Bengaluru Rains: ಮಳೆ ಅವಾಂತರದಿಂದ ‘ಬ್ರ್ಯಾಂಡ್‌ ಬೆಂಗಳೂರಿಗೆ’ ಧಕ್ಕೆ: ಎಸ್‌.ಎಂ.ಕೃಷ್ಣ

By Girish GoudarFirst Published May 20, 2022, 7:52 AM IST
Highlights

*  ಉದ್ದಿಮೆ ಸ್ಥಾಪನೆ, ಹೂಡಿಕೆದಾರರಿಗೆ ತಪ್ಪು ಸಂದೇಶ
*  ಬೆಂಗಳೂರಿನ ನಗರದ ಬ್ರ್ಯಾಂಡ್‌ ಉಳಿಸಿಕೊಳ್ಳಲು ಸಿಎಂಗೆ ಹಲವು ಸಲಹೆ
*  ಸಿಲಿಕಾನ್‌ ವ್ಯಾಲಿಗೆ ಪರ್ಯಾಯವಾಗಿ ಬೆಳೆದು ನಿಂತ ಬೆಂಗಳೂರು 
 

ಬೆಂಗಳೂರು(ಮೇ.20):  ರಾಜಧಾನಿ ಬೆಂಗಳೂರಿನ ಮಳೆ ಅವಾಂತರದ ಘಟನೆಗಳಿಂದಾಗಿ ‘ಬ್ರ್ಯಾಂಡ್‌ ಬೆಂಗಳೂರು’ ಹೆಸರಿಗೆ ಆತಂಕ ಸೃಷ್ಟಿಯಾಗಿದ್ದು, ಇದರಿಂದ ಭವಿಷ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಹಾಗೂ ರಾಜ್ಯಕ್ಕೆ ಬಂಡವಾಳ ಹೂಡಲು ಬಯಸುವ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ಬೆಂಗಳೂರಿಗೆ ಇರುವ ಬ್ರ್ಯಾಂಡ್‌ ಎಂಬ ಹೆಸರು ಉಳಿಸಿಕೊಳ್ಳುವ ಕುರಿತು ಕೆಲವು ಸಲಹೆಗಳನ್ನು ನೀಡಿದ್ದಾರೆ.

‘ನಾನು ಮುಖ್ಯಮಂತ್ರಿಯಾಗಿದ್ದಾಗ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಆದ್ಯತೆ ನೀಡಿ ವಿಪುಲ ಅವಕಾಶಗಳನ್ನು ನೀಡಿದ್ದರಿಂದ ಅಮೆರಿಕದ ಕ್ಯಾಲಿಫೋರ್ನಿಯಾ ನಗರದ ಸಿಲಿಕಾನ್‌ ವ್ಯಾಲಿಗೆ ಪರ್ಯಾಯವಾಗಿ ಬೆಂಗಳೂರು ನಗರ ಬೆಳೆದು ಯುವ ಜನಾಂಗಕ್ಕೆ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಕಾರಣವಾಯಿತು. ಇದರ ಪರಿಣಾಮವಾಗಿ ಬೆಂಗಳೂರು ಇಂದು ಬೃಹದಾಕಾರವಾಗಿ ಬೆಳೆದು ನಗರದ ವಿಸ್ತೀರ್ಣ ನಾಲ್ಕು ಪಟ್ಟು ಹೆಚ್ಚಾಗಿದೆ. ಬೆಂಗಳೂರು ನಗರ ಪಾಲಿಕೆ ಇಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿ ಬದಲಾಗಿ ಬೆಂಗಳೂರು ಸುತ್ತಮುತ್ತಲಿನ ಹಲವು ಬಡಾವಣೆಗಳನ್ನು ತನ್ನ ಒಡಲಲ್ಲಿ ಸೇರಿಸಿಕೊಂಡಿದೆ. ಇದರಿಂದ ಬೆಂಗಳೂರಿನ ಆದಾಯ ನಿರೀಕ್ಷೆಗೂ ಮೀರಿ ಹೆಚ್ಚಾಗಿ ಇಂದು ರಾಜ್ಯದ ಬಜೆಚ್‌ ಗಾತ್ರದಲ್ಲಿ ಅರ್ಧದಷ್ಟುಭಾಗ ಬೆಂಗಳೂರು ನಗರದಿಂದ ಹರಿದು ಬರುವಂತಾಗಿದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

Bengaluru Rains: ಶತಮಾನದ ದಾಖಲೆ ಮಳೆಗೆ ಬೆಂಗ್ಳೂರಲ್ಲಿ ತತ್ತರ

‘ಭವಿಷ್ಯದ ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿ ಗಮನದಲ್ಲಿ ಇಟ್ಟಕೊಂಡು ದೂರಗಾಮಿ ದೃಷ್ಟಿಯಿಂದ ಶಾಶ್ವತ ಕಾರ್ಯಕ್ರಮಗಳನ್ನು ರೂಪಿಸಿ ಬ್ರ್ಯಾಂಡ್‌ ಬೆಂಗಳೂರು ಹೆಸರನ್ನು ಉಳಿಸಿಕೊಳ್ಳಲು ದಿಟ್ಟಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ’ ಎಂದಿರುವ ಕೃಷ್ಣ ಅವರು ಕೆಳಕಂಡ ಸಲಹೆಗಳನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದಾರೆ.

ಸಿಎಂಗೆ ಎಸ್ಸೆಂಕೆ ಸಲಹೆಗಳು:

1. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಅಭಿವೃದ್ಧಿಗೆ ರಚಿಸಿದ್ದ ಬೆಂಗಳೂರು ಅಜೆಂಡಾ ಟಾÓ್ಕ… ಫೋರ್ಸ್‌ ಸಮಿತಿಯನ್ನು ಪುನರ್‌ರಚಿಸಿ ವಿವಿಧ ವಿಭಾಗಗಳ ತಜ್ಞರನ್ನು ಸೇರಿಸಿ ಅವರ ಸಲಹೆಗಳನ್ನು ಪಡೆದು ದೂರಗಾಮಿ ನೆಲೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಗೆ ನೀಲಿನಕ್ಷೆ ತಯಾರಿಸುವುದು.
2. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಿಸಿ ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಜ್ಞ ಅಧಿಕಾರಿಗಳ ತಂಡ ರಚಿಸುವುದು ಹಾಗೂ ರಾಜಕಾಲುವೆಗಳ ನಿರ್ವಹಣೆಗೆ ಆದ್ಯತೆ ಮೇಲೆ ಕ್ರಮ ವಹಿಸಿ ಮುಂಗಾರು ಮಳೆಯ ಆಗಮನಕ್ಕೂ ಮುನ್ನ ಸಮರೋಪದಿಯ ಕಾರ್ಯ ಕೈಗೊಳ್ಳುವುದು.
3. ಬೆಂಗಳೂರಿಗೆ ಪರ್ಯಾಯವಾಗಿ ಮೈಸೂರು, ತುಮಕೂರು ಮತ್ತು ಹುಬ್ಬಳ್ಳಿಯಂತಹ ನಗರಗಳನ್ನು ಗುರುತಿಸಿ ನೂತನ ಕೈಗಾರಿಕಾ ವಸಹಾತುಗಳ ಸ್ಥಾಪನೆಗೆ ಅವಕಾಶ ಕಲ್ಪಿಸಿ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡುವುದು.

Bengaluru Rains: ಬೆಂಗ್ಳೂರಲ್ಲಿ ಮುಂದುವರಿದ ಮಳೆ: ಧರೆಗುರುಳಿದ ಮರಗಳು..!

ನನ್ನ ಅಧಿಕಾರಾವಧಿಯಲ್ಲಿ ನಿರ್ಮಾಣಗೊಂಡಿದ್ದ ಮೈಸೂರು ಬೆಂಗಳೂರು ಹೆದ್ದಾರಿ ಇಂದು ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿದ್ದು, ಇದು ಮೈಸೂರು ನಗರ ಬೆಂಗಳೂರಿಗೆ ಪರ್ಯಾಯವಾಗಿ ಬೆಳವಣಿಗೆ ಹೊಂದಲು ಬಹಳ ಅವಕಾಶ ಕಲ್ಪಿಸುತ್ತದೆ.
4. ಬೆಂಗಳೂರು ವ್ಯಾಪ್ತಿಯ ಶಾಸಕರು ಸಂಸದರು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ವಲಯವಾರು ಸಮಸ್ಯೆಗಳನ್ನು ಪತ್ತೆ ಹಚ್ಚಿ ಅವುಗಳ ಶಾಶ್ವತ ಪರಿಹಾರಕ್ಕೆ ಕಾಲ ಮೀತಿಯಲ್ಲಿ ಕಾರ್ಯಕ್ರಮ ರೂಪಿಸಿ ಅದಕ್ಕೆ ತಕ್ಕ ಅನುದಾನ ಒದಗಿಸುವುದು.

ಮೇಲ್ಕಂಡ ಅಂಶಗಳ ಜೊತೆಗೆ ರಾಜ್ಯದ ಸರ್ವಪಕ್ಷಗಳ ನಾಯಕರ ಸಲಹೆ ಪಡೆದು ರಾಜ್ಯದ ಅಭಿವೃದ್ಧಿ ಮತ್ತು ಭವಿಷ್ಯದ ಜನಾಂಗದ ದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣ ಅವರು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
 

click me!