ರಾಮನಗರ, ಕನಕಪುರದಲ್ಲಿ ಮೆಡಿಕಲ್ ಕಾಲೇಜಿಗೆ ಅರ್ಜಿ ಹಾಕಿರೋದೇ ತಪ್ಪು - ಡಾ.ಮಂಜುನಾಥ್

Published : Jul 16, 2024, 12:36 PM IST
ರಾಮನಗರ, ಕನಕಪುರದಲ್ಲಿ ಮೆಡಿಕಲ್ ಕಾಲೇಜಿಗೆ ಅರ್ಜಿ ಹಾಕಿರೋದೇ ತಪ್ಪು - ಡಾ.ಮಂಜುನಾಥ್

ಸಾರಾಂಶ

 ರಾಮನಗರ ಹಾಗೂ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಪ್ರಸ್ತಾವನೆಯನ್ನು ಎನ್​ಎಂಸಿ ತಿರಸ್ಕರಿಸಿರುವುದು ಮತ್ತು ರಾಮನಗರ ಜಿಲ್ಲೆಯ ಮರುನಾಮಕರಣ ವಿಚಾರವಾಗಿ ತಮ್ಮ ವಿರುದ್ಧ ಟೀಕೆ ಮಾಡಿದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಟಾಂಗ್ ಕೊಟ್ಟಿದ್ದಾರೆ.

 ರಾಮನಗರ :  ರಾಮನಗರ ಹಾಗೂ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಪ್ರಸ್ತಾವನೆಯನ್ನು ಎನ್​ಎಂಸಿ ತಿರಸ್ಕರಿಸಿರುವುದು ಮತ್ತು ರಾಮನಗರ ಜಿಲ್ಲೆಯ ಮರುನಾಮಕರಣ ವಿಚಾರವಾಗಿ ತಮ್ಮ ವಿರುದ್ಧ ಟೀಕೆ ಮಾಡಿದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಟಾಂಗ್ ಕೊಟ್ಟಿದ್ದಾರೆ.

ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿರಸ್ಕರಿಸಿರುವುದನ್ನು ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಸಮರ್ಥಿಸಿಕೊಂಡಿದ್ದಾರೆ. ಈ ವಿಚಾರವಾಗಿ ರಾಮನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಮೆಡಿಕಲ್ ಕಾಲೇಜಿಗೆ ಅರ್ಜಿ ಸಲ್ಲಿಸಿರುವುದೇ ತಪ್ಪು. ಅಲ್ಲಿಗೆ 600 ಹಾಸಿಗೆಗಳ ಆಸ್ಪತ್ರೆ ಬೇಕಿತ್ತು. ಆಸ್ಪತ್ರೆಯನ್ನು ಕಟ್ಟಿಯೇ ಇಲ್ಲ. ಬೋಧಕರನ್ನು ನೇಮಕ ಮಾಡಬೇಕು. ಅದನ್ನೂ ಮಾಡಿಲ್ಲ. ಇಷ್ಟು ಮಾಡದೆ ಅರ್ಜಿ ಹಾಕುವುದೇ ತಪ್ಪು ಎಂದು ಹೇಳಿದರು.

ಮೂಲ ಸೌಕರ್ಯ ಯಾವುದೂ ಇಲ್ಲ. ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಸದೇ ನಾವು ಲೋಕಸಭೆಯಲ್ಲಿ ಮಾತನಾಡಿದರೆ ಆಗುವುದಿಲ್ಲ. ಸುಮ್ಮನೇ, ‘ಇವರು ವೈದ್ಯರಾಗಿ ವಂಚಿಸುತ್ತಿದ್ದಾರೆ’ ಎಂದು ಆರೋಪಿಸುವುದರಲ್ಲಿ ಅರ್ಥವಿಲ್ಲ. ಇದು ರಾಜ್ಯ ಸರ್ಕಾರದ ಪ್ರಮಾದ ಎಂದು ಮಂಜುನಾಥ್ ಸ್ಪಷ್ಟಪಡಿಸಿದರು.

ರಾಮನಗರಕ್ಕೆ ಮರು ನಾಮಕರಣ ಮಾಡುವ ಬಗ್ಗೆ ಹಾಸನದವರು ಮಾತ್ರ ವಿರೋಧ ಮಾಡುತ್ತಿದ್ದಾರೆ ಎಂಬ ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ನಾವು 40 ವರ್ಷಗಳಿಂದ ಬೆಂಗಳೂರಿನಲ್ಲೇ ಇದ್ದೇವೆ. ಆಗ ಅವರೇ (ಬಾಲಕೃಷ್ಣ) ಬೆಂಗಳೂರಿನಲ್ಲಿ ಇರಲಿಲ್ಲ. ಹಿಂದೆ ರಾಮನಗರ ಜಿಲ್ಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯೇ ಆಗಿತ್ತು ಅಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಒಂದು ಸರಿಯಾದ ಮೆಡಿಕಲ್ ಕಾಲೇಜು ಮಾಡಲು ಇವರಿಂದ ಆಗಿಲ್ಲ. ವೈದ್ಯರನ್ನು ನೇಮಕ ಮಾಡಲಾಗಿಲ್ಲ. ಮೊದಲು ಅದನ್ನ ಮಾಡಲಿ ಎಂದು ಬಾಲಕೃಷ್ಣಗೆ ಟಾಂಗ್ ನೀಡಿದರು.

ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ವಿಚಾರವಾಗಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ಇತ್ತೀಚೆಗೆ ತಿರಸ್ಕರಿಸಿತ್ತು. ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿತ್ತು. ಇದು ಡಿಸಿಎಂ ಡಿಕೆ ಶಿವಕುಮಾರ್​​ಗೆ ಹಿನ್ನಡೆ ಎಂದೇ ವಿಶ್ಲೇಷಿಸಲಾಗಿತ್ತು. 

PREV
Read more Articles on
click me!

Recommended Stories

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್