ಬೆಂಗಳೂರು ನಗರವನ್ನು ಗ್ಯಾಸ್‌ ಚೇಂಬರ್‌ ಆಗಲು ಬಿಡಲ್ಲ: ಈಶ್ವರ್‌ ಖಂಡ್ರೆ

Naveen Kodase   | Kannada Prabha
Published : Feb 27, 2026, 06:30 AM IST
Eshwar Khandre

ಸಾರಾಂಶ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಯು, ಜಲ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳ ಸಭೆ ನಡೆಸಿದರು. ದೆಹಲಿಯಂತೆ ಬೆಂಗಳೂರು ಗ್ಯಾಸ್ ಚೇಂಬರ್ ಆಗುವುದನ್ನು ತಡೆಯುವುದಾಗಿ ಅರಣ್ಯ ಸಚಿವರು ಹೇಳಿದ್ದಾರೆ.

ಬೆಂಗಳೂರು: ದೆಹಲಿ ಮಾದರಿಯಲ್ಲಿ ಬೆಂಗಳೂರನ್ನು ಮತ್ತೊಂದು ಗ್ಯಾಸ್‌ ಚೇಂಬರ್‌ ಆಗದಿರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೂ ಸಭೆ ನಡೆಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ರಾಜಾಜಿನಗರ ಶಾಸಕ ಸುರೇಶ್‌ ಕುಮಾರ್‌ ಕೋರಿಕೆ ಮೇರೆಗೆ ಗುರುವಾರ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಈಶ್ವರ್‌ ಖಂಡ್ರೆ, ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು, ಅದರ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರ ಅಗತ್ಯವಿದೆ. ನಗರದ ಹಸಿರು ಹೊದಿಕೆ ಹೆಚ್ಚಿಸಿ ವಾಯು ಗುಣಮಟ್ಟ ರಕ್ಷಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನ 11 ಕಡೆಗಳಲ್ಲಿ ಸ್ಥಾಪಿತ ಮತ್ತು 13 ಸಂಚಾರಿ ಘಟಕಗಳು ಈಗಾಗಲೇ ವಾಯು ಗುಣಮಟ್ಟ ಸೂಚ್ಯಂಕದ ಮೌಲ್ಯಮಾಪನ ಮಾಡುತ್ತಿದ್ದು, ಅದರ ಮಾಹಿತಿಯನ್ನು ಸಲ್ಲಿಸಿ. ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯ 100 ದಾಟಿದ್ದರೆ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಬೇಕು. ಆ ಸೂಚನೆ ಪಾಲಿಸದಿದ್ದರೆ ನಿಯಮದಂತೆ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸದ್ಯದಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಸಭೆ

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಚರ್ಚಿಸಿ, ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಬೆಂಗಳೂರು ನಗರದ ಎಲ್ಲ ಶಾಸಕರೂ ಸೇರಿದಂತೆ ಜನಪ್ರತಿನಿಧಿಗಳು, ನಗರ ಸ್ಥಳೀಯ ಸಂಸ್ಥೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಏಕ ಬಳಕೆ ಪ್ಲಾಸ್ಟಿಕ್‌ ತ್ಯಾಜ್ಯ ಸಮಸ್ಯೆ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ಮತ್ತು ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ಜಾಗೃತ ದಳ ರಚಿಸಿ ಕ್ರಮ ಕೈಗೊಳ್ಳಬೇಕು. ಬೆಂಗಳೂರು ಸೇರಿದಂತೆ ರಾಜ್ಯಲ್ಲಿರುವ ಎಷ್ಟು ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳಿವೆ ಎಂಬ ಪಟ್ಟಿ ಸಿದ್ಧಪಡಿಸಿ, ಅದರಲ್ಲಿ ಎಷ್ಟು ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಪರಿಶೀಲಿಸಬೇಕು. ಹಾಳಾಗಿರುವ ಘಟಕಗಳನ್ನು ದುರಸ್ತಿ ಮಾಡಿಸಬೇಕು. ಜತೆಗೆ ಎಲ್ಲೆಲ್ಲಿ ತ್ಯಾಜ್ಯ ನೀರು ಜಲಮೂಲಗಳಿಗೆ ಸೇರುತ್ತಿದೆ ಎಂಬುದನ್ನು ಪರಿಸರ ಇಲಾಖೆ ಖುದ್ದು ಪರಿಶೀಲಿಸಿ, ಒಂದು ತಿಂಗಳಲ್ಲಿ ವರದಿ ನೀಡುವಂತೆ ನಿರ್ದೇಶಿಸಿದರು.

ತುರ್ತು ಕ್ರಮ ಕೈಗೊಳ್ಳುವಂತೆ ಶಾಸಕ ಸುರೇಶ್ ಕುಮಾರ್ ಮನವಿ

ಇದಕ್ಕೂ ಮುನ್ನ ಮಾತನಾಡಿದ ಶಾಸಕ ಸುರೇಶ್‌ ಕುಮಾರ್‌, ಬೆಂಗಳೂರು ನಗರದ ರಸ್ತೆಗಳಲ್ಲಿ ಧೂಳಿನ ಪ್ರಮಾಣ ಹೆಚ್ಚಾಗಿ, ವಾಯು ಗುಣಮಟ್ಟ ಕ್ಷೀಣಿಸುತ್ತಿದೆ. ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ಆ ನಿಟ್ಟಿನಲ್ಲಿ ವೈದ್ಯರು ಬೆಂಗಳೂರಿನ ಹೊರವಲಯಕ್ಕೆ ಹೋಗುವಂತೆ ಸಲಹೆ ನೀಡುತ್ತಿದ್ದಾರೆ. ವಾಯು ಗುಣಮಟ್ಟ ಕಾಪಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್‌ ಪುಷ್ಕರ್‌, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು ಇತರರಿದ್ದರು.

PREV
Read more Articles on
click me!

Recommended Stories

Karnataka News Live: ಬೆಂಗಳೂರು ನಗರವನ್ನು ಗ್ಯಾಸ್‌ ಚೇಂಬರ್‌ ಆಗಲು ಬಿಡಲ್ಲ - ಈಶ್ವರ್‌ ಖಂಡ್ರೆ
ಚಿಕ್ಕಮಗಳೂರು: ಬಿಸಿಯೂಟದ ಕೋಣೆಯಲ್ಲಿ ಬೆಂಕಿ, ಮಕ್ಕಳ ಪ್ರಾಣ ಉಳಿಸಲು ಹೋಗಿ ಅಸ್ವಸ್ಥನಾದ ತೋಟದ ಕಾರ್ಮಿಕ!