Chikkamagaluru: ನಗರಾಭಿವೃದ್ಧಿಗೆ 60 ಕೋಟಿ ವಿಶೇಷ ಅನುದಾನ ಬಿಡುಗಡೆ: ಶಾಸಕ ಸಿ.ಟಿ.ರವಿ

By Govindaraj SFirst Published Dec 19, 2022, 7:45 PM IST
Highlights

ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗೆ .60 ಕೋಟಿ ವಿಶೇಷ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಶಾಸಕ ಸಿ.ಟಿ. ರವಿ ಹೇಳಿದರು. ನಗರದ ಹೌಸಿಂಗ್‌ಬೋರ್ಡ್‌ ಬಡಾವಣೆಯಲ್ಲಿ ‘ಸಾರ್ವಜನಿಕರ ಬಳಿಗೆ ನಗರಸಭೆ’ ಶೀರ್ಷಿಕೆಯಡಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಚಿಕ್ಕಮಗಳೂರು (ಡಿ.19): ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗೆ .60 ಕೋಟಿ ವಿಶೇಷ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಶಾಸಕ ಸಿ.ಟಿ. ರವಿ ಹೇಳಿದರು. ನಗರದ ಹೌಸಿಂಗ್‌ಬೋರ್ಡ್‌ ಬಡಾವಣೆಯಲ್ಲಿ ‘ಸಾರ್ವಜನಿಕರ ಬಳಿಗೆ ನಗರಸಭೆ’ ಶೀರ್ಷಿಕೆಯಡಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿ, ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಜ.18ರಿಂದ 22 ರವರೆಗೆ ಚಿಕ್ಕಮಗಳೂರು ನಗರದಲ್ಲಿ ನಡೆಸಲು ಉದ್ದೇಶಿಸಿರುವ ಚಿಕ್ಕಮಗಳೂರು ಹಬ್ಬ ಆರಂಭಕ್ಕೂ ಮುನ್ನ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಹೇಳಿದರು.

ಚಿಕ್ಕಮಗಳೂರಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಮೆಡಿಕಲ್‌ ಕಾಲೇಜು ಆರಂಭವಾಗಬೇಕೆಂಬುದು ಜನರ ಬಹುದಿನಗಳ ಕನಸಾಗಿದ್ದು, ಈಗ ಅದು ಈಡೇರಿದೆ. ಈ ಕಾಮಗಾರಿಗೆ 630 ಕೋಟಿ ರು.ಬಿಡುಗಡೆಯಾಗಿದ್ದು, ಸಮೀಪದ ತೇಗೂರು ಗ್ರಾಮದ ಬಳಿ ನಿರ್ಮಾಣ ಆಗುತ್ತಿರುವ ಮೆಡಿಕಲ್‌ ಕಾಲೇಜು ಕಾಮಗಾರಿ ಭರದಿಂದ ಸಾಗಿದೆ. ಈ ವರ್ಷವೇ 140 ವಿದ್ಯಾರ್ಥಿಗಳು ಕಾಲೇಜಿನಲ್ಲಿ ದಾಖಲಾಗಿದ್ದಾರೆ ಎಂದು ತಿಳಿಸಿದರು. ನಗರಕ್ಕೆ ನೀರು ಪೂರೈಸುವ ಅಮೃತ್‌ ಯೋಜನೆ ಡಿಸೆಂಬರ್‌ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಮಾಚ್‌ರ್‍ ಅಂತ್ಯಕ್ಕೆ ಒಳಚರಂಡಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. 

ಸಿದ್ರಾಮುಲ್ಲಾಖಾನ್‌ ಎನ್ನಲು ರವಿ ಯಾರು?: ಸಿದ್ದರಾಮಯ್ಯ

ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಸಂಬಂಧಪಟ್ಟಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಿದ್ದೇನೆ ಎಂದು ಹೇಳಿದರು. ಬಸವನಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ದಂಟರಮಕ್ಕಿ ಬಳಿ ಇರುವ ತೋಟಗಾರಿಕೆ ಇಲಾಖೆಯ ಜಾಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ನಗರದ ಎಲ್ಲಾ 35 ವಾರ್ಡ್‌ಗಳಲ್ಲಿ ಎಲ್‌ಇಡಿ ದೀಪ ಅಳವಡಿಸುವ ಕೆಲಸಕ್ಕೆ ಟೆಂಡರ್‌ ಆಗಿದ್ದು, ಅವುಗಳ ನಿರ್ವಹಣೆ ಜವಾಬ್ದಾರಿಯನ್ನು ಗುತ್ತಿಗೆದಾರರೇ ನೋಡಿ ಕೊಳ್ಳಲಿದ್ದಾರೆಂದು ತಿಳಿಸಿದರು.

ನಗರದಲ್ಲಿನ ಕಸ ನಿರ್ವಹಣೆ ವಿಲೇವಾರಿ ಕುರಿತು ಒಂದು ನೂತನ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆ ಅನುಷ್ಠಾನ ಸಂಬಂಧಪಟ್ಟಂತೆ ಚೆನ್ನೈಯಿಂದ ಬಂದ ಒಂದು ತಂಡ ಪರಿಶೀಲಿಸಿದ್ದು, ಈ ಸಂಬಂಧ ಡಿಪಿಆರ್‌ ತಯಾರಿಸಲು ಹೇಳಿದ್ದೇನೆ. ಕಸ ನಿರ್ವಹಣೆ ಮತ್ತು ಸಂಗ್ರಹಣೆಗೆ ನಗರದ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌ ಮಾತನಾಡಿ, ಸಾರ್ವಜನಿಕರ ಸಮಸ್ಯೆ ನಿವಾರಿಸಲು ನಗರಸಭೆ ಕೈಗೊಂಡಿರುವ ‘ಸಾರ್ವಜನಿಕರ ಬಳಿಗೆ ನಗರಸಭೆ’ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಚಿಕ್ಕಮಗಳೂರು ನಗರಸಭೆ ಕೈಗೊಂಡಿದ್ದು, ಕಳೆದ 10 ತಿಂಗಳಲ್ಲಿ ಆಡಳಿತಕ್ಕೆ ಬಂದ ಆಡಳಿತ ಮಂಡಳಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಅನಧಿಕೃತವಾಗಿ ನಡೆಯುತ್ತಿದ್ದ ಗೋಹತ್ಯೆ ಕಸಾಯಿಖಾನೆಗಳಿಗೆ ಬೀಗ ಜಡಿದು ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ಸಿಗರಿಗೆ ದೇಶದ ಸೈನಿಕರ ಮೇಲೆ ನಂಬಿಕೆ ಇಲ್ಲ: ಸಿ.ಟಿ.ರವಿ

ನಗರಸಭೆ ಸದಸ್ಯೆ ಕವಿತಾ ಶೇಖರ್‌ ಪ್ರಾಸ್ತವಿಕವಾಗಿ ಮಾತನಾಡಿ, ಹೌಸಿಂಗ್‌ ಬೋರ್ಡ್‌ ಬಡಾವಣೆಗೆ ಇನ್ನೂ ಆಗಬೇಕಾದ ಹಲವು ಕೆಲಸಗಳನ್ನು ಮಾಡಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು. ಸಮಾರಂಭದಲ್ಲಿ ನಗರಸಭಾ ಉಪಾಧ್ಯಕ್ಷೆ ಉಮಾದೇವಿ ಕೃಷ್ಣಪ್ಪ, ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ. ವೆಂಕಟೇಶ್‌, ಸಿಡಿಎ ಅಧ್ಯಕ್ಷ ಆನಂದ್‌, ನಗರ ಆಶ್ರಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ನಗರಸಭೆ ಸದಸ್ಯರಾದ ಮಧುಕುಮಾರ್‌ರಾಜ್‌ ಅರಸ್‌, ಅರುಣ್‌ಕುಮಾರ್‌ ಹಾಗೂ ಪೌರಾಯುಕ್ತ ಬಿ.ಸಿ. ಬಸವರಾಜ್‌ ಉಪಸ್ಥಿತರಿದ್ದರು.

click me!