಇತರ ರಾಜ್ಯಗಳಿಗೆ ಕಳುಹಿಸಲು ಅವಕಾಶ ನೀಡುವ ಹಿಂದಿನ ನೀತಿಯನ್ನು ರದ್ದುಗೊಳಿಸಲಾಗಿದೆ.
ಭೂಮಿಗೆ ವಿರೋಧ:
ಹಿಂದಿನ ಟಿಎಂಸಿ ಸರ್ಕಾರದ ಅವಧಿಯಲ್ಲಿ ಗಡಿಯಲ್ಲಿ ಬೇಲಿ ನಿರ್ಮಿಸಲು ಅಗತ್ಯ ಭೂಮಿ ಹಸ್ತಾಂತರಕ್ಕೆ ಮುಖ್ಯಮಂತ್ರಿ ಮಮತಾ ಷರತ್ತು ಒಡ್ಡಿದ್ದರು. ಹೀಗಾಗಿ ಗಡಿಯಲ್ಲಿ ಬೇಲಿ ನಿರ್ಮಾಣಕ್ಕೆ ಅಡ್ಡಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ