
ಲಖನೌ(ಜೂ.21): ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಬಿಜೆಪಿ ಜಯಿಸಿದರೆ ಮುಂದಿನ ಅವಧಿಗೂ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ ಎಂಬ ಪ್ರಶ್ನೆಗಳು ಈಗ ಉದ್ಭವಿಸಿವೆ. ಇದಕ್ಕೆ ಇಂಬು ಕೊಡುವಂತೆ ವಾರಾಣಸಿ ಸಂಸದರೂ ಆಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಪ್ತ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಎ.ಕೆ. ಶರ್ಮಾ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಇದರ ಬೆನ್ನಲ್ಲೇ ಮಾತನಾಡಿರುವ ಯೋಗಿ ಸಂಪುಟದ ಸಚಿವ ಸ್ವಾಮಿಪ್ರಸಾದ್ ಮೌರ್ಯ ಅವರು, ‘2022ರ ಚುನಾವಣೆ ಬಳಿಕ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು. ಎಲ್ಲ ಆಯ್ಕೆಗಳು ಮುಕ್ತವಾಗಿವೆ’ ಎಂದು ಹೇಳಿದ್ದಾರೆ.
‘ಈಗ ಯೋಗಿ ಮುಖ್ಯಮಂತ್ರಿಗಳು. ಮುಂದೆ ಏನಾಗುತ್ತೋ ಗೊತ್ತಿಲ್ಲ. 2022ರ ಚುನಾವಣೆ ಬಳಿಕ ಇನ್ನೊಬ್ಬರು ಮುಖ್ಯಮಂತ್ರಿ ಅಭ್ಯರ್ಥಿ ಆಗಬಹುದು. ಬಿಜೆಪಿ ಪ್ರಜಾಸತ್ತಾತ್ಮಕ ಪಕ್ಷ. ಶಾಸಕಾಂಗ ಪಕ್ಷ ಹಾಗೂ ವರಿಷ್ಠರು ಎಲ್ಲ ನಿರ್ಣಯಿಸುತ್ತಾರೆ’ ಎಂದು ಮೌರ್ಯ ತಿಳಿಸಿದ್ದಾರೆ.
ಈ ನಡುವೆ ಎ.ಕೆ. ಶರ್ಮಾ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ಮಾಡಿರುವುದು ನಾನಾ ಊಹಾಪೋಹಕ್ಕೆ ನಾಂದಿ ಹಾಡಿದೆ. ಶರ್ಮಾ ಅವರನ್ನು ಈ ಮುನ್ನ ಸಚಿವರನ್ನಾಗಿ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನೀತಿ ಇರುವ ಕಾರಣ ಅವರು ಸಚಿವರಾಗುವ ಸಾಧ್ಯತೆ ಕ್ಷೀಣಿಸಿದ್ದು, ಪಕ್ಷ ಸಂಘಟನೆಯ ಹೊಣೆ ವಹಿಸಲಾಗಿದೆ.
ಇನ್ನು ಸೋಮವಾರ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಉಪಾಧ್ಯಕ್ಷ ರಾಧಾಮೋಹನ ಸಿಂಗ್ ಅವರು ಮತ್ತೊಂದು ಸುತ್ತಿನ ಸಭೆ ನಡೆಸಲು ಲಖನೌಗೆ ಆಗಮಿಸುತ್ತಿದ್ದಾರೆ. ಈ ವಿದ್ಯಮಾನಗಳು ಕುತೂಹಲಕ್ಕೆ ಕಾರಣವಾಗಿವೆ.
ಇತ್ತೀಚೆಗೆ ಯೋಗಿ ಕುರ್ಚಿಗೆ ಸಂಚಕಾರ ಬಂದಿದೆ ಎನ್ನಲಾಗಿತ್ತು. ಆದರೆ ಮೋದಿ ಭೇಟಿ ಬಳಿಕ ಈ ಊಹಾಪೋಹಕ್ಕೆ ತೆರೆ ಬಿದ್ದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ