
ರಾಮನಗರ (ಡಿ.07): ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಇಂದು (ಡಿ.07) ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ರೆನಾಲ್ಟ್ ಡಸ್ಟರ್ ಕಾರು, ಮುಂದೆ ಸಾಗುತ್ತಿದ್ದ ಹಾಲಿನ ಟ್ಯಾಂಕರ್ಗೆ ಹಿಂದಿನಿಂದ ರಭಸವಾಗಿ ಗುದ್ದಿದ ಪರಿಣಾಮ, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಈ ದುರ್ಘಟನೆ ರಾಮನಗರ ಜಿಲ್ಲೆಯ ಸಂಗಬಸವನದೊಡ್ಡಿ ಬಳಿ ನಡೆದಿದೆ. ತೀವ್ರ ವೇಗದಲ್ಲಿದ್ದ ಕಾರು, ಹಾಲಿನ ಟ್ಯಾಂಕರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಪಾರ್ಕ್ ಉಂಟಾಗಿ, ಕಾರಿನ ಎಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಕಾರನ್ನು ಆವರಿಸಿಕೊಂಡು, ರೆನಾಲ್ಟ್ ಡಸ್ಟರ್ ಕಾರು ರಸ್ತೆಯಲ್ಲೇ ಸುಟ್ಟು ಕರಕಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ, ಕಾರಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಹೊರಬರಲು ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರೂ, ಅವರಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿವೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಮತ್ತು ಹೆದ್ದಾರಿ ಗಸ್ತು ಸಿಬ್ಬಂದಿ ಕಾರಿನಲ್ಲಿದ್ದ ಗಾಯಾಳುಗಳನ್ನು ರಕ್ಷಿಸಿ, ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಕಿ ಹೊತ್ತಿ ಉರಿಯುತ್ತಿದ್ದ ದೃಶ್ಯದಿಂದಾಗಿ ದಶಪಥ ಹೆದ್ದಾರಿಯ ಮೈಸೂರು-ಬೆಂಗಳೂರು ಮಾರ್ಗದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನಗಳು ನಿಧಾನಗತಿಯಲ್ಲಿ ಸಾಗಿದವು. ಈ ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಆಗಮಿಸಿ, ವಾಹನ ಸಂಚಾರ ಸುಗಮಗೊಳಿಸಲು ನೆರವಾದರು. ಜೊತೆಗೆ, ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕರೆಸಲಾಯಿತು. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಉರಿಯುತ್ತಿದ್ದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು. ಆದರೂ, ಕಾರು ಸಂಪೂರ್ಣವಾಗಿ ಸುಟ್ಟು ಕಬ್ಬಿಣದ ರಾಶಿಯಾಗಿ ಮಾರ್ಪಟ್ಟಿತ್ತು.
ಘಟನೆ ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಕೈಗೊಂಡಿದ್ದಾರೆ. ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಅತಿವೇಗದ ಚಾಲನೆಯಿಂದ ಈ ದುರಂತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಹೈಸ್ಪೀಡ್ ರಸ್ತೆಗಳಲ್ಲಿ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸುವುದು ಅನಿವಾರ್ಯವಾಗಿದೆ.