ಭದ್ರಾವತಿ : ಎರಡು ಇಂದಿರಾ ಕ್ಯಾಂಟೀನ್ ಆರಂಭ

By Kannadaprabha NewsFirst Published Oct 3, 2019, 11:15 AM IST
Highlights

ಭದ್ರಾವತಿಯ ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ ನಿಲ್ದಾಣದ ಸಮೀಪ ಮತ್ತು ಹೊಸಮನೆ ಸಂತೆ ಮೈದಾನದಲ್ಲಿ ಎರಡು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲಾಗಿದೆ. 

ಭದ್ರಾವತಿ [ಅ.03]:  ಕಡು ಬಡವರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವ ಸರ್ಕಾರ ಇಂದಿರಾ ಕ್ಯಾಂಟೀನ್‌ ಯೋಜನೆ ಜಾರಿಗೆ ತಂದಿದ್ದು, ನಗರದ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್‌ ಕರೆ ನೀಡಿದರು.

ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ ನಿಲ್ದಾಣದ ಸಮೀಪ ಮತ್ತು ಹೊಸಮನೆ ಸಂತೆ ಮೈದಾನದಲ್ಲಿ ನಿರ್ಮಿಸಲಾಗಿರುವ ನೂತನ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿ ಮಾತನಾಡಿದ ಅವರು, ಕಡು ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಶುಚಿ ಮತ್ತು ರುಚಿಕರವಾದ ಆಹಾರ ನೀಡಲು ಮುಂದಾಗಿ ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಆರಂಭಿಸಿತು. ಇದರಿಂದ ರಾಜ್ಯದಲ್ಲಿ ಸಾಕಷ್ಟುಕಡು ಬಡವರಿಗೆ ಅನುಕೂಲವಾಗಿದೆ. ಅಧಿಕಾರಿಗಳು ಸೂಕ್ತ ನಿರ್ವಹಣೆಯೊಂದಿಗೆ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ನಗರಸಭೆ ಪೌರಾಯುಕ್ತ ಮನೋಹರ್‌ ಮಾತನಾಡಿ, ನಗರಸಭೆ ವತಿಯಿಂದ ಕ್ಯಾಂಟೀನ್‌ ನಿರ್ಮಾಣಕ್ಕೆ ಸ್ಥಳವಾಕಾಶ, ಕುಡಿಯುವ ನೀರು, ವಿದ್ಯುತ್‌ ಸೌಲಭ್ಯಗಳನ್ನು ಮಾತ್ರ ಕಲ್ಪಿಸಿಕೊಡಲಾಗಿದೆ. ಕ್ಯಾಂಟೀನ್‌ ನಿರ್ವಹಣೆಗೆ ಸರ್ಕಾರದ ಮಟ್ಟದಲ್ಲಿ ಗುತ್ತಿಗೆ ನೀಡಲಾಗಿದೆ. ಪ್ರತಿ ದಿನ 500 ಮಂದಿಗೆ ಮಾತ್ರ ಉಪಹಾರ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗಿದ್ದು, ಬೆಳಗಿನ ಉಪಹಾರ ಕೇವಲ 5 ರು. ಹಾಗೂ ಊಟಕ್ಕೆ 10 ರು. ನಿಗದಿಪಡಿಸಲಾಗಿದೆ. ಪ್ರತಿ ವರ್ಷ ಸುಮಾರು 2 ಕೋಟಿ ರು. ವ್ಯಯವಾಗಲಿದೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ ನಾಗರಾಜ್‌, ಮುಖಂಡ ಎ.ಎನ್‌. ಸುರೇಶ್‌, ಕಂದಾಯಾಧಿಕಾರಿ ರಾಜ್‌ಕುಮಾರ್‌, ಎಂಜಿನಿಯರ್‌ ರಂಗರಾಜಪುರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

click me!