Chamarajanagar: ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಕ್ರಮ: ಸಿಎಂ ಬೊಮ್ಮಾಯಿ

By Govindaraj SFirst Published Dec 14, 2022, 7:45 AM IST
Highlights

ರಾಜ್ಯದಲ್ಲೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ನಮ್ಮ ಸರ್ಕಾರ ಆರಂಭಿಸಿ ಯಶಸ್ವಿಯಾಗಿದ್ದು, ಜಿಲ್ಲೆಯ ಉಳಿದ ಎಲ್ಲಾ ಕೆರೆಗಳಿಗೆ ಹಂತ ಹಂತವಾಗಿ ನೀರು ತುಂಬಿಸಲು ಕ್ರಮಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಚಾಮರಾಜನಗರ (ಡಿ.14): ರಾಜ್ಯದಲ್ಲೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ನಮ್ಮ ಸರ್ಕಾರ ಆರಂಭಿಸಿ ಯಶಸ್ವಿಯಾಗಿದ್ದು, ಜಿಲ್ಲೆಯ ಉಳಿದ ಎಲ್ಲಾ ಕೆರೆಗಳಿಗೆ ಹಂತ ಹಂತವಾಗಿ ನೀರು ತುಂಬಿಸಲು ಕ್ರಮಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಚಾಮರಾಜನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಮಂಗಳವಾರ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ 1100 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಇಡೀ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಕೆರೆಗಳತುಂಬಿಸುವ ಸಮಗ್ರ ಅಭಿವೃದ್ಧಿ ಯೋಜನೆಗೆ ಎರಡು ಪ್ರಸ್ತಾವನೆಗಳು ಮುಂದಿದೆ. 754 ಕೋಟಿ ರು. ವೆಚ್ಚದ ಯೋಜನೆಗೆ ಈಗಾಗಲೇ ಅನುಮೋದನೆಗೆ ಕಳುಹಿಸಲಾಗಿದೆ. ಸಾವಿರ ಕೋಟಿ ರು. ಏವೆಚ್ಚದ ಯೋಜನೆಗೆ ವಿಸ್ತೃತ ಯೋಜನಾ ವರದಿ ತಯಾರಾಗಬೇಕಿದೆ. ಒಟ್ಟಾರೆ ಇಡೀ ಚಾಮರಾಜನಗರ ಜಿಲ್ಲೆಯ ಎಲ್ಲಾ ಭಾಗದ ಕೆರೆಗಳನ್ನು ಹಂತ ಹಂತವಾಗಿ ತುಂಬಿಸಲು ಅಗತ್ಯವಿರುವ ಯೋಜನೆಯನ್ನು ಮಂಜೂರು ಮಾಡಲಾಗುವುದು ಎಂದು ಅವರು ತಿಳಿಸಿದರು. ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಹೆಚ್ಚಳವಾಗಲಿದೆ. ಕೃಷಿ ಚಟುವಟಿಕೆಗಳಿಗೆ, ಕುಡಿಯುವ ನೀರಿನ ಪೂರೈಕೆಗೂ ಅನುಕೂಲವಾಗಲಿದೆ. ಆರೋಗ್ಯಕರ ಜನವಸತಿಗಳಿಗೆ ಉಪಯೋಗವಾಗಲಿದೆ. 

Chamarajanagar: ಗಡಿಯಲ್ಲಿ ಕಮಲ ಅರಳಿಸಲು ಸಚಿವ ಸೋಮಣ್ಣ ಮಾಸ್ಟರ್‌ ಪ್ಲಾನ್‌

ಹೀಗಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಂದಾಗಲಿದ್ದೇವೆ ಎಂದರು. ಚಾಮರಾಜನಗರ ಜಿಲ್ಲೆಯನ್ನು ಕೈಗಾರಿಕೆ ಜಿಲ್ಲೆಯಾಗಿ ಪರಿವರ್ತಿಸಲು ಸಾಧ್ಯವಿದೆ. ಬೀದರ್‌ ಜಿಲ್ಲೆಯಂತೆ ಇಲ್ಲಿಯೂ ಕೈಗಾರಿಕಾ ಹೊಸಹತು ಟೌನ್‌ಶಿಪ್‌ ನಿರ್ಮಾಣ ಮಾಡಬಹುದು. ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸಣ್ಣ, ಮಧ್ಯಮ ಕೈಗಾರಿಕೆಗಳನ್ನು ತೆರೆಯಬಹುದು. ಇದರಿಂದ ಯುವಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ ಎಂದು ಅವರು ತಿಳಿಸಿದರು. ಜಿಲ್ಲೆಗೆ ಕುಡಿಯುವ ನೀರಿನ ಯೋಜನೆಗೆ 102 ಕೋಟಿ ರು. ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪೌಷ್ಟಿಕತೆಯಂತಹ ಕಾರ್ಯಕ್ರಮಗಳಿಗೆ ಒತ್ತು ನೀಡಿದ್ದೇವೆ. ಜಿಲ್ಲೆಯ ಆರ್ಥಿಕ ಔದ್ಯೋಗಿಕ ಸಾಮಾಜಿಕ, ಶಿಕ್ಷಣ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದೆ. ಅಭಿವೃದ್ಧಿಯ ವಿಷಯದಲ್ಲಿ ಪಕ್ಷ ಬೇಧ ಇಲ್ಲ ಎಂದರು.

ಮಾದರಿ ವಿವಿ: ಚಾಮರಾಜನಗರ ಜಿಲ್ಲೆಗೆ ವಿಶ್ವವಿದ್ಯಾಲಯ ಮಂಜೂರು ಮಾಡಲಾಗಿದೆ. ಮಾದರಿ ವಿಶ್ವವಿದ್ಯಾಲಯವನ್ನಾಗಿಸಲು ಕ್ರಮ ವಹಿಸಲಾಗುವುದು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಿಲ್ಲೆಯ ಇತರ ಭಾಗಗಳಲ್ಲಿಯೂ ಅನುಷ್ಠಾನಗೊಳಿಸಲಾಗುವುದು ಎಂದರು. ಇದೇ ವೇಳೆ ಮುಖ್ಯಮಂತ್ರಿ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನೆ ಕುರಿತ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು. ಕಂದಾಯ ಸಚಿವ ಆರ್‌. ಅಶೋಕ, ಸದಸ್ಯರಾದ ಮರಿತಿಬ್ಬೇಗೌಡ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾ​ಧಿಕಾರದ ಅಧ್ಯಕ್ಷ ಜಿ.ನಿಜಗುಣರಾಜು, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ರಾಮಚಂದ್ರ, ನಗರಸಭಾ ಅಧ್ಯಕ್ಷ ಆಶಾ ನಟರಾಜು, ಸದಸ್ಯ ಚಂದ್ರಶೇಖರ್‌, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ. ಪ್ರಕಾಶ್‌, ಜಿಲ್ಲಾಧಿ​ಕಾರಿ ಡಿ.ಎಸ್‌. ರಮೇಶ್‌, ಜಿಪಂ ಸಿಇಓ ಕೆ.ಎಂ. ಗಾಯಿತ್ರಿ, ಎಸ್ಪಿ ಟಿ.ಪಿ.ಶಿವಕುಮಾರ್‌, ವಿಧಾನಪರಿಷತ್‌ ಮಾಜಿ ಸದಸ್ಯ ಪ್ರೊ. ಕೆ.ಆರ್‌. ಮಲ್ಲಿಕಾರ್ಜುನಪ್ಪ, ರೈತ ಮುಖಂಡ ಅಮ್ಮನಪುರ ಮಲ್ಲೇಶ್‌, ಜಿಪಂ ಮಾಜಿ ಸದಸ್ಯ ಆರ್‌. ಬಾಲರಾಜು, ಬಿಜೆಪಿ ಅಧ್ಯಕ್ಷ ಆರ್‌. ಸುಂದರ್‌, ಉಪಾಧ್ಯಕ್ಷ ಪಿ. ವೃಷಬೇಂದ್ರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನಾಗಶ್ರೀ ಪ್ರತಾಪ್‌, ಮಂಗಲ ಶಿವಕುಮಾರ್‌, ನಾರಾಯಣಪ್ರಸಾದ್‌, ಎಪಿಎಂಸಿ ಅಧ್ಯಕ್ಷ ಮನೋಜ್‌ ಪಟೇಲ್‌, ವಕ್ತಾರ ಶಿವಕುಮಾರ್‌, ಕೆ. ವೀರಭದ್ರಸ್ವಾಮಿ, ಇತರರು ಉಪಸ್ಥಿತರಿದ್ದರು.

click me!