ಮೈಸೂರಿನ 9 ವರ್ಷದ ಬಾಲಕಿ ಡೆಂಘೀಗೆ ಬಲಿ

By Kannadaprabha NewsFirst Published Sep 10, 2021, 7:27 AM IST
Highlights

*  ಮೈಸೂರು ಜಿಲ್ಲೆಯ ಭೇರ್ಯ ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ
*  ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿ 
*  ಆಶಾ ಕಾರ್ಯಕರ್ತೆಯರ ಮೂಲಕ ಜಾಗೃತಿ 

ಭೇರ್ಯ(ಸೆ.10): ಡೆಂಘೀ ಜ್ವರಕ್ಕೆ ಒಂಬತ್ತು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವನಂಜು ಎಂಬವರ ಪುತ್ರಿ ಸ್ಪಂದನ (9) ಮೃತಪಟ್ಟ ಬಾಲಕಿ. ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿ ಭೇರ್ಯ ಗ್ರಾಮದ ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಹೆಚ್ಚಿನ ಚಿಕಿತ್ಸೆಗಾಗಿ ನಂತರ ಮೈಸೂರಿನ ಚೆಲುವಾಂಬ ಆಸ್ಪತ್ರೆಗಳ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಮಹೇಂದ್ರಪ್ಪ ತಿಳಿಸಿದ್ದಾರೆ.

ಗ್ರಾಮದಲ್ಲಿ ಜ್ವರದಿಂದ ಮೂರು ನಾಲ್ಕು ಮಕ್ಕಳು ಜ್ವರದಿಂದ ಬಳಲುತ್ತಿದ್ದು, ನಮ್ಮ ಆಶಾ ಕಾರ್ಯಕರ್ತೆಯರ ಮಾಹಿತಿ ಮೇರೆಗೆ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿಸಲಾಗಿ ಗ್ರಾಮದಲ್ಲಿ ಸ್ವಚ್ಛತೆಗಾಗಿ ತಾಪಂ ಇಓ ಹಾಗೂ ಸ್ಥಳೀಯ ಗ್ರಾಪಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಯಚೂರು: ಒಂದೇ ವಾರದಲ್ಲಿ 20 ಮಕ್ಕಳಲ್ಲಿ ಡೆಂಘೀ ಜ್ವರ

ಆರೋಗ್ಯ ಇಲಾಖೆಯ ಮೇಲ್ವಿಚಾರಕ ಕೆ.ವಿ. ರಮೇಶ್‌, ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ಇದ್ದರು.

ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟು ಕೊಳ್ಳಬೇಕು, ಅಗಾಗ್ಗೆ ನಮ್ಮ ಆಶಾ ಕಾರ್ಯಕರ್ತೆಯರ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಡೆಂಘೀ ಕಾರಣ ಪಕ್ಕದ ಜಿಲ್ಲೆಯ ಅರಕಲಗೂಡು ತಾಲೂಕಿನ ಗ್ರಾಮವೊಂದರ ಅಜ್ಜಿಯ ಮನೆಗೆ ಬಾಲಕಿ ಹೋಗಿದ್ದಳು, ಅಲ್ಲಿ ಡೆಂಘೀ ಕಾಣಿಸಿರಬೇಕು, ಯಾರೇ ಯಾಗಲಿ ಜ್ವರ ಬಂದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ವೈದ್ಯರ ಸಲಹೆ ಪಡೆದುಕೊಳ್ಳುವುದು ಸೂಕ್ತ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಮಹೇಂದ್ರಪ್ಪ ತಿಳಿಸಿದ್ದಾರೆ.  
 

click me!