Latest Videos

ಮಂಡ್ಯ ಕೇಂದ್ರೀಯ ವಿದ್ಯಾಲಯಕ್ಕೆ ಶೀಘ್ರದಲ್ಲೇ ಕಾಯಂ ಶಿಕ್ಷಕರ ನೇಮಕ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

By Kannadaprabha NewsFirst Published Jun 29, 2024, 5:45 PM IST
Highlights

ನಗರದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರು ಭರವಸೆ ನೀಡಿದ್ದಾರೆ.

ಮಂಡ್ಯ (ಜೂ.29): ನಗರದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರು ಭರವಸೆ ನೀಡಿದ್ದಾರೆ. ಈ ಬಗ್ಗೆ ಮಂಡ್ಯ ಸಂಸದ ಹಾಗೂ ಕೇಂದ್ರ ಭಾರೀ ಉಕ್ಕು ಮತ್ತು ಭಾರೀ ಕೈಗಾರಿಕೆ ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಾಡಿದ್ದ ಮನವಿಗೆ ತಕ್ಷಣವೇ ಸ್ಪಂದಿಸಿರುವ ಅವರು, ಬಹಳ ದಿನಗಳಿಂದ ಕಾಯಂ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಿದೆ. ಶೀಘ್ರವೇ ಕಾಯಂ ಶಿಕ್ಷಕರನ್ನು ನೇಮಿಸುವಂತೆ ಕುಮಾರಸ್ವಾಮಿ ಅವರು ಮನವಿ ಮಾಡಿದ್ದರು. 

ಅವರ ಮನವಿಗೆ ಸ್ಪಂದಿಸಸಿರುವ ಕೇಂದ್ರ ಶಿಕ್ಷಣ ಸಚಿವರು ಆದಷ್ಟು ಶೀಘ್ರವೇ ಕಾಯಂ ಶಿಕ್ಷಕರನ್ನು ನೇಮಕ ಮಾಡಲಾಗುವುದು, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೇ, ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಂಡ್ಯ ಕೇಂದ್ರೀಯ ವಿದ್ಯಾಲಯದಲ್ಲಿ ಕಟ್ಟಡ ಹಾಗೂ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣದ ಬಗ್ಗೆ ತಿಳಿಸಿರುವ ಧರ್ಮೇಂದ್ರ ಪ್ರಧಾನ್, ಕಾಲಮಿತಿಯೊಳಗೆ ನಿರ್ಮಾಣ ಕಾಮಗಾರಿಗಳನ್ನು ಪೂರೈಸಿ ಕೊಡಲಾಗುವುದು ಎಂದು ಅವರು ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ಶಾಲಾ ಮಕ್ಕಳ ಅಹವಾಲು ಕೇಳಿ, ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಚಾಟಿ

ಹೆಜ್ಜಾಲ-ಚಾಮರಾಜನಗರ ರೇಲ್ವೆ ಯೋಜನೆ ಬಜೆಟ್‌ಗೆ ಸೇರ್ಪಡೆ: ಹೆಜ್ಜಾಲ - ಚಾಮರಾಜನಗರ ನಡುವಿನ ರೇಲ್ವೆ ಯೋಜನೆಯನ್ನು ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಬಗ್ಗೆ ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರು ಬರೆದಿದ್ದ ಪತ್ರದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ರೇಲ್ವೆ ಸಚಿವರು, ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಹೆಜ್ಜಾಲ - ಚಾಮರಾಜನಗರ ನಡುವಿನ ಮಾರ್ಗವು ಕನಕಪುರ, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು ಮಾರ್ಗವಾಗಿ ಹಾದು ಹೋಗಲಿದೆ. 

ಯೋಜನೆಯು ಈ ಭಾಗದ ಜನರ ಬಹುದಿನಗಳ ಕನಸಾಗಿದೆ. ಹೊಸ ರೈಲ್ವೆ ಮಾರ್ಗವನ್ನು ಮಂಜೂರು ಮಾಡುವ ಕುರಿತು ಡಾ.ಕೆ.ಅನ್ನದಾನಿ ಅವರು ರೇಲ್ವೆ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಬಗ್ಗೆ ಕುಮಾರಸ್ವಾಮಿ ಅವರು ರೇಲ್ವೆ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಗಳ ಜನರಿಗೆ ಬಹಳಷ್ಟು ಅನುಕೂಲ ಆಗುವ ಈ ಯೋಜನೆಯನ್ನು ತುರ್ತಾಗಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ಅದರಂತೆ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಈ ಯೋಜನೆಯನ್ನು ಮುಂಬರುವ ಬಜೆಟ್‌ನಲ್ಲಿ ಸೇರ್ಪಡೆ ಮಾಡಿ ಜರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಿಗೆ ಭರವಸೆ ನೀಡಿದ್ದಾರೆ.

ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಆರ್‌.ಬಿ.ತಿಮ್ಮಾಪುರ

ಕೇಂದ್ರೀಯ ವಿದ್ಯಾಲಯದ ಕಟ್ಟಡ ಉದ್ಘಾಟನೆಗೆ ಸಜ್ಜು: ಕೇಂದ್ರೀಯ ವಿದ್ಯಾಲಯದ ಕಟ್ಟಡ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಜೂ.30ರೊಳಗೆ ಕಾಮಗಾರಿ ಕೆಲಸಗಳು ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ. ಕೇಂದ್ರೀಯ ವಿದ್ಯಾಲಯವು ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಮೈಷುಗರ್ ಪ್ರೌಢಶಾಲೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದೀಗ ಸ್ವಂತ ಕಟ್ಟಡದ ಕಾಮಗಾರಿ ಕೆಲಸಗಳು ಅಂತಿಮ ಹಂತದಲ್ಲಿದ್ದು ಇನ್ನೆರಡು ದಿನಗಳಲ್ಲಿ ಮುಗಿಯಲಿವೆ. ವಿದ್ಯಾಲಯದ ಕಾಮಗಾರಿ ಮಂದಗತಿಯಲ್ಲಿ ಸಾಗಿರುವುದನ್ನು ಕಂಡು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹಲವು ಸುತ್ತಿನ ಸಭೆಗಳನ್ನು ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದರು. ಇದೀಗ ಕಾಮಗಾರಿ ಪೂರ್ಣಗೊಳುತ್ತಿರುವ ಹಿನ್ನೆಲೆ ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವಂತೆ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಗಳ ಸಂಘಟನಾ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಈ ಪತ್ರದೊಂದಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಿಕೊಡುವಂತೆಯೂ ಪತ್ರದಲ್ಲಿ ತಿಳಿಸಿದ್ದಾರೆ.

click me!