
ಬೆಳಗಾವಿ (ಜ.20): ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಕರ್ನಾಟಕ ಸರ್ಕಾರದಿಂದ ಜ.21ರ ಬೆಳಗ್ಗೆ 10.30ಕ್ಕೆ 'ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ' ಸಮಾರಂಭ ಆಯೋಜಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷಾ ದೃಷ್ಟಿಯಿಂದ ನಾಳೆ ಬೆಳಗಾವಿ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧದ ಬಳಿ ಗಾಂಧಿ ಪುತ್ಥಳಿ ಅನಾವರಣ ಕಾರ್ಕ್ರಮಕ್ಕೆ ದೇಶದ ವಿವಿಧ ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರು, ಸಾರ್ವಜನಿಕರು, ಮಹಿಳೆಯರು ಹಾಗೂ ವೃದ್ಧರು ಸೇರಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯದ ಶಾಲೆಗಳಿಗೆ ರಜೆ ಘೋಷಣೆ ಮಾಡುವಂತೆ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು.
ಈ ಪ್ರಸ್ತಾವನೆಯನ್ನು ಪರಿಶೀಲನೆ ಮಾಡಿದ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು, ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ 'ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ' ಸಮಾರಂಭದ ಪ್ರಯುಕ್ತ ಲಕ್ಷಾಂತರ ಜನ ಭಾಗವಹಿಸುವ ಸಂಭವವಿರುತ್ತದೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿರುವ ಕಾರಣ ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮ ಕೈಗೊಳ್ಳುವ ಅಗತ್ಯವಿದೆ.
ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಯೇ ನಿಜವಾದ ಗಾಂಧಿ; ಇಂದಿರಾ, ರಾಹುಲ್ ನಕಲಿ ಗಾಂಧಿಗಳು; ಆರ್. ಅಶೋಕ
ಆದ್ದರಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್) 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯ (ನಗರ & ಗ್ರಾಮೀಣ)ದ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಜ.21ರ ಮಂಗಳವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜೊತೆಗೆ, ಈ ರಜಾ ಅವಧಿಯನ್ನು ಮುಂದಿನ ಶೈಕ್ಷಣಿಕ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.