
ಕೋಲ್ಕತಾ(ಮಾ.03) ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಮ್ದಾರ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿ 12ರಲ್ಲಿ ತೆರಳುತ್ತಿದ್ದ ವೇಳೆ ಶಾಂತಿಪುರದಲ್ಲಿ ಅಪಘಾತ ಸಂಭವಿಸಿದೆ. ಅದೃಷ್ಠವಶಾತ್ ಸುಕಾಂತಾ ಮಜುಮ್ದಾರ್ ಬೇರೊಂದು ಕಾರಿನಲ್ಲಿದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಇತ್ತ ಬೆಂಗಾವಲು ವಾಹನದಲ್ಲಿದ್ದ ಚಾಲಕ ಹಾಗೂ ಭದ್ರತಾ ಸಿಬ್ಬಂಧಿಗಳು ಕೂಡ ಸುರಕ್ಷಿತವಾಗಿದ್ದಾರೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸುಕಾಂತ ಮಜುಮ್ದಾರ್ ಹಾಗೂ ಆವರ ಬೆಂಗಾವಲು ವಾಹನ ಹೆದ್ದಾರಿ ಮೂಲಕ ಸಾಗಿತ್ತು. ವೇಗವಾಗಿ ಸಾಗುತ್ತಿದ್ದ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಸುಕಾಂತ ಮಜುಮ್ದಾರ್ ಅವರಿಗೆ ಭದ್ರತೆ ಒದಗಿಸಲು ಪೊಲೀಸರು ಕಾರಿನ ಮೂಲಕ ಬೆಂಗಾವಲಾಗಿ ಸಾಗಿದ್ದರು. ಪೊಲೀಸರ ಈ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಸುಕಾಂತ ಮಜುಮ್ದಾರ್ ಬೆಂಗವಾಲು ವಾಹನ ಅಪಘಾತಕ್ಕೆ ಕಾರಣ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಸುಕಾಂತ ಮಜುಮ್ದಾರ್ ಪ್ರತಿಭಟನೆ ವೇಳೆ ಅಸ್ವಸ್ಥರಾಗಿ ಬಿದ್ದು ಗಾಯಗೊಂಡಿದ್ದರು. ಇಷ್ಟೇ ಅಲ್ಲ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ಆಪ್ತರು ಮತ್ತು ಕಾರ್ಯಕರ್ತರು ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಸಂದೇಶ್ಖಾಲಿ ಗ್ರಾಮದ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸುಕಾಂತ ಮಜುಂದಾರ್ ಕಾರಿನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.
ಕಾರಿನ ಬಾನೆಟ್ ಮೇಲೆ ನಿಂತು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಮಜುಂದಾರ್ ಆಯತಪ್ಪಿ ಕೆಳಗೆ ಬಿದ್ದರು. ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಸುಕಾಂತ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇದೀಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಕಾಂತ ಮಜುಮ್ದಾರ್ ಸತತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ