Karnataka Assembly Election- 2018
ಕಾಂಗ್ರೆಸ್ ಪಾಳೆಯದಿಂದ ನಾಪತ್ತೆಯಾಗಿರುವ ಬಳ್ಳಾರಿಯ ವಿಜಯನಗರ ಕ್ಷೇತ್ರದ ಜನಪ್ರತಿನಿಧಿ ಆನಂದ್ ಸಿಂಗ್ ಜಾರಿ ನಿರ್ದೇಶನಾಲಯದ ಬೆದರಿಕೆಗೆ ಮಣಿದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ಮೂಲಕ ಬೆದರಿಕೆಗಳು ಬರುತ್ತಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿ ಆರೋಪ ಮಾಡಿದ್ದಾರೆ.
ಬೆಂಗಳೂರು (ಮೇ 18) : ಕಾಂಗ್ರೆಸ್ ಪಾಳೆಯದಿಂದ ನಾಪತ್ತೆಯಾಗಿರುವ ಬಳ್ಳಾರಿಯ ವಿಜಯನಗರ ಕ್ಷೇತ್ರದ ಜನಪ್ರತಿನಿಧಿ ಆನಂದ್ ಸಿಂಗ್ ಜಾರಿ ನಿರ್ದೇಶನಾಲಯದ ಬೆದರಿಕೆಗೆ ಮಣಿದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ಮೂಲಕ ಬೆದರಿಕೆಗಳು ಬರುತ್ತಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿ ಆರೋಪ ಮಾಡಿದ್ದಾರೆ.
ಜೆಡಿಎಸ್ನ ನೂತನ ಜನಪ್ರತಿನಿಧಿಗಳು ತಂಗಿರುವ ಖಾಸಗಿ ಹೋಟೆಲ್ನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಸಂವಿಧಾನಿಕ ಹುದ್ದೆಗಳನ್ನು ದುರುಪಯೋಗ ಪಡಿಸಿ ಕೊಳ್ಳುತ್ತಿದೆ. ವಿಜಯನಗರ ಕ್ಷೇತ್ರದ ಆನಂದ್ ಸಿಂಗ್ ಕಾಂಗ್ರೆಸ್ ಪಾಳೆಯದಿಂದ ನಾಪತ್ತೆಯಾಗಿದ್ದಾರೆ.
ಕಾಂಗ್ರೆಸ್ ಶಾಸಕರೊಬ್ಬರಿಗೆ ಆನಂದ್ ಸಿಂಗ್ ಕೆಲ ಮಾಹಿತಿ ನೀಡಿದ್ದು, ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ಬಳಕೆ ಮಾಡಲಾಗುತ್ತಿದೆ. ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣ ಇರುವುದರಿಂದ ನನ್ನನ್ನು ಬಿಡುವುದಿಲ್ಲ. ದಯವಿಟ್ಟು ಕ್ಷಮಿಸಿ, ನಾನು ನನ್ನ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂಬುದಾಗಿ ಹೇಳಿಕೊಂಡಿದ್ದಾರೆ ಎಂದು ಹೇಳಿದರು.
ರಾಜಭವನವನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗುತ್ತಿದೆ. ಐಟಿ, ಇಡಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದವರು ಟೀಕಿಸಿದರು.